ಚಳ್ಳಕೆರೆ: ಸಾರ್ವಜನಿಕರು ಸಲ್ಲಿಸಿದ್ದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ತಂಡ ತಾಲ್ಲೂಕು ಕಚೇರಿ ಮತ್ತು ಉಪ ನೋಂದಣಿ ಕಚೇರಿ ಮೇಲೆ ಶನಿವಾರ ದಿಢೀರ್ ದಾಳಿ ನಡೆಸಿ ಒಂದೆರೆಡು ಗಂಟೆ ಕಾಲ ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸಿತು.
‘ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಶುದ್ಧ ಕುಡಿಯುವ ನೀರಿನ ಸೌಲಭ್ಯ, ಶೌಚಾಲಯದ ವ್ಯವಸ್ಥೆ ಇಲ್ಲ. ಮತ್ತು ಸಣ್ಣ ಪುಟ್ಟ ಕೆಲಸಕ್ಕೂ ಜನರಿಂದ ಹಣ ವಸೂಲಿ ಮಾಡುತ್ತಾರೆ’ ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿ ಎದುರೇ ಸಾರ್ವಜನಿಕರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದರು.
ಲೋಕಾಯುಕ್ತ ಡಿವೈಎಸ್ಪಿ ಮೃತ್ಯುಂಜಯ ಮಾತನಾಡಿ, ‘ಸಾರ್ವಜನಿಕ ಸೇವೆಯನ್ನು ಪ್ರಾಮಾಣಿಕವಾಗಿ ಸಲ್ಲಿಸಬೇಕು. ಅಲ್ಲದೆ ಕೆಲಸದ ನಿಮಿತ್ತ ಬರುವ ಜನರಿಗೆ ಇಲಾಖೆಯಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು’ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಲೋಕಾಯುಕ್ತ ಇನ್ಸ್ಪೆಕ್ಟರ್ ಮುಸ್ತಾಕ್ ಅಹಮದ್, ಬಸವರಾಜ ಲಮಾಣಿ, ಸತೀಶ್, ವೀರೇಶ್, ರಾಜೇಶ್, ವೆಂಕಟೇಶ್ ಕುಮಾರ್, ಪುಷ್ಪಾ ಮಾರುತಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.