ಚಿತ್ರದುರ್ಗ: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಾಯಕನಹಟ್ಟಿಯ ಕೆ.ಎಂ.ಶಿವಸ್ವಾಮಿ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಆಡಳಿತಾಧಿಕಾರಿಯಾಗಿದ್ದ ಬಿ.ಧನಂಜಯ ಅವರು ಅಧಿಕಾರ ಹಸ್ತಾಂತರಿಸಿದರು.
‘ರಾಜ್ಯದಲ್ಲಿ ಆರು ಕೋಟಿ ಕನ್ನಡಿಗರಿದ್ದರೂ ಸಾಹಿತ್ಯ ಪರಿಷತ್ತಿಗೆ 3.4 ಲಕ್ಷ ಸದಸ್ಯರಿದ್ದಾರೆ. ಪರಿಷತ್ತಿನ ಸದಸ್ಯರ ಸಂಖ್ಯೆ ಹೆಚ್ಚಿಸಲು ಕ್ರಮಕೈಗೊಳ್ಳುವ ಅಗತ್ಯವಿದೆ. ಸದಸ್ಯತ್ವ ಶುಲ್ಕವನ್ನು ₹ 500ರಿಂದ ₹ 250ಕ್ಕೆ ಇಳಿಕೆ ಮಾಡುವ ಬಗ್ಗೆ ಆಲೋಚಿಸಲಾಗುವುದು’ ಎಂದು ಕೆ.ಎಂ.ಶಿವಸ್ವಾಮಿ ತಿಳಿಸಿದರು.
‘ಕನ್ನಡದ ಕೆಲಸಗಳು ಗ್ರಾಮೀಣ ಪ್ರದೇಶಕ್ಕೂ ವಿಸ್ತರಣೆ ಆಗಬೇಕು. ನಗರ ಪ್ರದೇಶದಲ್ಲಿಯೂ ಚಟುವಟಿಕೆಗಳು ನಡೆಯಬೇಕು. ಗಡಿನಾಡು ಹಾಗೂ ಹಿಂದುಳಿದ ಪ್ರದೇಶಗಳಲ್ಲಿ ಹೆಚ್ಚಿನ ಕಾರ್ಯ ನಡೆಸುವ ಅಗತ್ಯವಿದೆ. ಮುಂದಿನ ಐದು ವರ್ಷಗಳಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿನ ಕನ್ನಡಿಗ ನಿರೀಕ್ಷೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು’ ಎಂದು ಆಶ್ವಾಸನೆ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ನಿಕಟಪೂರ್ವ ಅಧ್ಯಕ್ಷ ದೊಡ್ಡಮಲ್ಲಯ್ಯ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.