ADVERTISEMENT

ಶಾಲೆಗಳಿಗೆ ಹೊಸ ಕೋಣೆ; ಪ್ರಸ್ತಾವ ಸಲ್ಲಿಸಿ

ಸರ್ಕಾರದ ಗಮನ ಸೆಳೆದು ಅನುದಾನ ತರುತ್ತೇನೆ; ರಘು ಆಚಾರ್

​ಪ್ರಜಾವಾಣಿ ವಾರ್ತೆ
Published 13 ಜುಲೈ 2019, 12:09 IST
Last Updated 13 ಜುಲೈ 2019, 12:09 IST
ಚಿತ್ರದುರ್ಗದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಿರ್ಮಾಣಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕ ಚಾಲನೆಗೂ ಮುನ್ನ ವಿಧಾನಪರಿಷತ್ ಸದಸ್ಯ ರಘು ಆಚಾರ್ ಮಾತನಾಡಿದರು. ಮಂಜುನಾಥ ಗೊಪ್ಪೆ, ಮಮತಾ ನೆರ್ಲಿಗೆ, ಮೀನಾಕ್ಷಿ ಇದ್ದರು.
ಚಿತ್ರದುರ್ಗದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಿರ್ಮಾಣಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕ ಚಾಲನೆಗೂ ಮುನ್ನ ವಿಧಾನಪರಿಷತ್ ಸದಸ್ಯ ರಘು ಆಚಾರ್ ಮಾತನಾಡಿದರು. ಮಂಜುನಾಥ ಗೊಪ್ಪೆ, ಮಮತಾ ನೆರ್ಲಿಗೆ, ಮೀನಾಕ್ಷಿ ಇದ್ದರು.   

ಚಿತ್ರದುರ್ಗ: ‘ತಾಲ್ಲೂಕಿನ ಯಾವ್ಯಾವ ಸರ್ಕಾರಿ ಶಾಲೆಗಳಲ್ಲಿ ಹೆಚ್ಚುವರಿ ಕೋಣೆಗಳ ಅವಶ್ಯಕತೆ ಇದೆ ಎಂಬುದನ್ನು ಮೊದಲು ಪಟ್ಟಿ ಮಾಡಿ. ಶಿಕ್ಷಣ ಇಲಾಖೆಯಿಂದ ಕ್ರಿಯಾಯೋಜನೆ ಸಿದ್ಧಪಡಿಸಿ ಪ್ರಸ್ತಾವ ಸಲ್ಲಿಸಿ’ ಎಂದು ವಿಧಾನಪರಿಷತ್ ಸದಸ್ಯ ರಘು ಆಚಾರ್ ಅಧಿಕಾರಿಗಳಿಗೆ ಸೂಚಿಸಿದರು.

ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಎಂಎಲ್‌ಸಿ ಅನುದಾನದಲ್ಲಿ ನಿರ್ಮಾಣವಾದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಕೆಲ ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಯಾ ಶಾಲೆಗಳ ಮುಖ್ಯ ಶಿಕ್ಷಕರು ಶಿಥಿಲಾವಸ್ಥೆಯಲ್ಲಿ ಇರುವಂಥ ಕೋಣೆಗಳ ದುರಸ್ತಿಗೆ ಕ್ರಮ ಕೈಗೊಳ್ಳಿ ಎಂಬ ಬೇಡಿಕೆ ಇಟ್ಟಿದ್ದಾರೆ. ಸಮಸ್ಯೆಗಳಿದ್ದಲ್ಲಿ ಪ್ರಸ್ತಾವ ಸಲ್ಲಿಸಿ, ರಾಜ್ಯದ ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಭರವಸೆ ನೀಡಿದರು.

ADVERTISEMENT

‘ಸರ್ಕಾರಿ ಪ್ರೌಢಶಾಲೆ ಕೋಟೆ ಸಮೀಪವಿರುವ ಟಿಸಿಎಚ್‌ ಕಾಲೇಜು ಕಟ್ಟಡವನ್ನು ಅನೇಕ ದಿನಗಳಿಂದ ಉಪಯೋಗಿಸುತ್ತಿಲ್ಲ. ಅದನ್ನು ಶಾಲೆಗೆ ನೀಡಿದರೆ, ಮತ್ತಷ್ಟು ಅಭಿವೃದ್ಧಿ ಪಡಿಸಲು ಅನುಕೂಲವಾಗಲಿದೆ. ಅಲ್ಲದೆ, ಶಾಲೆ ವ್ಯಾಪ್ತಿಯ ಸುತ್ತ ತಡೆಗೋಡೆ ನಿರ್ಮಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಈ ಬಗ್ಗೆ ಕ್ರಮ ಕೈಗೊಳ್ಳಿ’ ಎಂದು ಶಾಲೆಯ ಮುಖ್ಯಶಿಕ್ಷಕ ಜಗದೀಶ್ ಮನವಿ ಮಾಡಿದರು.

ನಗರಸಭೆ ಸದಸ್ಯ ಮಂಜುನಾಥ ಗೊಪ್ಪೆ, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಮೀನಾಕ್ಷಿ, ಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ಮಮತಾ ನೆರ್ಲಿಗೆ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.