
ಚಿತ್ರದುರ್ಗ: ‘ಜಿಲ್ಲೆಯ ರೈತರು 2025–26ನೇ ಸಾಲಿನಲ್ಲಿ 48,682 ಟನ್ ಸಿರಿಧಾನ್ಯ ಉತ್ಪಾದಿಸುವ ಮೂಲಕ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದ್ದಾರೆ. ಸಾಕಷ್ಟು ಸವಾಲುಗಳ ನಡುವೆಯೂ ಜಿಲ್ಲೆಯ ರೈತರು ಉತ್ತಮ ಸಾಧನೆ ಮಾಡಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಶ್ಲಾಘಿಸಿದರು.
ನಗರದ ಕ್ರೀಡಾಂಗಣದಲ್ಲಿ ಸೋಮವಾರ ನಡೆದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದ ಅವರು ಸಂದೇಶ ನೀಡಿದರು.
‘ತೋಟಗಾರಿಕೆ ಮತ್ತು ಸಣ್ಣ ನೀರಾವರಿ ಇಲಾಖೆಗಳ ಮೂಲಕ ಸಾವಿರಾರು ರೈತರಿಗೆ ಕೋಟ್ಯಂತರ ರೂಪಾಯಿಗಳ ಸೌಲಭ್ಯ ಒದಗಿಸಲಾಗಿದೆ. ಸರ್ಕಾರ ನೀಡಿರುವ ಸೌಲಭ್ಯವನ್ನು ಸದುಪಯೋಗ ಮಾಡಿಕೊಂಡಿರುವ ರೈತರು ಅತೀ ಹೆಚ್ಚು ಸಿರಿಧಾನ್ಯ ಬೆಳೆದಿದ್ದಾರೆ. ಜಿಲ್ಲೆಯ ಜೀವನಾಡಿಯಾಗಿರುವ ಭದ್ರಾ ಮೇಲ್ದಂಡೆ ಯೋಜನೆಯಡಿ ಈ ವರ್ಷದ ಫೆಬ್ರುವರಿ ಅಥವಾ ಮಾರ್ಚ್ ಅಂತ್ಯದೊಳಗೆ ನೀರು ಹರಿದು ಬರಲಿದೆ. ಗೋನೂರುವರೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಗುರಿ ಹೊಂದಲಾಗಿದೆ’ ಎಂದರು.
‘ಯೋಜನೆಯ ಬಾಕಿ ಕಾಮಗಾರಿಗಳಿಗಾಗಿ ₹ 200 ಕೋಟಿ ಬಿಡುಗಡೆ ಮಾಡಲು ಸರ್ಕಾರ ಭರವಸೆ ನೀಡಿದೆ. ಹಿರಿಯೂರು, ಚಿತ್ರದುರ್ಗ, ಹೊಳಲ್ಕೆರೆ ಮತ್ತು ಚಳ್ಳಕೆರೆ ತಾಲ್ಲೂಕುಗಳ ಒಟ್ಟು 73,946 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ಹನಿ ನೀರಾವರಿ ಒದಗಿಸುವ ₹ 2,677 ಕೋಟಿ ಬೃಹತ್ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು’ ಎಂದರು.
‘ಕೈಗಾರಿಕೆ ಅಭಿವೃದ್ಧಿಗೆ ವೇಗ ನೀಡಿದ್ದು, ಹಿರಿಯೂರು ತಾಲ್ಲೂಕಿನ ಮೇಟಿಕುರ್ಕಿ ಬಳಿ ಕೈಗಾರಿಕಾ ಕಾರಿಡಾರ್ ಸ್ಥಾಪನೆಯಾಗಲಿದೆ. ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ದೊರೆಯಲಿದೆ. ದಾವಣಗೆರೆ– ತುಮಕೂರು ನೇರ ರೈಲು ಮಾರ್ಗಕ್ಕಾಗಿ ಸರ್ಕಾರ ₹ 1,211 ಎಕರೆ ಜಮೀನು ಹಸ್ತಾಂತರಿಸಿದ್ದು, ಡಿಸೆಂಬರ್ 2027ರ ವೇಳೆಗೆ ಈ ಯೋಜನೆ ಪೂರ್ಣಗೊಂಡು ರೈಲು ಸಂಚಾರ ಆರಂಭವಾಗಲಿದೆ’ ಎಂದು ಹೇಳಿದರು.
‘ನಮ್ಮ ಸಂವಿಧಾನವು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ಬದುಕು ಕಲ್ಪಿಸಿದೆ. ಸಂವಿಧಾನ ರಚನಾ ಸಮಿತಿಯಲ್ಲಿ ನಮ್ಮ ಜಿಲ್ಲೆಯ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪನವರು ಇದ್ದದ್ದು ನಮಗೆ ಹೆಮ್ಮೆ. ಭಾರತೀಯ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವಾಗಿದ್ದು ಸಮಾಜದ ಎಲ್ಲ ವರ್ಗದ ಜನರಿಗೂ ಅವಕಾಶಗಳನ್ನು ಕಲ್ಪಿಸಿದೆ’ ಎಂದು ತಿಳಿಸಿದರು.
‘ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸಂವಿಧಾನದ ಅಡಿಯಲ್ಲಿ ಉತ್ತಮ ಕೆಲಸ ಮಾಡುತ್ತಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನರ ಜೀವನ ಮಟ್ಟವನ್ನು ಸುಧಾರಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ’ ಎಂದರು.
ಪೀಕ್ ಕ್ಯಾಪ್ ವಿತರಣೆ: ಇದೇ ಸಂದರ್ಭದಲ್ಲಿ ಪೊಲೀಸ್ ಕಾನ್ಸ್ಟೆಬಲ್ಗಳಿಗೆ ಪೀಕ್ ಕ್ಯಾಪ್ ವಿತರಣೆ ಮಾಡಲಾಯಿತು. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ಸರ್ಕಾರಿ ಶಾಲೆಗಳಿಗೆ ನೀಡಿರುವ ಕ್ರೀಡಾ ಪರಿಕರ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಡಿ ಫಲಾನುಭವಿಗಳಿಗೆ ವಾಹನಗಳ ಕೀ ವಿತರಣೆ ಮಾಡಲಾಯಿತು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಚೆಕ್ ನೀಡಲಾಯಿತು. ಸಾರಿಗೆ ನಿಗಮದಲ್ಲಿ ಸತತ 5 ವರ್ಷಗಳ ಕಾಲ ಅಪಘಾತ ರಹಿತ, ಅಪರಾಧ ರಹಿತ ಸೇವೆಗಾಗಿ ಚಾಲಕ ಆರ್.ಮನೋಹರ್ ಅವರನ್ನು ಗೌರವಿಸಲಾಯಿತು.
ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ 14 ಮಂದಿ ಅಧಿಕಾರಿಗಳು ಹಾಗೂ ನೌಕರರನ್ನು ಗಣರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಚುನಾವಣಾ ಪ್ರಕ್ರಿಯೆಯಲ್ಲಿನ ಅತ್ಯುತ್ತಮ ಕಾರ್ಯಕ್ಷಮತೆಗಾಗಿ ಚುನಾವಣಾ ಅಭ್ಯಾಸ ಪ್ರಶಸ್ತಿ ಪಡೆದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರನ್ನು ಸನ್ಮಾನಿಸಲಾಯಿತು.
ಶಾಸಕ ಕೆ.ಸಿ.ವೀರೇಂದ್ರ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ, ಭೋವಿ ನಿಗಮದ ಅಧ್ಯಕ್ಷ ವಿ.ರಾಮಪ್ಪ, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರಿದ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ. ಸಿಇಒ ಡಾ.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಉಪ ವಿಭಾಗಾಧಿಕಾರಿ ವೆಂಕಟೇಶ್ ನಾಯಕ್ ಇದ್ದರು.
ನೃತ್ಯರೂಪಕ ಸಾಂಸ್ಕೃತಿಕ ಸಂಭ್ರಮ ಸಶಸ್ತ್ರ ಮೀಸಲು ಪಡೆ ನಾಗರಿಕ ಪೊಲೀಸ್ ಗೃಹ ರಕ್ಷಕ ದಳ ಅರಣ್ಯ ಇಲಾಖೆ ತುಕಡಿಗಳು ಎನ್ಸಿಸಿ ಸೇವಾದಳ ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿ ವಿವಿಧ ಶಾಲೆ– ಕಾಲೇಜು ವಿದ್ಯಾರ್ಥಿಗಳು ಪೊಲೀಸ್ ಬ್ಯಾಂಡ್ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಭಾಗವಹಿಸಿದ್ದವು. ತುರುವನೂರು ಇಂದಿರಾ ಗಾಂಧಿ ವಸತಿ ಶಾಲೆ ನಗರದ ಕೆ.ಕೆ.ನ್ಯಾಷನಲ್ ಸ್ಕೂಲ್ ರೀಜನಲ್ ಮತ್ತು ಕ್ರಸೆಂಟ್ ಶಾಲೆ ವಿದ್ಯಾರ್ಥಿಗಳು ದೇಶಭಕ್ತಿ ಹಾಗೂ ವೈವಿಧ್ಯತೆ ಬಿಂಬಿಸುವ ನೃತ್ಯ ರೂಪಕಗಳನ್ನು ಪ್ರಸ್ತುತ ಪಡಿಸಿದರು. ಪಥ ಸಂಚಲನದಲ್ಲಿ ಭಾಗವಹಿಸಿದ್ದ ಮೆದೇಹಳ್ಳಿ ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಪ್ರಥಮ ಗುಳೇನಹಟ್ಟಿಯ ಮೊರಾರ್ಜಿ ದೇಸಾಯಿ ದ್ವೀತಿಯ ಮಲ್ಲಾಡಿಹಳ್ಳಿ ಗಾರ್ಡಿಯನ್ ಏಂಜಲ್ ಶಾಲೆಯ ತಂಡಗಳು ತೃತೀಯ ಸ್ಥಾನ ಪಡೆದುಕೊಂಡವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.