ಚಿತ್ರದುರ್ಗ: ರಾಜ್ಯದ ಐದು ಮೀಸಲು ಲೋಕಸಭಾ ಕ್ಷೇತ್ರದ ಪೈಕಿ ಮೂರು ಕ್ಷೇತ್ರದಲ್ಲಿ ಭೋವಿ ಸಮುದಾಯದ ಸಮರ್ಥ ಅಭ್ಯರ್ಥಿಗೆ ರಾಜಕೀಯ ಪಕ್ಷಗಳು ಟಿಕೆಟ್ ನೀಡಬೇಕು ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮನವಿ ಮಾಡಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚಿತ್ರದುರ್ಗ, ಕೋಲಾರ ಹಾಗೂ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಭೋವಿ ಜನಾಂಗದ ಹಲವರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಸಮುದಾಯದ ಅಭ್ಯರ್ಥಿಗಳಿಗೆ ಪ್ರಾತಿನಿಧ್ಯ ನೀಡಬೇಕು. ಯಾವ ಪಕ್ಷವೂ ಸಮುದಾಯವನ್ನು ಗುರುತಿಸದೇ ಇದ್ದರೆ ಮುಂದಿನ ನಡೆಯ ಬಗ್ಗೆ ತೀರ್ಮಾನಿಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.
‘ಸಾಮಾಜಿಕ ನ್ಯಾಯಕ್ಕಾಗಿ ಹಕ್ಕೋತ್ತಾಯ ಮಾಡುವ ಉದ್ದೇಶದಿಂದ ಫೆ.27ರಂದು ರಾಜ್ಯ ಮಟ್ಟದ ಸಿದ್ದರಾಮೇಶ್ವರ ಜಯಂತ್ಯುತ್ಸವವನ್ನು ಚಿತ್ರದುರ್ಗದಲ್ಲಿ ಆಯೋಜಿಸಲಾಗಿದೆ. ಜನಾಂಗದ ಪ್ರಮುಖ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮುದಾಯದ ವಿಶ್ವಾಸವನ್ನು ರಾಜಕೀಯ ಪಕ್ಷಗಳು ಹುಸಿ ಮಾಡುವುದಿಲ್ಲ ಎಂಬ ನಂಬಿಕೆ ಇದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.