ADVERTISEMENT

ಯೂರಿಯಾ ಪೂರೈಕೆಗೆ ಸಚಿವರಿಗೆ ಪತ್ರ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2020, 13:28 IST
Last Updated 2 ಆಗಸ್ಟ್ 2020, 13:28 IST
ಚಿತ್ರದುರ್ಗದ ಐತಿಹಾಸಿಕ ಚಂದ್ರವಳ್ಳಿ ಕೆರೆಗೆ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಹಾಗೂ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಅವರು ಭಾನುವಾರ ಬಾಗಿನ ಅರ್ಪಿಸಿದರು.
ಚಿತ್ರದುರ್ಗದ ಐತಿಹಾಸಿಕ ಚಂದ್ರವಳ್ಳಿ ಕೆರೆಗೆ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಹಾಗೂ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಅವರು ಭಾನುವಾರ ಬಾಗಿನ ಅರ್ಪಿಸಿದರು.   

ಚಿತ್ರದುರ್ಗ: ಜಿಲ್ಲೆಗೆ ತುರ್ತಾಗಿ 2,500 ಮೆಟ್ರಿಕ್‌ ಟನ್‌ ಯೂರಿಯಾ ರಸಗೊಬ್ಬರ ಪೂರೈಕೆ ಮಾಡುವಂತೆ ಕೋರಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರು ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಹಾಗೂ ಕೃಷಿ ಸಚಿವ ಬಿ.ಸಿ. ಪಾಟೀಲ ಅವರಿಗೆ ಭಾನುವಾರ ಪತ್ರ ಬರೆದಿದ್ದಾರೆ.

ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿದೆ. ಮೆಕ್ಕೆಜೋಳ, ಶೇಂಗಾ ಹಾಗೂ ರಾಗಿ ಬೆಳೆ ಬಿತ್ತನೆ ಮಾಡಿದ್ದಾರೆ. ಬೆಳೆಗೆ ಯೂರಿಯಾ ಗೊಬ್ಬರ ನೀಡಲು ಇದು ಸಕಾಲ. ಆದರೆ, ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರಕ್ಕೆ ಕೊರತೆ ಉಂಟಾಗಿದೆ. ಇದರಿಂದ ರೈತ ಸಮುದಾಯ ಆತಂಕಗೊಂಡಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಜಿಲ್ಲೆಗೆ ಸುಮಾರು 2,500 ಮೆಟ್ರಿಕ್‌ ಟನ್‌ ಯೂರಿಯಾ ರಸಗೊಬ್ಬರದ ಅಗತ್ಯವಿದೆ ಎಂದು ಕೃಷಿ ಇಲಾಖೆ ಅಂದಾಜಿಸಿದೆ. ಆದರೆ, 100 ಮೆಟ್ರಿಕ್‌ ಟನ್‌ ಯೂರಿಯಾ ಮಾತ್ರ ದಾಸ್ತಾನು ಇದೆ. ರಸಗೊಬ್ಬರಕ್ಕೆ ಕೊರತೆ ಉಂಟಾದರೆ ರೈತರು ಅಸಮಧಾನಗೊಳ್ಳುವ ಸಾಧ್ಯತೆ ಇದೆ. ಕಾನೂನು ಮತ್ತು ಸುವ್ಯವಸ್ಥೆಗೂ ಧಕ್ಕೆ ಉಂಟಾಗಬಹುದು ಎಂದು ಜಿಲ್ಲಾಡಳಿತ ಕಳವಳ ವ್ಯಕ್ತಪಡಿಸಿದೆ ಎಂದು ಸಚಿವರ ಗಮನ ಸೆಳೆದಿದ್ದಾರೆ.

ADVERTISEMENT

ರೈತರ ಬೇಡಿಕೆಗೆ ಅಗತ್ಯವಿರುವಷ್ಟು ರಸಗೊಬ್ಬರನ್ನು ಕೂಡಲೇ ಪೂರೈಕೆ ಮಾಡಬೇಕು. ಮಂಗಳೂರಿನ ಬಂದರಿನಿಂದ ನೇರವಾಗಿ ಚಿತ್ರದುರ್ಗ ರೈಲ್ವೆ ರೇಕ್‌ ಪಾಯಿಂಟ್‌ಗೆ ಗೊಬ್ಬರ ಬರಬೇಕು. ಅಗತ್ಯ ಸಹಕಾರ ನೀಡಬೇಕು ಎಂದು ಸಚಿವರನ್ನು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.