ADVERTISEMENT

ಪಾಕ್‌, ಬಾಂಗ್ಲಾ ಸೇರಿ ಅಖಂಡ ಭಾರತ ಬಿಜೆಪಿ ಸಂಕಲ್ಪ: ನಾರಾಯಣಸ್ವಾಮಿ 

​ಪ್ರಜಾವಾಣಿ ವಾರ್ತೆ
Published 23 ಜನವರಿ 2020, 12:15 IST
Last Updated 23 ಜನವರಿ 2020, 12:15 IST
ಎ.ನಾರಾಯಣಸ್ವಾಮಿ
ಎ.ನಾರಾಯಣಸ್ವಾಮಿ   

ಚಿತ್ರದುರ್ಗ: ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಸೇರಿಸಿ ಅಖಂಡ ಭಾರತ ನಿರ್ಮಾಣ ಮಾಡುವುದು ಬಿಜೆಪಿ ಸಂಕಲ್ಪ. ಈ ಎರಡು ರಾಷ್ಟ್ರಗಳಲ್ಲಿ ಹಿಂದುತ್ವವನ್ನು ಸಾರಿ ಹೇಳುತ್ತೇವೆ ಎಂದು ಸಂಸದ ಎ.ನಾರಾಯಣಸ್ವಾಮಿ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಖಂಡ ಭಾರತ ನಿರ್ಮಾಣ ದೇಶ ಭಕ್ತರ ಕನಸು. ಭಯೋತ್ಪಾದನೆ ನಿಗ್ರಹ ಮಾಡಲು ಇದು ಅತ್ಯಗತ್ಯ. ಉಗ್ರ ಚಟುವಟಿಕೆಯಲ್ಲಿ ತೊಡಗಿದವರನ್ನು ಒದ್ದು ಹೊರಗೆ ಹಾಕುತ್ತೇವೆ’ ಎಂದು ಚಿಟಕಿ ಹೊಡೆದರು.

‘‍ಫ್ರೀ ಕಾಶ್ಮಿರಕ್ಕೆ ಕುಮ್ಮಕ್ಕು ನೀಡಿ ಮತ್ತೊಂದು ಪಾಕಿಸ್ತಾನ ಸೃಷ್ಟಿಸುವ ಹುನ್ನಾರ ದೇಶದಲ್ಲಿ ನಡೆಯುತ್ತಿದೆ. ಕಾಂಗ್ರೆಸ್‌ ಸೇರಿದಂತೆ ವಿರೋಧ ಪಕ್ಷಗಳು ಇದಕ್ಕೆ ಕುಮ್ಮಕ್ಕು ನೀಡುತ್ತಿವೆ. ಈ ದೇಶದ ಒಂದಿಂಚು ನೆಲವನ್ನು ಬೇರೆಯವರಿಗೆ ಬಿಟ್ಟು ಕೊಡುವುದಿಲ್ಲ’ ಎಂದು ಕಿಡಿ ಕಾರಿದರು.

ADVERTISEMENT

‘ಮಂಗಳೂರಿನಲ್ಲಿ ನಡೆದ ಬಾಂಬ್‌ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸವನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಾಡುತ್ತಿದ್ದಾರೆ. ಆದಿತ್ಯ ರಾವ್‌ ಮಾನಸಿಕ ಅಸ್ವಸ್ಥ ಎಂಬುದು ಇನ್ನೂ ದೃಢಪಟ್ಟಿಲ್ಲ ಎಂದರು.

ಆರೋಪಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಪಾಕಿಸ್ತಾನದ ಏಜೆಂಟರಂತೆ ವರ್ತಿಸುತ್ತಿವೆ. ಬಾಂಬ್‌ ಸ್ಫೋಟದ ಹಿಂದೆ ವಿರೋಧ ಪಕ್ಷಗಳ ಕೈವಾಡ ಇರಬಹುದು’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.