ADVERTISEMENT

ನಾಯಕತ್ವ ಬದಲಾವಣೆ ಊಹಾಪೋಹ: ಆರೋಗ್ಯ ಸಚಿವ ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2020, 11:55 IST
Last Updated 3 ಆಗಸ್ಟ್ 2020, 11:55 IST
ಬಿ. ಶ್ರೀರಾಮುಲು
ಬಿ. ಶ್ರೀರಾಮುಲು   

ನಾಯಕನಹಟ್ಟಿ: ‘ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಷಯ ಊಹಾಪೋಹವಾಗಿದ್ದು, ಮುಂದಿನ ಮೂರು ವರ್ಷಗಳವರೆಗೂ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಮುಂದುವರಿಯಲಿದ್ದಾರೆ’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದರು.

ನಾಯಕನಹಟ್ಟಿ ಪಟ್ಟಣದ ಗುರುತಿಪ್ಪೇರುದ್ರಸ್ವಾಮಿ ಚಿಕ್ಕಕೆರೆಯಲ್ಲಿ ಸೋಮವಾರ ಭದ್ರಾ ಮೇಲ್ದಂಡೆ ಯೋಜನೆಯಡಿ 59 ಕೆರೆಗಳಿಗೆ ನೀರು ತುಂಬಿಸುವ ಪೈಪ್‌ಲೈನ್ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಈಚೆಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಶಶಿಕಲಾ ಜೊಲ್ಲೆ ಅವರು ಪೂರ್ವ ನಿರ್ಧರಿತ ಕಾರ್ಯಕ್ರಮದ ಉದ್ದೇಶದಿಂದ ದೆಹಲಿಗೆ ಭೇಟಿ ನೀಡಿದ್ದರು. ನಂತರ ರಾಜ್ಯದಲ್ಲಿ ಯಾವ ನಾಯಕರೂ ನಾಯಕತ್ವ ಬದಲಾವಣೆ ಬಗ್ಗೆ ಗುಪ್ತ ಸಭೆಗಳನ್ನು ನಡೆಸಿಲ್ಲ. ಮುಂದೆಯೂ ನಡೆಸುವುದಿಲ್ಲ. ಮುಖ್ಯಮಂತ್ರಿಯಾಗಿ ನಮ್ಮ ಪ್ರಶ್ನಾತೀತ ನಾಯಕ ಯಡಿಯೂರಪ್ಪನವರೇ ಮುಂದುವರಿಯಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ’ ಎಂದರು.

ADVERTISEMENT

‘ದಿನದ 24 ಗಂಟೆಯೂ ರಾಜ್ಯದ ಹಿತ ಬಯಸುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೋವಿಡ್ ಸೋಂಕು ತಗುಲಿರುವುದು ದುಃಖದ ಸಂಗತಿ. ಆದಷ್ಟು ಬೇಗ ಅವರು ಗುಣಮುಖರಾಗಿ ಬಂದು ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯವ ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.