ಮೊಳಕಾಲ್ಮುರು: ವಿದ್ಯಾರ್ಥಿಗಳಲ್ಲಿ ಆಲಿಸುವ ಪ್ರವೃತ್ತಿ ಕ್ಷೀಣಿಸುತ್ತಿರುವುದು ಆತಂಕದ ಸಂಗತಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕ ಬಿ.ಎಂ. ಗುರುನಾಥ್ ಹೇಳಿದರು.
ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಗುರುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ 'ಹಾಡಿರೇ ರಾಗಗಳ ತೂಗಿರೇ ದೀಪಗಳ -2025ʼ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
'ಜಿಲ್ಲೆಯಲ್ಲಿ ಅತೀ ಹೆಚ್ಚು ಕಲಾವಿದರನ್ನು ಹೊಂದಿರುವ ತಾಲ್ಲೂಕು ಆಗಿ ಮೊಳಕಾಲ್ಮುರು ಗುರುತಿಸಿಕೊಂಡಿದೆ. ಇಲ್ಲಿನ ಯುವಸಮೂಹದ ಪ್ರತಿಭೆಯು ಪ್ರೋತ್ಸಾಹದ ಕೊರತೆಯಿಂದ ನಿರೀಕ್ಷೆಯಷ್ಟು ಅನಾವರಣವಾಗಿಲ್ಲ. ಈ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕತಿ ಇಲಾಖೆಯು ಜನಪದ ವಿವಿಧ ಕಲಾ ಪ್ರಕಾರಗಳ ಸ್ಪರ್ಧೆಗಳನ್ನು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದು ಸದುಪಯೋಗ ಮಾಡಿಕೊಳ್ಳಬೇಕು’ ಎಂದರು.
ಚಲನಚಿತ್ರ ನಿರ್ದೇಶಕ ಜಿ. ಶ್ರೀನಿವಾಸಮೂರ್ತಿ ಮಾತನಾಡಿ, ಕಲೆ ಎಲ್ಲರನ್ನೂ ಅಪ್ಪಿಕೊಳ್ಳುವುದಿಲ್ಲ, ಅರ್ಹತೆ ಇದ್ದವರು ಮಾತ್ರ ಈ ಕ್ಷೇತ್ರದಲ್ಲಿ ಬೆಳೆಯಲು ಸಾಧ್ಯ. ಸಂಘ, ಸಂಸ್ಥೆಗಳು, ಸರ್ಕಾರ ಆಯೋಜಿಸುವ ಇಂತಹ ಕಾರ್ಯಕ್ರಮದಲ್ಲಿ ಆಸಕ್ತಿಯಿಂದ ಭಾಗವಹಿಸಿ ತನ್ನಲ್ಲಿನ ಕಲೆಯನ್ನು ಅನಾವರಣ ಮಾಡಬೇಕು. ಇದು ಭವಿಷ್ಯದ ಬೆಳವಣಿಗೆಗೆ ಅನುಕೂಲವಾಗಲಿದೆ ಎಂದರು.
ಕಲಾವಿದರ ಸಂಘದ ಜಿಲ್ಲಾ ಕಾರ್ಯದರ್ಶಿ ಡಿ.ಒ. ಮೊರಾರ್ಜಿ, ಉಪನ್ಯಾಸಕ ಬಿ. ಯೋಗಾನಂದ್ ಮಾತನಾಡಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ಅಧ್ಯಕ್ಷತೆ ವಹಿಸಿದ್ದರು. ಕಲಾವಿದರಾದ ಲೋಕೇಶ್ ಪಲ್ಲವಿ, ಪಿ.ಆರ್. ಕಾಂತರಾಜ್, ಅಮುಕುಂದಿ ಗಂಗಾಧರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.