ADVERTISEMENT

ಮೀಸಲಾತಿ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ

ಜಿಲ್ಲಾ ಜನಜಾಗೃತಿ ಸಭೆಯಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 14 ಜುಲೈ 2019, 12:44 IST
Last Updated 14 ಜುಲೈ 2019, 12:44 IST
ಚಿತ್ರದುರ್ಗದಲ್ಲಿ ಭಾನುವಾರ ಜಿಲ್ಲಾ ನಾಯಕ ಸಮಾಜದಿಂದ ಹಮ್ಮಿಕೊಂಡಿದ್ದ ಜನ ಜಾಗೃತಿ ಸಭೆಯಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಮಾತನಾಡಿದರು.
ಚಿತ್ರದುರ್ಗದಲ್ಲಿ ಭಾನುವಾರ ಜಿಲ್ಲಾ ನಾಯಕ ಸಮಾಜದಿಂದ ಹಮ್ಮಿಕೊಂಡಿದ್ದ ಜನ ಜಾಗೃತಿ ಸಭೆಯಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಮಾತನಾಡಿದರು.   

ಚಿತ್ರದುರ್ಗ: ‘ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ 7.5 ಮೀಸಲಾತಿ ಹೆಚ್ಚಳಕ್ಕಾಗಿ ನಡೆಸಿದ ಪಾದಯಾತ್ರೆ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ. ಮುಖ್ಯಮಂತ್ರಿ ಆಯೋಗ ರಚಿಸಲು ಶಿಫಾರಸು ಮಾಡಿದ್ದಾರೆ’ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಹೇಳಿದರು.

ನಗರದ ಕೋಟೆ ಮುಂಭಾಗದ ಮಹಾರಾಣಿ ಕಾಲೇಜಿನ ವಾಲ್ಮೀಕಿ ಸಭಾಂಗಣದಲ್ಲಿ ಭಾನುವಾರ ನಡೆದ ಜಿಲ್ಲಾ ನಾಯಕ ಸಮುದಾಯದ ಜನ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.

‘ಮೀಸಲಾತಿ ಹೆಚ್ಚಳ ಸೇರಿ ಇತರೆ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜನಹಳ್ಳಿಯಿಂದ ರಾಜಧಾನಿಗೆ ಪಾದಯಾತ್ರೆ ನಡೆಸಲಾಗಿದೆ. ಜೂನ್ 29 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಹೋರಾಟ ನಡೆಸಿ ಸಮುದಾಯ ಬಂಧುಗಳು ಸರ್ಕಾರದ ಕಣ್ಣು ತೆರೆಸಿದ್ದಾರೆ’ ಎಂದರು.

ADVERTISEMENT

ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ನಿವೃತ್ತ ವ್ಯವಸ್ಥಾಪಕ ಮೃತ್ಯುಂಜಯಪ್ಪ, ‘ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆದು ಪರಿಶಿಷ್ಟ ಪಂಡಗದ ಸೌಲಭ್ಯ ಕಬಳಿಸಲಾಗುತ್ತಿದೆ. ನಕಲಿ ಪ್ರಮಾಣ ಪತ್ರ ನೀಡುತ್ತಿರುವ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಶೇ 7.5 ಮೀಸಲಾತಿ ಹೆಚ್ಚಳ ಮಾಡಬೇಕು ಎಂದು ಆರು ದಶಕಗಳಿಂದ ಹೋರಾಟ ಮಾಡಲಾಗುತ್ತಿದೆ. ಆದರೂ, ನಮ್ಮ ನೋವನ್ನು ಕೇಳುವವರು ಯಾರು ಇಲ್ಲದಂತಾಗಿದ್ದಾರೆ. ಇದಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಯಾಗಬೇಕು. ಸ್ವಾಮೀಜಿ ತೆಗೆದುಕೊಳ್ಳುವ ಇಂತಹ ಹೋರಾಟ ಬೆಂಬಲಿಸಲು ಜನರು ಸಿದ್ದರಾಗಿರಬೇಕು’ ಎಂದು ಮನವಿ ಮಾಡಿದರು.

ನಾಯಕ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಜೆ.ಕೃಷ್ಣಮೂರ್ತಿ, ತಾಲ್ಲೂಕು ಅಧ್ಯಕ್ಷ ಬಿ.ಕಾಂತರಾಜ್, ಜಿಲ್ಲಾ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸದಾನಂದ, ತಾಲ್ಲೂಕು ಅಧ್ಯಕ್ಷ ಡಾ.ಗುಡ್ಡದೇಶ್ವರಪ್ಪ, ಮುಖಂಡರಾದ ಹರ್ತಿಕೋಟೆ ವೀರೇಂದ್ರ ಸಿಂಹ, ಸರ್ವೆ ಬೋರಯ್ಯ, ತಿಪ್ಪೇಸ್ವಾಮಿ, ವೆಂಕಟೇಶ್, ಸ್ವಪ್ನಾ, ಜಯಲಕ್ಷ್ಮೀ, ಮಧುಪಾಲೇಗೌಡ, ರಾಜೇಶ್, ಸಿರಿಗೆರೆ ತಿಪ್ಪೇಸ್ವಾಮಿ, ಸೌಭಾಗ್ಯ ತಿಪ್ಪೇಸ್ವಾಮಿ, ಬೆಳಗಟ್ಟ ಅಶೋಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.