
ಮೊಳಕಾಲ್ಮುರು: ‘ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚು ಹೆಚ್ಚು ಭಾಗವಹಿಸುವ ಮೂಲಕ ಮಾನಸಿಕ ನೆಮ್ಮದಿ ಹೊಂದಲು ಸಾಧ್ಯವಿದೆ’ ಎಂದು ಸಿದ್ದಯ್ಯನಕೋಟೆ ವಿಜಯ ಮಹಾಂತೇಶ್ವರ ಮಠದ ಬಸವಲಿಂಗ ಸ್ವಾಮೀಜಿ ಹೇಳಿದರು.
ವಿಧಾನಸಭಾ ಕ್ಷೇತ್ರದ ಗೌರಸಮುದ್ರದಲ್ಲಿ ಶುಕ್ರವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಸಾಮೂಹಿಕ ಕುಂಕುಮಾರ್ಚನೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ಸಬಲತೆ ಹೊಂದಲು ಯೋಜನೆಗಳನ್ನು ರೂಪಿಸುವ ಜತೆಗೆ ಸ್ವ– ಉದ್ಯೋಗ, ಮಕ್ಕಳಿಗೆ ಶೈಕ್ಷಣಿಕ ಯೋಜನೆ, ವಸತಿ ಯೋಜನೆ, ಸಮದಾಯ ಅಭಿವೃದ್ಧಿ ಕಾರ್ಯಕ್ರಮ, ಧಾರ್ಮಿಕ ಜಾಗೃತಿ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ. ಗ್ರಾಮಸ್ಥರು ಇವುಗಳನ್ನು ಸದುಪಯೋಗ ಮಾಡಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಎನ್.ವೈ.ಗೋಪಾಲಕೃಷ್ಣ, ‘ಗೌರಸಮುದ್ರಕ್ಕೆ ಹಲವು ಸೌಲಭ್ಯಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ದೇವಿ ಜಾತ್ರೆ ನಡೆಯುವ ತುಂಬಲು ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ ₹ 1.50 ಕೋಟಿ ಮತ್ತು ಕೋನಸಾಗರ– ಗೌರಸಮುದ್ರ ಸಂಪರ್ಕ ರಸ್ತೆ ಅಭಿವೃದ್ಧಿಗೆ ₹ 1 ಕೋಟಿ ಮಂಜೂರಾಗಿದ್ದು, ಶೀಘ್ರ ಶಂಕುಸ್ಥಾಪನೆ ಮಾಡಿ ಕಾಮಗಾರಿ ಆರಂಭಿಸಲಾಗುವುದು’ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ. ಓಬಣ್ಣ ಅಧ್ಯಕ್ಷತೆ ವಹಿಸಿದ್ದರು.
ಗ್ರಾಮಾಭಿವೃದ್ಧಿ ಯೋಜನೆ ಜಗಳೂರು ವಲಯ ನಿರ್ದೇಶಕ ಪ್ರವೀಣ್ ಕುಮಾರ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನಾಗವೇಣಿ, ಸದಸ್ಯರಾದ ಜಿ.ಎಂ. ಈರಣ್ಣ, ಟಿ. ಶಶಿಕುಮಾರ್, ಸುಭಾಷಿಣಿ, ಶಶಿರೇಖಾ, ಎಂ. ಭಾಗ್ಯಮ್ಮ, ಪಿಡಿಒ ಕೊಲ್ಲಣ್ಣ, ಕುಂಕುಮಾರ್ಚನೆ ಪೂಜಾ ಸಮಿತಿ ಅಧ್ಯಕ್ಷೆ ಸುಭಾಷಿಣಿ, ಉಪಾಧ್ಯಕ್ಷರಾದ ಕೆ.ಬಿ. ಮಾರಣ್ಣ, ಜಿ.ಜೆ. ನಾಗರಾಜ್, ಕಾರ್ಯದರ್ಶಿ ಶಶಿರೇಖಾ, ಕೆ.ಎನ್. ಧನಂಜಯ, ವಕೀಲ ಟಿ. ಚಂದ್ರಣ್ಣ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.