ADVERTISEMENT

ಜಯಣ್ಣ ಶ್ರದ್ಧಾಂಜಲಿ ಸಭೆ ಡಿ.20ಕ್ಕೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2020, 11:25 IST
Last Updated 15 ಡಿಸೆಂಬರ್ 2020, 11:25 IST
ಚಿತ್ರದುರ್ಗದ ಆಸ್ಕರ್‌ ಫೆರ್ನಾಂಡಿಸ್‌ ಶಾಲೆಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವ ಎಚ್‌.ಆಂಜನೇಯ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ನರಸಿಂಹರಾಜು, ಸದಸ್ಯ ಪ್ರಕಾಶ್‍ ಮೂರ್ತಿ, ಕಾಂಗ್ರೆಸ್‌ ಮುಖಂಡ ಡಿ.ಎನ್. ಮೈಲಾರಪ್ಪ, ದುರ್ಗೇಶ್ ಇದ್ದಾರೆ.
ಚಿತ್ರದುರ್ಗದ ಆಸ್ಕರ್‌ ಫೆರ್ನಾಂಡಿಸ್‌ ಶಾಲೆಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವ ಎಚ್‌.ಆಂಜನೇಯ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ನರಸಿಂಹರಾಜು, ಸದಸ್ಯ ಪ್ರಕಾಶ್‍ ಮೂರ್ತಿ, ಕಾಂಗ್ರೆಸ್‌ ಮುಖಂಡ ಡಿ.ಎನ್. ಮೈಲಾರಪ್ಪ, ದುರ್ಗೇಶ್ ಇದ್ದಾರೆ.   

ಚಿತ್ರದುರ್ಗ: ಹೋರಾಟಗಾರ ಎಂ.ಜಯಣ್ಣ ಅವರ ಶ್ರದ್ಧಾಂಜಲಿ ಸಭೆಯನ್ನು ಡಿ.20ರಂದು ಕ್ಯಾದಿಗೆರೆಯ ಸಮಾಧಿ ಸ್ಥಳದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಎಚ್‌.ಆಂಜನೇಯ ತಿಳಿಸಿದರು.

ನಗರದ ಐಯುಡಿಪಿ ಬಡಾವಣೆಯ ಆಸ್ಕರ್‌ ಫೆರ್ನಾಂಡಿಸ್‌ ಶಾಲೆಯ ಆವರಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಬಡವರು, ಶೋಷಿತರು, ರೈತರು ಹಾಗೂ ಪೌರಕಾರ್ಮಿಕರ ಹಕ್ಕುಗಳಿಗಾಗಿ ಹೋರಾಟ ನಡೆಸಿದ ಜಯಣ್ಣ ಅವರು ನ.9ರಂದು ನಮ್ಮನ್ನು ಅಗಲಿದ್ದಾರೆ. ಅವರ ಬೆಂಬಲಿಗರು, ಹೋರಾಟಗಾರರು ಸೇರಿ ಶ್ರದ್ದಾಂಜಲಿ ಸಭೆಯನ್ನು ಹಮ್ಮಿಕೊಂಡಿದ್ದೇವೆ. ಕೋವಿಡ್‌ ಇರುವ ಕಾರಣಕ್ಕೆ ಸರಳವಾಗಿ ಕಾರ್ಯಕ್ರಮ ನಡೆಸಲಾಗುತ್ತಿದೆ’ ಎಂದು ಹೇಳಿದರು.

ADVERTISEMENT

‘ಜಯಣ್ಣ ಅವರು ದಲಿತ ಸಮುದಾಯಕ್ಕೆ ಸೀಮಿತವಾದ ನಾಯಕರಾಗಿರಲಿಲ್ಲ. ಬಡವರು ಹಾಗೂ ಶೋಷಿತರ ಪರವಾಗಿ ಧ್ವನಿ ಎತ್ತಿದ್ದರು. ಬಡವರಿಗೆ ಶಿಕ್ಷಣ ಹಾಗೂ ಭೂಮಿ ಕೊಡಿಸುವಲ್ಲಿ ಶ್ರಮಿಸಿದ ಅಪ್ರತಿಮ ಹೋರಾಟಗಾರ. ಅವರ ನೆನಪನ್ನು ಶಾಶ್ವತವಾಗಿ ಉಳಿಸಲು ಸ್ಮಾರಕ ನಿರ್ಮಿಸಲಾಗುತ್ತಿದೆ. ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸಲು ಟ್ರಸ್ಟ್‌ ರಚಿಸಲಾಗಿದೆ. ಜಯಣ್ಣ ಅವರ ಪುತ್ರ ಜೆ.ಪ್ರಸನ್ನಕುಮಾರ್‌ ಕಾರ್ಯದರ್ಶಿಯಾಗಿದ್ದಾರೆ’ ಎಂದರು.

‘ರಾಜ್ಯದ ಪ್ರತಿ ಜಿಲ್ಲೆಯಿಂದಲೂ ಜಯಣ್ಣ ಅವರ ಅಭಿಮಾನಿಗಳು ಕಾರ್ಯಕ್ರಮಕ್ಕೆ ಬರಲಿದ್ದಾರೆ. ಊಟದ ವ್ಯವಸ್ಥೆ, ರಸ್ತೆ ನಿರ್ಮಾಣ ಸೇರಿ ಸಿದ್ಧತೆಗೆ ತಂಡಗಳನ್ನು ರಚಿಸಲಾಗಿದೆ. ಮೆಮೋರಿಯಲ್‌ ಟ್ರಸ್ಟಿನ ರೂಪುರೇಷೆಯ ಬಗ್ಗೆ ಸಮಾನ ಮನಸ್ಕರು ಸೇರಿ ತೀರ್ಮಾನ ಮಾಡುತ್ತೇವೆ’ ಎಂದು ಮಾಹಿತಿ ನೀಡಿದರು.

‘ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದ ಎ.ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು, ಕವಿ ಡಾ.ಸಿದ್ದಲಿಂಗಯ್ಯ, ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ, ಶಾಸಕರಾದ ಜಿ.ಎಚ್‌. ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ಪ್ರೊ.ಲಿಂಗಣ್ಣ ಭಾಗವಹಿಸಲಿದ್ದಾರೆ’ ಎಂದು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ನರಸಿಂಹರಾಜು, ಸದಸ್ಯ ಪ್ರಕಾಶ್‍ ಮೂರ್ತಿ, ಕಾಂಗ್ರೆಸ್‌ ಮುಖಂಡ ಡಿ.ಎನ್. ಮೈಲಾರಪ್ಪ, ದುರ್ಗೇಶ್ ಸೇರಿ ಅನೇಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.