ADVERTISEMENT

ಚಿತ್ರದುರ್ಗ | 'ನಾರಾಯಣ ಗುರು ತತ್ವ, ಸಿದ್ಧಾಂತ ಸಾರ್ವಕಾಲಿಕ'

ಸೋಲೂರು ಆರ್ಯ ಈಡಿಗ ಮಠದ ಸ್ವಾಮಿ ವಿಖ್ಯಾತಾನಂದ ಅಭಿಮತ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2025, 6:49 IST
Last Updated 8 ಸೆಪ್ಟೆಂಬರ್ 2025, 6:49 IST
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಆಚರಿಸಲಾಯಿತು
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಆಚರಿಸಲಾಯಿತು   

ಚಿತ್ರದುರ್ಗ: ‘ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ, ಸಿದ್ಧಾಂತ, ಚಿಂತನೆಗಳು ಸಾರ್ವಕಾಲಿಕವಾಗಿವೆ. ನಾವೆಲ್ಲಾ ನಾರಾಯಣ ಗುರುಗಳ ಸಿದ್ಧಾಂತವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ’ ಎಂದು ಸೋಲೂರು ಆರ್ಯ ಈಡಿಗ ಮಠದ ಸ್ವಾಮಿ ವಿಖ್ಯಾತಾನಂದ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯಲ್ಲಿ ಮಾತನಾಡಿದ ಅವರು, ‘ನಾರಾಯಣ ಗುರುಗಳ ಸಿದ್ಧಾಂತಗಳು ಸಾರ್ವಕಾಲಿಕ ಮೌಲ್ಯ ಹೊಂದಿವೆ’ ಎಂದರು.

‘ನಮ್ಮಲ್ಲಿರುವ ಸಂಪತ್ತಿನ ಹಾಗೂ ಸಮಯದ ಸ್ವಲ್ಪ ಭಾಗವನ್ನು ಸಮಾಜದ ಏಳಿಗೆಗಾಗಿ ವಿನಿಯೋಗಿಸಬೇಕು. ಈ ಮೂಲಕ ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕಿದೆ’ ಎಂದು ಹೇಳಿದರು.

ADVERTISEMENT

‘ಸಮುದಾಯದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಜಿಲ್ಲಾ ಸಂಘ ಹೆಚ್ಚಿನ ಒತ್ತು ನೀಡುತ್ತಿದೆ. ಕಳೆದ ಐದು ವರ್ಷಗಳಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಮುದಾಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ, ಗೌರವಿಸುವ ಕೆಲಸ ಮಾಡಲಾಗುತ್ತಿದೆ. ಇದರ ಜೊತೆಗೆ ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಕಾರ್ಯಾಗಾರಗಳನ್ನು ನಡೆಸಿ, ಮಾರ್ಗದರ್ಶನ ನೀಡಲಾಗುತ್ತಿದೆ’ ಎಂದು ಆರ್ಯ ಈಡಿಗರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಜೀವನ್ ತಿಳಿಸಿದರು.

‘ಒಂದು ಜಾತಿ, ಒಂದು ಧರ್ಮ, ಒಂದು ದೇವರು ಎಂಬ ಘೋಷಣೆ ಮೂಲಕ ನಾರಾಯಣ ಗುರುಗಳು ಸಮಾನತೆಯ ಸಮಾಜವನ್ನು ಕಟ್ಟುವ ಕೆಲಸ ಮಾಡಿದರು. ಜಾತಿ, ಭೇದ, ಅಸ್ಪೃಶ್ಯತೆ ಹಾಗೂ ಶೋಷಣೆ ವಿರುದ್ಧ ತೀವ್ರ ಹೋರಾಟ ನಡೆಸಿದರು’ ಎಂದು ರಾಜ್ಯ ಶಿಕ್ಷಣ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಮಾಲತೇಶ್‌ ಅರಸ್‌ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರುನಾಥ, ಜಿಲ್ಲಾ ಆರ್ಯ ಈಡಿಗರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಮಂಜುನಾಥ್‌, ಉಪಾಧ್ಯಕ್ಷ ಟಿ.ಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷೆ ಅನುರಾಧ ರವಿಕುಮಾರ, ತಾಲ್ಲೂಕು ಘಟಕದ ಅಧ್ಯಕ್ಷ ಎಚ್‌.ಓ.ಜಗದೀಶ, ಪ್ರಧಾನ ಕಾರ್ಯದರ್ಶಿ ಆರ್‌.ಕುಮಾರಸ್ವಾಮಿ, ಖಜಾಂಚಿ ನಾಗೇಂದ್ರ ಪ್ರಸಾದ್‌, ಸಂಘಟನಾ ಕಾರ್ಯದರ್ಶಿ ನಾಗರಾಜ್‌, ಮುಖಂಡರಾದ ಇ.ಎನ್‌.ಲಕ್ಷ್ಮೀಕಾಂತ, ಅಜಯ್‌ ಕುಮಾರ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.