ADVERTISEMENT

ಅಪೌಷ್ಟಿಕ ಮಕ್ಕಳ ಸಂಖ್ಯೆ ತಗ್ಗಿಸಲು ಸೂಚನೆ

ಪೋಷಣ್ ಮಾಸಾಚರಣೆ, ಮಾತೃವಂದನಾ ಸಪ್ತಾಹ ಕಾರ್ಯಕ್ರಮ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2021, 3:35 IST
Last Updated 4 ಸೆಪ್ಟೆಂಬರ್ 2021, 3:35 IST
ರಾಜ್ಯ ಸರ್ಕಾರದ ‘ನಮ್ಮ ಸಂಕಲ್ಪ ಪೌಷ್ಟಿಕ ಕರ್ನಾಟಕ’ ಘೋಷ ವಾಕ್ಯದ ಕರಪತ್ರವನ್ನು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಚಿತ್ರದುರ್ಗದಲ್ಲಿ ಶುಕ್ರವಾರ ಬಿಡುಗಡೆಗೊಳಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ನಂದಿನಿದೇವಿ ಇದ್ದರು.
ರಾಜ್ಯ ಸರ್ಕಾರದ ‘ನಮ್ಮ ಸಂಕಲ್ಪ ಪೌಷ್ಟಿಕ ಕರ್ನಾಟಕ’ ಘೋಷ ವಾಕ್ಯದ ಕರಪತ್ರವನ್ನು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಚಿತ್ರದುರ್ಗದಲ್ಲಿ ಶುಕ್ರವಾರ ಬಿಡುಗಡೆಗೊಳಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ನಂದಿನಿದೇವಿ ಇದ್ದರು.   

ಚಿತ್ರದುರ್ಗ: ‘ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ತಗ್ಗಿಸುವ ನಿಟ್ಟಿನಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯಪ್ರವೃತ್ತರಾಗಬೇಕು’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸಲಹೆ ನೀಡಿದರು.

ಪೋಷಣ್ ಅಭಿಯಾನ ಹಾಗೂ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಅಡಿ ಶುಕ್ರವಾರ ಪೋಷಣ್ ಮಾಸಾಚರಣೆ ಹಾಗೂ ಮಾತೃವಂದನಾ ಸಪ್ತಾಹ ಕಾರ್ಯ ಕ್ರಮ ಉದ್ಘಾಟನೆ ಹಾಗೂ ಕರಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

‘ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಕೂಡಿದ ಮಕ್ಕಳನ್ನು ಪೌಷ್ಟಿಕತೆ ಕಡೆಗೆ ತರುವಲ್ಲಿ ಹೆಚ್ಚಿನ ಶ್ರಮವಹಿಸಿ ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಿ’ ಎಂದು ಅಧಿಕಾರಿಗಳಿಗೆ
ಸೂಚಿಸಿದರು.

ADVERTISEMENT

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜ ನಾಯ್ಕ್, ‘ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ಅಡಿ ಗರ್ಭಿಣಿ, ಬಾಣಂತಿಯರಿಗೆ ₹ 5 ಸಾವಿರ ಸಹಾಯಧನವನ್ನು ಮೂರು ಕಂತುಗಳಲ್ಲಿ ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಯ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ’ ಎಂದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಕೆ.ಎಲ್. ವಿಶ್ವನಾಥ್, ಸಿಡಿಪಿಒ ಸುಧಾ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎ.ಎಂ. ವೀಣಾ ಇದ್ದರು.

ಮಾತೃವಂದನಾ: ₹ 17.57 ಕೋಟಿ ವರ್ಗಾವಣೆ

‘ಜಿಲ್ಲೆಯಲ್ಲಿ ಈವರೆಗೆ ಈ ಯೋಜನೆಯ ಅಡಿ 47,478 ಫಲಾನುಭವಿಗಳು ನೋಂದಣಿ ಆಗಿದ್ದಾರೆ. 39,769 ಫಲಾನುಭವಿಗಳು ಸಹಾಯಧನವನ್ನು ಪಡೆದಿದ್ದಾರೆ. ಮೊದಲ ಕಂತಿನಲ್ಲಿ 39,271 ಫಲಾನುಭವಿಗಳಿಗೆ ತಲಾ ₹ 1 ಸಾವಿರ, ಎರಡನೇ ಕಂತಿನಲ್ಲಿ 34,506 ಫಲಾನುಭವಿಗಳಿಗೆ ₹ 2ಸಾವಿರ ವರ್ಗಾವಣೆ ಆಗಿದೆ’ ಎಂದು ರಾಜ ನಾಯ್ಕ್ ತಿಳಿಸಿದರು.

‘ಮೂರನೇ ಕಂತಿನಲ್ಲಿ 30,450 ಫಲಾನುಭವಿಗಳಿಗೆ ತಲಾ ₹ 2 ಸಾವಿರದಂತೆ ನೀಡಲಾಗಿದೆ. ಒಟ್ಟು 47,448 ಫಲಾನುಭವಿಗಳಿಗೆ
₹ 17.57 ಕೋಟಿ ನೇರವಾಗಿ ಆನ್‍ಲೈನ್ ಮೂಲಕ ಫಲಾನುಭವಿಗಳ ಖಾತೆಗೆ ಪಾವತಿಸಲಾಗಿದೆ’ ಎಂದು ಸಭೆಗೆ ಮಾಹಿತಿ ನೀಡಿದರು.

...

ಜಿಲ್ಲೆ 2020-21ನೇ ಸಾಲಿನ ಪೋಷಣ್ ಮಾಸಾಚರಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿತ್ತು. ಈ ಬಾರಿ ಮೊದಲ ಸ್ಥಾನ ಪಡೆಯಲು ಪ್ರಯತ್ನಿಸಿ. ಅಂಗನವಾಡಿ ಮಕ್ಕಳಲ್ಲಿ ಶೌಚಾಲಯ ಬಳಕೆ ಕುರಿತು ಅರಿವು ಮೂಡಿಸಿ.

-ಕವಿತಾ ಎಸ್. ಮನ್ನಿಕೇರಿ, ಜಿಲ್ಲಾಧಿಕಾರಿ

.....

ಪೋಷಣ್ ಅಭಿಯಾನದಲ್ಲಿ ಗರ್ಭಿಣಿಯರು, ಬಾಣಂತಿಯರಿಗೆ ಹೆಚ್ಚು ಒತ್ತು ನೀಡಲಾಗಿದೆ. ಇದನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಅಧಿಕಾರಿಗಳು ಮುಂದಾಗಬೇಕು.

ಡಾ.ಕೆ. ನಂದಿನಿದೇವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.