ADVERTISEMENT

ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಪ್ರತಿಭಟನೆ

ಮೊಳಕಾಲ್ಮುರಿನಲ್ಲಿ ಕೈಕೊಟ್ಟ ಮಳೆ, ಹತ್ತಿಗೆ ರೋಗಬಾಧೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2024, 15:28 IST
Last Updated 2 ಆಗಸ್ಟ್ 2024, 15:28 IST
ಮೊಳಕಾಲ್ಮುರಿನ ತಾಲ್ಲೂಕು ಕಚೇರಿ ಎದುರು ರಾಜ್ಯ ರೈತಸಂಘದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು
ಮೊಳಕಾಲ್ಮುರಿನ ತಾಲ್ಲೂಕು ಕಚೇರಿ ಎದುರು ರಾಜ್ಯ ರೈತಸಂಘದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು    

ಮೊಳಕಾಲ್ಮುರು: ಮಳೆ ಕೈ ಕೊಟ್ಟಿದ್ದರಿಂದ ಬಿತ್ತನೆ ಕೈಗೊಳ್ಳಲು ಸಾಧ್ಯವಾಗದೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಮೊಳಕಾಲ್ಮುರು ಮತ್ತು ಚಳ್ಳಕೆರೆ ತಾಲ್ಲೂಕುಗಳನ್ನು ಬರಪೀಡಿತ ಎಂದು ಕೂಡಲೇ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತಸಂಘದ ಕಾರ್ಯಕರ್ತರು ತಾಲ್ಲೂಕು ಆಡಳಿತ ಸೌಧದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕು ಸಂಪೂರ್ಣ ಮಳೆಯಾಶ್ರಿತವಾಗಿದ್ದು, ಮುಂಗಾರು ಹಂಗಾಮಿನಲ್ಲಿ ಒಂದು ಬೆಳೆಯನ್ನು ಮಾತ್ರ ಇಲ್ಲಿ ಬೆಳೆಯಲಾಗುತ್ತಿದೆ. ಈ ವರ್ಷ ಆಗಸ್ಟ್‌ ಬಂದರೂ ಹದ ಮಳೆಯಾಗದ ಕಾರಣ ಬಿತ್ತನೆಯಾಗಿಲ್ಲ. ರೈತರು ತಲೆ ಮೇಲೆ ಕೈ ಹೊತ್ತು ಕೂತಿದ್ದು, ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವ ಮೂಲಕ ನೆರವಿಗೆ ಬರಬೇಕು ಎಂದು ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮನವಿ ಮಾಡಿದರು.

ಸರ್ಕಾರ ಸಮೀಕ್ಷೆ ನಡೆಸಿ ನಷ್ಟ ಪರಿಹಾರ ನೀಡಬೇಕು. ದೇವಸಮುದ್ರ ಹೋಬಳಿಯಲ್ಲಿ ಬಿತ್ತನೆ ಮಾಡಿದ್ದ ಹತ್ತಿಯು ಬೆಂಕಿರೋಗಕ್ಕೆ ತುತ್ತಾಗಿದ್ದು, ಪ್ರತಿ ಎಕರೆಗೆ ₹ 40,000ಕ್ಕೂ ಹೆಚ್ಚು ಖರ್ಚು ಮಾಡಿರುವ ರೈತರು ದಿಕ್ಕು ತೋಚದಂತಾಗಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳು ಕೂಡಲೇ ಈ ಬಗ್ಗೆ ಗಮನಹರಿಸಿ ಬೀಜ ವಿತರಿಸಿರುವ ಕಂಪನಿಗಳ ವಿರುದ್ಧ ಕ್ರಮದ ಜತೆಗೆ ಪರಿಹಾರಕ್ಕೆ ಶಿಫಾರಸು ಮಾಡಬೇಕು ಎಂದು ಮನವಿ ಮಾಡಿದರು.

ADVERTISEMENT

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.‌ ಮಂಜುನಾಥ್‌, ಮುಖಂಡರಾದ ಟಿ. ಚಂದ್ರಣ್ಣ, ಎಚ್.ವಿ. ವೀರಯ್ಯ, ಮೇಸ್ತ್ರಿ ಪಾಪಯ್ಯ, ದಾನಸೂರನಾಯಕ, ದೊಡ್ಡಪೆನ್ನಯ್ಯ, ಹೇಮಣ್ಣ, ಭೀಮಣ್ಣ, ಬಸಣ್ಣ, ನಾಗೇಶ್‌, ನಾಗರಾಜಪ್ಪ, ಗುರಪ್ಪ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.