ADVERTISEMENT

ಚಿತ್ರದುರ್ಗ: ಮಕ್ಕಳ ಕಲ್ಯಾಣ ಸಮಿತಿ ಸುಪರ್ದಿಗೆ ಮುರುಘಾ ಮಠದ ಹಾಸ್ಟೆಲ್‌ ಮಕ್ಕಳು

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2022, 3:58 IST
Last Updated 5 ಸೆಪ್ಟೆಂಬರ್ 2022, 3:58 IST
ಶಿವಮೂರ್ತಿ ಮುರುಘಾ ಶರಣರು
ಶಿವಮೂರ್ತಿ ಮುರುಘಾ ಶರಣರು   

ಚಿತ್ರದುರ್ಗ: ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಎದುರಾಗಿದ್ದರಿಂದ ಮಠದ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿನಿಯರನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಆಯಾ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಯ ಸುಪರ್ದಿಗೆ ಭಾನುವಾರ ಒಪ್ಪಿಸಿದೆ.

ಆ ವಿದ್ಯಾರ್ಥಿನಿಯರ ಶಿಕ್ಷಣ ಮತ್ತು ವಸತಿ ಸೌಲಭ್ಯ ಕಲ್ಪಿಸುವ ಹೊಣೆಗಾರಿಕೆಯನ್ನು ಸಮಿತಿಗೆ ವಹಿಸಲಾಗಿದೆ.

ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹಾಸ್ಟೆಲ್‌ನಲ್ಲಿದ್ದ ಎಲ್ಲ ವಿದ್ಯಾರ್ಥಿನಿಯರನ್ನೂ ಆಗಸ್ಟ್‌ 31ರಂದು ಮಠದ ಆವರಣದಿಂದ ಬೇರೆಡೆಗೆ ಸ್ಥಳಾಂತರಿಸಲಾಗಿತ್ತು.

ADVERTISEMENT

‘5ನೇ ತರಗತಿಯಿಂದ ಎಸ್ಸೆಸ್ಸೆಲ್ಸಿವರೆಗೆ ವ್ಯಾಸಂಗ ಮಾಡುತ್ತಿದ್ದ 105 ವಿದ್ಯಾರ್ಥಿನಿಯರು ಹಾಸ್ಟೆಲ್‌ನಲ್ಲಿದ್ದರು. ಗಣೇಶ ಹಬ್ಬದ ಹಿಂದಿನ ದಿನ 54 ಮಕ್ಕಳು ಪಾಲಕರೊಂದಿಗೆ ಊರಿಗೆ ತೆರಳಿದ್ದರು. ಉಳಿದವರಲ್ಲಿ 12 ಮಕ್ಕಳಿಗೆ ಬಾಲಕಿಯರ ಬಾಲಮಂದಿರ ಹಾಗೂ 37 ಮಕ್ಕಳಿಗೆ ಗೂಳಯ್ಯನಹಟ್ಟಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಇಬ್ಬರು ಸಂತ್ರಸ್ತ ವಿದ್ಯಾರ್ಥಿನಿಯರನ್ನು ಬಾಲಕಿಯರ ಬಾಲಮಂದಿರಕ್ಕೆ ಕಳುಹಿಸಲಾಗಿತ್ತು’ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪಿ. ಲೋಕೇಶ್ವರಪ್ಪ ತಿಳಿಸಿದ್ದಾರೆ.

‘ಹಾಸ್ಟೆಲ್‌ನಿಂದ ಸ್ಥಳಾಂತರಗೊಂಡ 49 ವಿದ್ಯಾರ್ಥಿನಿಯರ ಪೈಕಿ ಜಿಲ್ಲೆಯ 11 ವಿದ್ಯಾರ್ಥಿನಿಯರಿದ್ದರು. ಬೇರೆ ಜಿಲ್ಲೆಯ 38 ವಿದ್ಯಾರ್ಥಿನಿಯರನ್ನು ಆಯಾ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಯ ಸುಪರ್ದಿಗೆ ನೀಡುವಂತೆ ಇಲಾಖೆ ನಿರ್ದೇಶನ ನೀಡಿತ್ತು. ಆಯಾ ಜಿಲ್ಲೆಯ ವಸತಿ ಶಾಲೆಗೆ ಈ ಮಕ್ಕಳನ್ನು ದಾಖಲಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.