ADVERTISEMENT

ರೈತರು ಗುಳೆ ಹೋಗುವುದನ್ನು ತಪ್ಪಿಸಿ

ಕೆಡಪಿ ಸಭೆಯಲ್ಲಿ ಶಾಸಕ ಟಿ.ರಘುಮೂರ್ತಿ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2018, 17:24 IST
Last Updated 5 ಡಿಸೆಂಬರ್ 2018, 17:24 IST
ಚಳ್ಳಕೆರೆ ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಟಿ. ರಘುಮೂರ್ತಿ ವಿವಿಧ ಇಲಾಖೆಗಳಿಂದ ಮಾಹಿತಿ ಪಡೆದರು
ಚಳ್ಳಕೆರೆ ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಟಿ. ರಘುಮೂರ್ತಿ ವಿವಿಧ ಇಲಾಖೆಗಳಿಂದ ಮಾಹಿತಿ ಪಡೆದರು   

ಚಳ್ಳಕೆರೆ: ನರೇಗಾ ಯೋಜನೆಯಡಿ ಕೆರೆ, ಕಾಲುವೆ, ಗೋಕಟ್ಟೆ, ರೈತರ ಹೊಲಗಳಿಗೆ ದಾರಿ ಇತರೆ ಅಭಿವೃದ್ಧಿ ಕಾಮಗಾರಿ ಕೆಲಸಗಳನ್ನು ತ್ವರಿತವಾಗಿ ಕೈಗೆತ್ತಿಕೊಂಡು, ದುಡಿಯುವ ಕೈಗಳಿಗೆ ಕೆಲಸ ನೀಡಿ ಗ್ರಾಮೀಣ ಜನರು ಗುಳೆ ಹೋಗುವುದನ್ನು ತಪ್ಪಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಜನಪ್ರತಿನಿಧಿ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಬಹುತೇಕ ಕೆರೆಗಳ ದಂಡೆಗಳು ದುಃಸ್ಥಿಯಲ್ಲಿದ್ದು, ಅವುಳಲ್ಲಿ ಹೂಳು ತುಂಬಿದ್ದು, ಸೀಮೆಜಾಲಿ ಗಿಡಗಳು ದಟ್ಟವಾಗಿ ಬೆಳೆದಿವೆ. ಇದರಿಂದಾಗಿ ಮಳೆ ನೀರು ಹೆಚ್ಚು ಸಂಗ್ರಹವಾಗುವುದಿಲ್ಲ. ಆದ್ದರಿಂದ ತುರ್ತಾಗಿ ಕೆರೆ ಕ್ರಿಯಾಯೋಜನೆ ತಯಾರಿಸಿ ಶೀಘ್ರ ಕಾಮಗಾರಿ ಪ್ರಾರಂಭಿಸಬೇಕು. ಕರಪತ್ರಗಳನ್ನು ಹಂಚುವ ಮೂಲಕ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಾಮಗಾರಿ ಕೆಲಸದ ಪ್ರಚಾರ ಕೈಗೊಳ್ಳುವ ಮೂಲಕ ನರೇಗಾ ಯೋಜನೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಅಧಿಕಾರಿಗಳಿಗೆ ಸಲಹೆ ನೀಡಿದರು.

ADVERTISEMENT

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕವಿತಾ, ಉಪಾಧ್ಯಕ್ಷೆ ತಿಪ್ಪಮ್ಮ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಗಿರಿಯಪ್ಪ, ಗದ್ದಿಗೆ ತಿಪ್ಪೇಸ್ವಾಮಿ, ವೀರೇಶ್, ರಂಜಿತ, ಎಚ್.ಆಂಜನೇಯ, ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ, ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣನಾಯ್ಕ, ಜಿಲ್ಲಾ ಪಂಚಾಯಿತಿ ಸಹಾಯಕ ಎಂಜಿನಿಯರ್‌ಗಳಾದ ಮುಜಿಬ್‍ರೆಹಮಾನ್, ಬೀಮಾನಾಯ್ಕ, ಕೃಷಿ ಅಧಿಕಾರಿ ಡಾ. ಮಾರುತಿ, ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ವಿರುಪಾಕ್ಷಪ್ಪ, ಭೂಸೇನಾ ನಿಗಮದ ಸಹಾಯಕ ಎಂಜಿನಿಯರ್ ಗೋವಿಂದರಾಜ್‍ಗುರಂ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜಪ್ಪ ಇದ್ದರು.

ಬೇಸಿಗೆಯವರೆಗೂ ಕಾಯಬೇಡಿ: ಬೇಸಿಗೆಯವರೆಗೆ ಕಾಯಬೇಡಿ, ಇಂದಿನಿಂದಲೇ ಕೊಳವೆ ಬಾವಿ ಹಾಗೂ ಟ್ಯಾಂಕರ್ ಮೂಲಕ ಜನರಿಗೆ ಕುಡಿಯುವ ನೀರು ಸರಬರಾಜು ಮಾಡಿ ಎಂದು ಎಂಜಿನಿಯರ್‌ಗಳಿಗೆ ಸೂಚಿಸಿದರು.

ಕುಡಿಯುವ ನೀರಿನ ಕೊರತೆ ಇದ್ದ ತಾಲ್ಲೂಕಿನ ಪರಶುರಾಂಪುರ, ನನ್ನಿವಾಳ, ಪಿ.ಮಹದೇವಪುರ ಗ್ರಾಮಗಳಲ್ಲಿ ಈಗಾಗಲೇ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದೇವೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಈಶ್ವರಪ್ರಸಾದ್ ಹೇಳಿದರು.

ನೀರಿನ ಘಟಕ ರಿಪೇರಿ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿರುವ ಶುದ್ಧ ನೀರಿನ ಘಟಕಗಳು ನಿರ್ವಹಣೆ ಇಲ್ಲದೆ ಕೆಟ್ಟು ಹೋಗಿವೆ. ಆದ ಕಾರಣ ಆ ಘಟಕಗಳನ್ನು ಕೂಡಲೇ ದುರಸ್ತಿಪಡಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.