ಚಿತ್ರದುರ್ಗ: ‘ಸರ್ಕಾರದಿಂದ ಅರ್ಹ ಫಲಾನುಭವಿಗಳಿಗೆ ಪಡಿತರ ಧಾನ್ಯ ಪ್ರತಿ ತಿಂಗಳ 11ನೇ ತಾರೀಖಿನಿಂದ ವಿತರಿಸಲಾಗುತ್ತಿದ್ದು, ಗುಣಮಟ್ಟ ಪರಿಶೀಲಿಸಲು ರಾಜ್ಯ ಮಟ್ಟದಲ್ಲಿ 5 ತಂಡಗಳನ್ನು ರಚಿಸಲಾಗಿದೆ’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.
ಇಲ್ಲಿ ಮಾಧ್ಯಮದವರೊಂದಿಗೆ ಶನಿವಾರ ಮಾತನಾಡಿದ ಅವರು, ‘ಇಲಾಖೆ ಅಧಿಕಾರಿಗಳು ಜೂನ್ 9 ಮತ್ತು 10ರಂದು ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಅದಕ್ಕೂ ಮುನ್ನ ಕೆಲವು ಜಿಲ್ಲೆಗಳಿಗೆ ನಾನೂ ಭೇಟಿ ನೀಡಿ ಪರಿಶೀಲಿಸುತ್ತಿದ್ದೇನೆ. ನ್ಯೂನತೆ ಕಂಡು ಬಂದಲ್ಲಿ ಅದನ್ನು ಸರಿಪಡಿಸಲು ಕ್ರಮ ಕೈಗೊಂಡಿದ್ದೇವೆ’ ಎಂದು ಹೇಳಿದರು.
‘ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತೊಂದು ತಿಂಗಳ ಪಡಿತರ ಧಾನ್ಯ ಮಂಜೂರು ಮಾಡಿದ್ದು, ನಮ್ಮ ರಾಜ್ಯ ಸೇರಿ ಹೊರ ರಾಜ್ಯದಿಂದ ಬಂದಿರುವ ಅರ್ಹರಿಗೆ ಲೋಪವಾಗದ ರೀತಿಯಲ್ಲಿ ಪಡಿತರ ವಿತರಿಸಲಾಗುವುದು. ರಾಜ್ಯದಲ್ಲಿ 1.88 ಲಕ್ಷ ಪಡಿತರ ಚೀಟಿ ವಿತರಿಸಬೇಕಾಗಿದ್ದು, ಮುಖ್ಯಮಂತ್ರಿ ಬಳಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ’ ಎಂದರು.
‘ನನ್ನ ಮೇಲೆ ವಿಶ್ವಾಸವಿಟ್ಟು ಹಾಸನ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ. ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಅಲ್ಲಿನ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಲಹೆ ಪಡೆದು ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡುತ್ತೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.