ಚಿತ್ರದುರ್ಗ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಕೊರೊನಾ ವಾರಿಯರ್ಸ್ಗೆ ಸಕಾಲಕ್ಕೆ ವೇತನ ಪಾವತಿಸುವಂತೆ ಕೋರಿ ವಿಧಾನಪರಿಷತ್ ಸದಸ್ಯ ರಘು ಆಚಾರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
‘ಸಾರ್ವಜನಿಕರು ಹಾಗೂ ಗ್ರಾಮ ಪಂಚಾಯಿತಿ ಪ್ರತಿನಿಧಿಗಳ ಕೋರಿಕೆಯ ಮೇರೆಗೆ ಜುಲೈ 30 ಹಾಗೂ ಆ.15ರಂದು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ್ದೆ. ಆಸ್ಪತ್ರೆಯಲ್ಲಿ ದಾಖಲಾಗಿರುವ ಎಲ್ಲ ರೋಗಿಗಳೊಂದಿಗೆ ಮಾತನಾಡಿದ್ದೇನೆ. ಬಹುತೇಕ ಎಲ್ಲರೂ ಆರೈಕೆಯ ಬಗ್ಗೆ ಉತ್ತಮ ಭಾವನೆ ಹೊಂದಿದ್ದಾರೆ. ಆದರೆ, ಚಿಕಿತ್ಸೆ ನೀಡುವ ಹಲವು ಸಿಬ್ಬಂದಿಗೆ ನಾಲ್ಕು ತಿಂಗಳಿಂದ ವೇತನ ಸಿಕ್ಕಿಲ್ಲ’ ಎಂದು ಬೇಸರ ಹಂಚಿಕೊಂಡಿದ್ದಾರೆ.
‘ಕೋವಿಡ್ ಆಸ್ಪತ್ರೆಗೆ ಗುತ್ತಿಗೆ ಆಧಾರದ ಮೇರೆಗೆ ನೇಮಕಾತಿ ಹೊಂದಿದ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊರೊನಾ ವಾರಿಯರ್ಸ್ಗಳನ್ನು ದೇಶದ ಗಡಿ ಕಾಯುವ ಸೈನಿಕರಿಗೆ ಮುಖ್ಯಮಂತ್ರಿ ಹೋಲಿಕೆ ಮಾಡಿರುವುದು ಸ್ವಾಗತಾರ್ಹ. ಇದು ಘೋಷಣೆಗೆ ಸೀಮಿತವಾಗದೇ ರಾಜ್ಯದ ಎಲ್ಲ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ವೇತನ ಪಾವತಿಸುವಂತೆ ನೋಡಿಕೊಳ್ಳಬೇಕು. ಅವರಿಗೆ ಅಗತ್ಯ ಸೌಲಭ್ಯಗಳನ್ನು ತಲುಪಿಸುವ ಹೊಣೆಗಾರಿಕೆ ಸರ್ಕಾರದ ಮೇಲಿದೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.