ಚಿತ್ರದುರ್ಗ: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದರಿಂದ ಬಂಡಾಯದ ಕಹಳೆ ಮೊಳಗಿಸಿದ ವಿಧಾನಪರಿಷತ್ ಮಾಜಿ ಸದಸ್ಯ ಜಿ.ರಘು ಆಚಾರ್ ಏ.14ರಂದು ಜೆಡಿಎಸ್ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ.
‘ನಾನು ಅಧಿಕಾರದ ಹಿಂದೆ ಹೋದವನಲ್ಲ. ಸ್ವಾಭಿಮಾನಕ್ಕೆ ಚ್ಯುತಿಯುಂಟು ಮಾಡಿದವರಿಗೆ ತಕ್ಕ ಉತ್ತರ ನೀಡಲಿದ್ದೇನೆ. ಪೂರ್ವ ಷರತ್ತು ವಿಧಿಸದೇ ಜೆಡಿಎಸ್ ಸೇರ್ಪಡೆಯಾಗುತ್ತಿದ್ದೇನೆ. ಟಿಕೆಟ್ ವಿಚಾರ ಇನ್ನೂ ತೀರ್ಮಾನವಾಗಿಲ್ಲ. ಪಕ್ಷ ಸೇರ್ಪಡೆಯಾದ ಬಳಿಕ ಇದು ನಿರ್ಧಾರವಾಗಲಿದೆ’ ಎಂದು ಜಿ.ರಘು ಆಚಾರ್ ಅವರು ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಟಿ.ಎ.ಶರವಣ ಮಾತನಾಡಿ, ‘ವಿಶ್ವಕರ್ಮ ಸಮುದಾಯಕ್ಕೆ ಸೇರಿದ ರಘು ಆಚಾರ್ ಅವರನ್ನು ಕಾಂಗ್ರೆಸ್ ನಿರ್ಲಕ್ಷ್ಯ ಮಾಡಿದೆ. ಈ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಸಿಗುತ್ತಿಲ್ಲ. ಅವರಿಗೆ ಆಗಿರುವ ಅನ್ಯಾಯ ಗಮನಕ್ಕೆ ಬಂದಿದೆ. ಅವರನ್ನು ಪಕ್ಷಕ್ಕೆ ಆಹ್ವಾನಿಸಲು ಮನೆಗೆ ಬಂದಿದ್ದೆ. ಬೇಷರತ್ತ ಆಗಿ ಜೆಡಿಎಸ್ ಸೇರಲು ಒಪ್ಪಿದ್ದಾರೆ. ಬೆಂಗಳೂರಿನ ಜೆ.ಪಿ.ಭವನದಲ್ಲಿ ಪಕ್ಷ ಸೇರ್ಪಡೆಗೆ ಆಗಲಿದ್ದಾರೆ’ ಎಂದು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.