ಹಿರಿಯೂರು: ನಗರದಲ್ಲಿ ಬೀದಿ ದೀಪ ನಿರ್ವಹಣೆ ಸಂಬಂಧ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿದ್ದು, ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಜೆ.ಆರ್. ಅಜಯ್ ಕುಮಾರ್ ಆರೋಪಿಸಿದರು.
ಬೀದಿ ದೀಪ ನಿರ್ವಹಣೆಯ ಗುತ್ತಿಗೆ ಪಡೆದಿರುವವರನ್ನು ಕರೆಯಿಸಿ ಎಚ್ಚರಿಕೆ ನೀಡುವಂತೆ ಪೌರಾಯುಕ್ತರಿಗೆ ಹಲವು ಬಾರಿ ಮೌಖಿಕವಾಗಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಕರ್ತವ್ಯದಲ್ಲಿ ತೋರಿಸುತ್ತಿರುವ ನಿರ್ಲಕ್ಷ್ಯದಿಂದ ಚುನಾಯಿತ ಜನಪ್ರತಿನಿಧಿಗಳು ಸಾರ್ವಜನಿಕರಿಂದ ಟೀಕೆಗಳನ್ನು ಎದುರಿಸಬೇಕಾಗಿದೆ. ಗುತ್ತಿಗೆದಾರರ ವಿರುದ್ಧ ಹಲವು ಬಾರಿ ದೂರು ನೀಡಿದ್ದರೂ, ಕ್ರಮ ಕೈಗೊಳ್ಳದ ನಗರಸಭೆ ಅಧಿಕಾರಿಗಳು ಗುತ್ತಿಗೆದಾರನೊಂದಿಗೆ ಶಾಮೀಲಾಗಿ ಪ್ರತಿ ತಿಂಗಳು ಅವರಿಗೆ ಬಿಲ್ ಪಾವತಿಸುತ್ತಿದ್ದಾರೆ ಎಂದು ಅವರು ದೂರಿದರು.
ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಅವರು ಸದರಿ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಬೀದಿ ದೀಪ ನಿರ್ವಹಣೆ ಕುರಿತು ತನಿಖೆ ನಡೆಸಬೇಕು. ಗುತ್ತಿಗೆದಾರರಿಗೆ ಯಾವುದೇ ಬಿಲ್ ಪಾವತಿಸಬಾರದು. ಟೆಂಡರ್ ಅನ್ನು ತಕ್ಷಣ ರದ್ದುಪಡಿಸಿ ಹೊಸದಾಗಿ ಟೆಂಡರ್ ಕರೆಯಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆಯಲಾಗಿದೆ ಎಂದು ಅಜಯ್ ಕುಮಾರ್ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.