ADVERTISEMENT

ಪರಿಷತ್ ಚುನಾವಣೆ ನಂತರ ಸಚಿವ ಸಂಪುಟ ವಿಸ್ತರಣೆ: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 12:33 IST
Last Updated 12 ಜೂನ್ 2020, 12:33 IST
ಸಚಿವ ಕೆ.ಎಸ್.ಈಶ್ವರಪ್ಪ
ಸಚಿವ ಕೆ.ಎಸ್.ಈಶ್ವರಪ್ಪ   

ಹೊಳಲ್ಕೆರೆ (ಚಿತ್ರದುರ್ಗ ಜಿಲ್ಲೆ): ‘ವಿಧಾನ ಪರಿಷತ್ ಚುನಾವಣೆಯ ನಂತರ ಸಚಿವ ಸಂಪುಟ ವಿಸ್ತರಣೆ ಆಗಲಿದೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ತಾಲ್ಲೂಕಿನ ಹಳೇಹಳ್ಳಿಯಲ್ಲಿ ಶುಕ್ರವಾರ ‘ಅಂತರ್ಜಲ ಚೇತನ’ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಮುಂದಿನ ತಿಂಗಳು ಸಚಿವ ಸಂಪುಟದಲ್ಲಿ ಹಲವು ಬದಲಾವಣೆಗಳು ಆಗಲಿವೆ. ಆಗ ಅನುಭವಿ ಶಾಸಕರಿಗೆ ಅವಕಾಶ ಸಿಗಲಿದೆ. ಇಲ್ಲಿನ ಶಾಸಕ ಎಂ.ಚಂದ್ರಪ್ಪ ನಮ್ಮ ಜತೆಗೆ ಸಚಿವರಾಗಬೇಕಿತ್ತು. ಎಲ್ಲಾ ಅರ್ಹತೆಗಳಿದ್ದರೂ ಅವರಿಗೆ ಸಚಿವ ಸ್ಥಾನ ಏಕೆ ತಪ್ಪಿತೋ ಗೊತ್ತಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಪ್ತರಾಗಿರುವ ಅವರು ಈ ಬಾರಿ ಮಂತ್ರಿ ಆಗುವುದರಲ್ಲಿ ಯಾವುದೇ ಅನುಮಾನ ಇಲ್ಲ. ಇಲ್ಲಿನ ಜನರ ಬಯಕೆಯಂತೆ ಅವರಿಗೆ ಅವಕಾಶ ಸಿಗಲಿ ಎಂಬುದು ನನ್ನ ಅಪೇಕ್ಷೆ ಕೂಡ’ ಎಂದರು. ಶಾಸಕ ಎಂ.ಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ, ಸಿಇಒ ಯೋಗೀಶ್ ಇದ್ದರು.

ಲಾಬಿಗೆ ಮಣಿಯಲ್ಲ (ಚಿತ್ರದುರ್ಗ ವರದಿ): ‘ವಿಧಾನಪರಿಷತ್‌ ಚುನಾವಣೆಗೆ ಟಿಕೆಟ್‌ ಕೇಳುವ ಅರ್ಹತೆ ಪ್ರತಿಯೊಬ್ಬ ಕಾರ್ಯಕರ್ತನಿಗೂ ಇದೆ. ಲಾಬಿಗೆ ಮಣಿದು ಟಿಕೆಟ್‌ ನೀಡುವ ಸಂಸ್ಕೃತಿ ಬಿಜೆಪಿಯಲ್ಲಿಲ್ಲ’ ಎಂದು ಈಶ್ವರಪ್ಪ ಹೇಳಿದರು.

ADVERTISEMENT

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರತಾಪಗೌಡ, ಮುನಿರತ್ನ, ರೋಷನ್‌ ಬೇಗ್‌ ಬಿಜೆಪಿಯವರಾಗಿ ಟಿಕೆಟ್‌ ಕೇಳುವುದು ತಪ್ಪಲ್ಲ. ಆದರೆ, ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷದಿಂದ ಬಂದಿದ್ದೇನೆ ಎಂದು ಒತ್ತಡ ಹೇರುವುದು ತಪ್ಪು. ಟಿಕೆಟ್‌ ಹಂಚಿಕೆಯಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮ. ಜಾತಿ ನೋಡಿ ಟಿಕೆಟ್‌ ಕೊಡುವ ಪದ್ಧತಿ ಬಿಜೆಪಿಯಲ್ಲಿ ಇಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.