
ಚಿತ್ರದುರ್ಗ: ‘ಶಾಲೆಗಳಲ್ಲಿ ಬಿಸಿಯೂಟಕ್ಕೆ ಮೊಟ್ಟೆ ವಿತರಣೆ ಕಡ್ಡಾಯವಾಗಿದೆ. ತಾರತಮ್ಯ, ವಿಳಂಬ ಕಂಡು ಬಂದಲ್ಲಿ ಸೂಕ್ತ ಕ್ರಮ ವಹಿಸಲಾಗುತ್ತದೆ’ ಎಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಎಚ್ಚರಿಕೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆ ಬಳಿಕ ಮಾತನಾಡಿದ ಅವರು, ‘ಕೆಲವು ಶಾಲೆಗಳಲ್ಲಿ ಬಿಸಿಯೂಟದ ಸಂದರ್ಭದಲ್ಲಿ ಮೊಟ್ಟೆ ವಿತರಣೆ ಮಾಡದಿರುವುದು ಆಯೋಗದ ಗಮನಕ್ಕೆ ಬಂದಿದೆ. ಈ ವಿಚಾರದಲ್ಲಿ ಲೋಪ ಆಗದಂತೆ ಎಚ್ಚರವಹಿಸಿ’ ಎಂದು ಸೂಚಿಸಿದರು.
‘ಪೌಷ್ಟಿಕ ಆಹಾರವಾದ ಮೊಟ್ಟೆ, ಮಕ್ಕಳ ದೈಹಿಕ ಬೆಳವಣಿಗೆಗೆ ಅಗತ್ಯವಾಗಿದೆ. ಶಾಲೆಗಳಲ್ಲಿ ತಾರತಮ್ಯ ಮಾಡದೇ ಕಡ್ಡಾಯವಾಗಿ ಮೊಟ್ಟೆ ವಿತರಣೆಗೆ ಆಯೋಗದಿಂದ ಸೂಚನೆ ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗರ್ಭಿಣಿಯರು ಹಾಗೂ 3 ವರ್ಷದ ಒಳಗಿನ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಈ ಆಹಾರದ ಗುಣಮಟ್ಟ ಕಾಪಾಡುವಂತೆ ನಿರ್ದೇಶನ ನೀಡಲಾಗಿದೆ’ ಎಂದು ಹೇಳಿದರು.
‘ಸೀಬಾರ ಸಮೀಪದ ಮೇದಾರ ಕೇತೇಶ್ವರ ಮಠದಲ್ಲಿ ಬಾಡಿಗೆ ಪಡೆದು ನಡೆಸುತ್ತಿರುವ ಇಂದಿರಾ ಗಾಂಧಿ ವಸತಿ ಶಾಲೆಗೆ ಆಯೋಗ ಭೇಟಿ ನೀಡಿತ್ತು. ಕನಿಷ್ಠ ಮೂಲ ಸೌಕರ್ಯ ಇಲ್ಲದೆ, 350ಕ್ಕೂ ಹೆಚ್ಚು ಮಕ್ಕಳು ನೆಲದ ಮೇಲೆ ಕುಳಿತು ಪಾಠ ಕೇಳುತ್ತಿದ್ದಾರೆ. ಅಡುಗೆ ಮನೆಯಲ್ಲಿ ಯಾವುದೇ ಶುಚಿತ್ವ ಕಾಪಾಡಿಕೊಂಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
‘ಗ್ರಂಥಾಲಯ ಹಾಗೂ ಕಂಪ್ಯೂಟರ್ ಸೌಲಭ್ಯವೂ ಇಲ್ಲ. ಸರ್ಕಾರದಿಂದ ತಿಂಗಳಿಗೆ ಲಕ್ಷಾಂತರ ರೂಪಾಯಿ ಬಾಡಿಗೆ ನೀಡಲಾಗುತ್ತಿದೆ. ಆದರೆ ಅದಕ್ಕೆ ತಕ್ಕಂತೆ ಸೌಲಭ್ಯಗಳು ಇಲ್ಲ. ಇದನ್ನು ಗಮನಿಸಿದ ಆಯೋಗ ಕ್ರೈಸ್ ಕಾರ್ಯನಿರ್ವಾಹಕ ನಿರ್ದೇಶಕರಿಂದ ಸ್ಪಷ್ಟನೆ ಕೋರಿದೆ. ಒಂದು ವೇಳೆ ಅಧಿಕಾರಿಗಳ ತಪ್ಪು ಕಂಡುಬಂದರೆ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ತಿಳಿಸಿದರು.
‘ನ್ಯಾಯಬೆಲೆ ಅಂಗಡಿಯಲ್ಲಿ ಭ್ರಷ್ಟಾಚಾರ ತಡೆಗಟ್ಟಲು ಹಾಗೂ ಸುಗಮವಾಗಿ ಆಹಾರ ಧಾನ್ಯಗಳ ವಿತರಣೆಗೆ ಆಯೋಗ ಕ್ರಮ ಕೈಗೊಳ್ಳುತ್ತಿದೆ. ಇದಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಆಯೋಗದ ಅಧ್ಯಕ್ಷರು, ಸದಸ್ಯರು ಸೇರಿದಂತೆ ಆಹಾರ ಇಲಾಖೆ ಅಧಿಕಾರಿಗಳ ಹೆಸರು ಹಾಗೂ ಮೊಬೈಲ್ ನಂಬರ್ ಸಹಿತ ಫಲಕಗಳ ಅಳವಡಿಕೆಗೆ ಸೂಚನೆ ನೀಡಲಾಗಿದೆ’ ಎಂದರು.
‘ಪ್ರತಿ ನ್ಯಾಯಬೆಲೆ ಅಂಗಡಿಗಳು ಮಂಗಳವಾರ ಹೊರತುಪಡಿಸಿ ಪ್ರತಿದಿನವು ಬಾಗಿಲು ತೆರೆಯಬೇಕು. ಒಂದು ದೇಶ ಹಾಗೂ ಒಂದು ಪಡಿತರ ಚೀಟಿ ವ್ಯವಸ್ಥೆ ಜಾರಿಯಲ್ಲಿದೆ. ಯಾರೇ ವಲಸಿಗ ಕಾರ್ಮಿಕರು ಹತ್ತಿರದ ಪಡಿತರ ಅಂಗಡಿಯಲ್ಲಿ ಆಹಾರ ಧಾನ್ಯಗಳನ್ನು ಪಡೆಯಬಹುದು. ಉಚಿತ ಆಹಾರ ಧಾನ್ಯಗಳೊಂದಿಗೆ ಸೋಪು, ಎಣ್ಣೆ ಸೇರಿದಂತೆ ಇತರೆ ವಸ್ತುಗಳನ್ನು ಖರೀದಿ ಮಾಡುವಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಒತ್ತಾಯ ಮಾಡುವಂತಿಲ್ಲ’ ಎಂದು ಸ್ಪಷ್ಟಪಡಿಸಿದರು.
‘ಜಿಲ್ಲೆಯಲ್ಲಿ ಆಹಾರ ಸರಬರಾಜು ಹಾಗೂ ವಿತರಣೆಯಲ್ಲಿ ಲೋಪದೋಷಗಳ ಕುರಿತು ಸಾರ್ವಜನಿಕರು ಅಹವಾಲು ಸಲ್ಲಿಸಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕುಂದು ಕೊರತೆ ನಿವಾರಣಾ ಅಧಿಕಾರಿಯನ್ನು ಪ್ರತ್ಯೇಕವಾಗಿ ನೇಮಿಸಲು ಅವಕಾಶವಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಕಾರ್ಯಭಾರ ನೋಡಿಕೊಳ್ಳುತ್ತಿದ್ದಾರೆ. ಆದರೆ ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಪ್ರತ್ಯೇಕ ಅಧಿಕಾರಿಯನ್ನು ನೇಮಿಸಿದ್ದಾರೆ. ಇದೇ ಮಾದರಿಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿಯೂ ಕುಂದು ಕೊರತೆ ನಿವಾರಣೆ ಅಧಿಕಾರಿಯನ್ನು ನೇಮಿಸಲು ಆಯೋಗದಿಂದ ನಿರ್ದೇಶನ ನೀಡಲಾಗುತ್ತದೆ’ ಎಂದು ತಿಳಿಸಿದರು.
ಆಯೋಗದ ಸದಸ್ಯರಾದ ಲಿಂಗರಾಜ ಕೋಟೆ, ಮಾರುತಿ ಎಂ. ದೊಡ್ಡಲಿಂಗಣ್ಣನವರ, ಕೆ.ಎಸ್.ವಿಜಯಲಕ್ಷ್ಮಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಕೆಎಸ್ಸಿಎಸ್ಇ ಜಿಲ್ಲಾ ವ್ಯವಸ್ಥಾಪಕ ಎಸ್.ಕೆ.ಮಲ್ಲಿಕಾರ್ಜುನ ಇದ್ದರು.
ರಾಜ್ಯ ಆಹಾರ ಆಯೋಗದಿಂದ ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಳ್ಳಲಾಗಿದೆ. 14 ಇಲಾಖೆಗಳ ವ್ಯಾಪ್ತಿಗೆ ಬರುವಂತಹ ಆಹಾರ ವಿತರಣೆ ಹಾಗೂ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಆಯೋಗ ಮೇಲ್ವಿಚಾರಣೆ ನಡೆಸಿ ಸಮಸ್ಯೆ ಪರಿಹರಿಸುತ್ತಿದೆ
-ಡಾ.ಎಚ್.ಕೃಷ್ಣ ಅಧ್ಯಕ್ಷ ರಾಜ್ಯ ಆಹಾರ ಆಯೋಗ
ಬಿಪಿಎಲ್ ಕಾರ್ಡ್ ರದ್ದತಿಗೆ ಅಹವಾಲು ಸ್ವೀಕಾರ
ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರ ವರ್ಷಕ್ಕೆ ₹ 8 ಲಕ್ಷಕ್ಕೂ ಅಧಿಕ ವಹಿವಾಟು ನಡೆಸುವವರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗುತ್ತಿದ್ದು ಇದರಿಂದ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ತೊಂದರೆಯಾಗುತ್ತಿದೆ. ಪೇಟಿಎಂ ಫೋನ್ ಪೇ ಮೂಲಕ ಸಣ್ಣಪುಟ್ಟ ವ್ಯಾಪಾರಸ್ಥರು ಸಹ ಹಣ ಪಾವತಿ ಪಡೆಯುವುದರಿಂದ ವರ್ಷಕ್ಕೆ ಅವರ ವಹಿವಾಟು ₹ 8 ಲಕ್ಷ ಮೀರುತ್ತದೆ. ಬಹಳ ಕಡಿಮೆ ಲಾಭದೊಂದಿಗೆ ವ್ಯವಹರಿಸುವ ಇವರಿಗೆ ಬಿಪಿಎಲ್ ಕಾರ್ಡು ರದ್ದತಿಯಿಂದ ತೊಂದರೆಯಾಗುತ್ತಿದೆ. ಈ ಕುರಿತು ಆಯೋಗ ಹೆಚ್ಚಿನ ಗಮನ ಹರಿಸಿದ್ದು ನಿಯಮಗಳಿಗೆ ಸೂಕ್ತ ಮಾರ್ಪಾಡುಗಳನ್ನು ತರಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಿದೆ ಎಂದು ಡಾ.ಎಚ್.ಕೃಷ್ಣ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.