ಚಳ್ಳಕೆರೆ: ಹವಾಮಾನ ವೈಪರೀತ್ಯದಿಂದ ಉಷ್ಣಾಂಶ ಹೆಚ್ಚುತ್ತಿದ್ದು, ಚಿಕೂನ್ಗುನ್ಯ, ಮಲೇರಿಯಾ, ಡೆಂಗ್ಯೂ ಮುಂತಾದ ಸಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಹೀಗಾಗಿ ಗ್ರಾಮೀಣ ಮತ್ತು ನಗರಪ್ರದೇಶದ ಜನರಲ್ಲಿ ಆರೋಗ್ಯದ ಅರಿವು ಮೂಡಿಸಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಕಾಶಿ ಸೂಚಿಸಿದರು.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹವಾಮಾನ ವೈಪರೀತ್ಯ ಮತ್ತು ಮಾನವನ ಆರೋಗ್ಯ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸುಡು ಬಿಸಿಲಲ್ಲಿ ಹೆಚ್ಚು ತಿರುಗಾಟ ನಡೆಸದಂತೆ ಮಕ್ಕಳು ಹಾಗೂ ವೃದ್ಧರಿಗೆ ತಿಳಿವಳಿಕೆ ನೀಡಬೇಕು. ಬೇಸಿಗೆಯಲ್ಲಿ ಹೆಚ್ಚು ನೀರು ಕುಡಿಯುವುದನ್ನು ಅಭ್ಯಾಸ ಮಾಡಿಸಬೇಕು ಎಂದು ಹೇಳಿದರು.
‘ಹವಾಮಾನ ವೈಪರೀತ್ಯ ತಡೆಯಲು ಸಾಧ್ಯವಿಲ್ಲ. ಹೀಗಾಗಿ ನೀರಿನ ಸೌಲಭ್ಯ ಇರುವ ಕಡೆಗೆ ಗಿಡ-ಮರಗಳನ್ನು ಹೆಚ್ಚು ಬೆಳೆಸಬೇಕು’ ಎಂದು ಜಿಲ್ಲಾ ಆರೋಗ್ಯ ಮೇಲ್ವಿಚಾರಣಾಧಿಕಾರಿ ಸುರೇಶ್ಬಾಬು ಹೇಳಿದರು.
ಜಿಲ್ಲಾ ಮೇಲ್ವಿಚಾರಕ ಮಲ್ಲಿಕಾರ್ಜುನ, ಲೋಕೇಶ್ ನಾಯ್ಕ, ಆರೋಗ್ಯ ನಿರೀಕ್ಷಣಾಧಿಕಾರಿ ಬಿ.ಎಚ್.ರಾಜು ಮಾತನಾಡಿದರು. ಆಸ್ಪತ್ರೆಯ ಸಿಬ್ಬಂದಿ ಅಮೃತರಾಜು, ಆಶಾ ಕಾರ್ಯಕರ್ತೆಯರಾದ ಗೀತಾ, ಮಂಜುಳಾ, ಕವಿತಾ, ಶ್ವೇತಾ, ಸುರ್ವಣಮ್ಮ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.