ಚಿತ್ರದುರ್ಗ: ‘ಲಿಂಗಾಯತ ಶಿವಸಿಂಪಿ ಸಮುದಾಯವನ್ನು ಕೇಂದ್ರ ಸರ್ಕಾರ ಒಬಿಸಿ ಪಟ್ಟಿಯಲ್ಲಿ ಸೇರಿಸಿ ಎರಡು ದಶಕಗಳಾಗಿವೆ. ಇದನ್ನು ಪರಿಗಣಿಸಿ ಸಮುದಾಯಕ್ಕೆ ಪ್ರಮಾಣಪತ್ರ ನೀಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕ್ರಮ ಕೈಗೊಳ್ಳಬೇಕು’ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಒತ್ತಾಯಿಸಿದ್ದಾರೆ.
ಈ ಸಮುದಾಯಕ್ಕೆ ಮಹಾರಾಷ್ಟ್ರ ಸೇರಿ ಕೆಲ ರಾಜ್ಯಗಳಲ್ಲಿ ಈಗಾಗಲೇ ಒಬಿಸಿ ಪ್ರಮಾಣ ಪತ್ರ ನೀಡಲಾಗುತ್ತಿದೆ. ಇಲ್ಲಿಯೂ ಅದನ್ನು ಜಾರಿಗೆ ತಂದರೆ ಉನ್ನತ ವಿದ್ಯಾಭ್ಯಾಸ ಹಾಗೂ ಉದ್ಯೋಗ ಅವಕಾಶ ಪಡೆಯಲು ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.
‘ರಾಜ್ಯದಲ್ಲಿ 2 ಲಕ್ಷ ಜನಸಂಖ್ಯೆ ಹೊಂದಿರುವ ಲಿಂಗಾಯತ ಶಿವಸಿಂಪಿ ಸಮುದಾಯದವರು ಕುಲಕಸುಬಾದ ಹೊಲಿಗೆ, ಬಟ್ಟೆ ವ್ಯಾಪಾರ, ಸಂತೆ ವ್ಯಾಪಾರ ಸೇರಿ ಇತರೆ ಸಣ್ಣಪುಟ್ಟ ಕೆಲಸ ಮಾಡುತ್ತಿದ್ದಾರೆ. ಜೀವನ ನಿರ್ವಹಣೆ ಕಷ್ಟವಾಗಿದೆ. ರಾಜಕೀಯ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿದ್ದಾರೆ. ಇದನ್ನು ಪರಿಗಣಿಸಿ ಕೂಡಲೇ ಪ್ರಮಾಣಪತ್ರ ನೀಡಲು ಆದೇಶ ಹೊರಡಿಸಬೇಕು’ ಎಂದು ಅವರು ಕೋರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.