
ಮೊಳಕಾಲ್ಮುರು: ಶಿಕ್ಷಣ ವ್ಯವಸ್ಥೆ ಅಭಿವೃದ್ಧಿಯಲ್ಲಿ ಬಿಸಿಯೂಟ ಯೋಜನೆ ಸಿಬ್ಬಂದಿ ಪಾತ್ರ ಪ್ರಮುಖವಾಗಿದ್ದು, ಜವಾಬ್ದಾರಿ ನಿಭಾಯಿಸಲು ಸಿಬ್ಬಂದಿ ಶ್ರಮಿಸಬೇಕು ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಸಲಹೆ ನೀಡಿದರು.
ತಾಲ್ಲೂಕಿನ ರಾಂಪುರದಲ್ಲಿ ಭಾನುವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸಂಯುಕ್ತವಾಗಿ ಬಿಸಿಯೂಟ ಸಿಬ್ಬಂದಿಗೆ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ತರಬೇತಿ ಕಾರ್ಯಾಗಾರ ಹಾಗೂ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಮಾತನಾಡಿದರು.
ಬಿಸಿಯೂಟ ಯೋಜನೆ ಜಾರಿಯ ನಂತರ ಗ್ರಾಮೀಣ ಹಾಗೂ ಗಡಿಭಾಗದ ಶಾಲೆಗಳ ಹಾಜರಾತಿಯಲ್ಲಿ ಸುಧಾರಣೆಯಾಗಿದೆ. ಯೋಜನೆ ಆರೋಗ್ಯಕರವಾಗಿ ಮುಂದುವರಿದಲ್ಲಿ ವಿದ್ಯಾರ್ಥಿಗಳ ಆರೋಗ್ಯ ಸುಧಾರಣೆಯ ಜತೆಗೆ ಹಾಜರಾತಿ ಹೆಚ್ಚಲಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಯೋಜನೆ ಪ್ರಗತಿಗೆ ಕೈಜೋಡಿಸಬೇಕು ಎಂದರು.
ಗಣಿಭಾದಿತ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ರಾಜ್ಯದ 10 ತಾಲ್ಲೂಕಿನ ವಿದ್ಯಾರ್ಥಿಗಳಿಗೆ ನಿತ್ಯ ಪೌಷ್ಟಿಕ ಆಹಾರ ನೀಡುವ ಯೋಜನೆ ಮಂಜೂರಾಗಿದೆ. ಮೊಳಕಾಲ್ಮುರು ತಾಲ್ಲೂಕಿಗೆ ಸೌಲಭ್ಯ ದೊರಕಿದ್ದು, ಯೋಜನೆಯ ಸದ್ಬಳಕೆ ಮಾಡಿಕೊಳ್ಳಿ ಎಂದರು.
ತಹಶೀಲ್ದಾರ್ ಟಿ. ಜಗದೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ನಿರ್ಮಲಾದೇವಿ, ಬಿಸಿಯೂಟ ಯೋಜನಾಧಿಕಾರಿ ಎಂ. ಹನುಮಂತಪ್ಪ, ಎಐಟಿಯುಸಿ ಜಿಲ್ಲಾ ಘಟಕದ ಸಂಚಾಲಕ ಡಿ.ಎಂ. ಮಲಿಯಪ್ಪ, ಸಿಪಿಐ ತಾಲ್ಲೂಕು ಸಂಚಾಲಕ ಡಿ. ಪೆನ್ನಯ್ಯ, ಇಸಿಒ ಲೋಹಿತ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.