ADVERTISEMENT

ಮಾಡಾಳ್ ಪ್ರಕರಣ ಕುರಿತು ವರಿಷ್ಠರಿಗೆ ಮಾಹಿತಿ: ಕ್ರಮದ ಬಗ್ಗೆ ಪಕ್ಷ ನಿರ್ಧಾರ– ಸಿಎಂ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2023, 8:31 IST
Last Updated 4 ಮಾರ್ಚ್ 2023, 8:31 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಚಿತ್ರದುರ್ಗ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆ ಎಸ್ ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪಕ್ಕೆ ಗುರಿಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣದ ಕುರಿತು ವರಿಷ್ಠರಿಗೆ ಕೂಲಂಕಷ ಮಾಹಿತಿ ನೀಡಲಾಗಿದೆ. ಅವರ ವಿರುದ್ಧದ ಕ್ರಮದ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುರುಘಾ ಮಠದ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ಪ್ರಕರಣದ ಕುರಿತು ಪಕ್ಷಕ್ಕೆ ಎಲ್ಲ ಮಾಹಿತಿ ಇದೆ. ಎಲ್ಲ ಬೆಳವಣಿಗೆಯನ್ನು ಪಕ್ಷ ಗಮನಿಸುತ್ತಿದೆ. ನಾನೂ ಎಲ್ಲ ವಿಚಾರ ತಿಳಿಸಿದ್ದೇನೆ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

'ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಸಚಿವರೊಬ್ಬರ ವಿಧಾನಸೌಧದ ಕಚೇರಿಯಲ್ಲಿ ₹ 2 ಲಕ್ಷ ಹಣ ಪತ್ತೆಯಾಗಿತ್ತು. ಆಗ ಸಿದ್ದರಾಮಯ್ಯ ಅವರು ಏಕೆ ರಾಜೀನಾಮೆ ನೀಡಲಿಲ್ಲ? ಇಂತಹ ಪ್ರಕರಣವನ್ನು ಮುಚ್ಚಿ ಹಾಕುವ ಉದ್ದೇಶದಿಂದ ಲೋಕಾಯುಕ್ತವನ್ನು ದುರ್ಬಲಗೊಳಿಸಿದ್ದೇ ಸಿದ್ದರಾಮಯ್ಯ. ಈ ಬಗ್ಗೆ ಮಾತನಾಡಲು ಅವರಿಗೆ ಯಾವುದೇ ನೈತಿಕ ಹಕ್ಕು ಇಲ್ಲ' ಎಂದು ಹೇಳಿದರು.

ADVERTISEMENT

'ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿದೆ. ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿ ತನಿಖೆಗೆ ಸಹಕಾರ ನೀಡುತ್ತಿರುವುದೇ ಇದಕ್ಕೆ ಸಾಕ್ಷಿ. ಭ್ರಷ್ಟಾಚಾರದ ವಿರುದ್ಧ ಪಕ್ಷಾತೀತವಾಗಿ ಕ್ರಮ ಕೈಗೊಳ್ಳಲಾಗುವುದು. 59 ಪ್ರಕರಣಗಳನ್ನು ಮುಚ್ಚಿ ಹಾಕಿದ ಕಾಂಗ್ರೆಸ್ ತನ್ನ ಪಾಪ ತೊಳೆದುಕೊಳ್ಳಲು ಹೀಗೆ ಆರೋಪ ಮಾಡುತ್ತಿದೆ' ಎಂದು ಕಿಡಿಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.