
ಚಿತ್ರದುರ್ಗ: ‘ಟ್ರಾಫಿಕ್ ಪೊಲೀಸರ ಕಿರುಕುಳದಿಂದ ಶನಿವಾರ ರಾತ್ರಿ ಆಟೊ ಚಾಲಕ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ’ ಎಂದು ಆರೋಪಿಸಿ ಚಿತ್ರದುರ್ಗ ಆಟೊ ಚಾಲಕರ ಮತ್ತು ಮಾಲೀಕರ ಒಕ್ಕೂಟದಿಂದ ಭಾನುವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು, ‘ಘಟನೆಗೆ ಕಾರಣರಾದ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸಲಾಗುತ್ತದೆ’ ಎಂದು ಎಚ್ಚರಿಸಿದರು.
‘ಚಿಕಿತ್ಸೆ ಪಡೆಯುತ್ತಿರುವ ಆಟೊ ಚಾಲಕ ಮಾಳಪ್ಪನಹಟ್ಟಿಯ ತಿಪ್ಪೇಸ್ವಾಮಿ (35) ಅವರಿಗೆ ಚಿಕಿತ್ಸೆ ನೀಡಲು ಹಾಗೂ ಮುಂದಿನ ಜೀವನದ ಉದ್ದೇಶಕ್ಕಾಗಿ ಸರ್ಕಾರದಿಂದ ಕನಿಷ್ಠ ₹25 ಲಕ್ಷ ಪರಿಹಾರ ಒದಗಿಸಬೇಕು. ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಕರ್ತವ್ಯದಿಂದ ವಜಾಗೊಳಿಸಲು ಆದೇಶ ಹೊರಡಿಸಬೇಕು’ ಎಂದು ಆಗ್ರಹಿಸಿದರು.
‘ಜಿಲ್ಲೆಯಲ್ಲಿ ಆಟೊ ಚಾಲಕರ ಮೇಲೆ ಪೊಲೀಸರು ನಡೆಸುತ್ತಿರುವ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕು. ಜತೆಗೆ ಏಕವಚನದಲ್ಲಿ ನಿಂದಿಸುವುದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಸಂಘದಿಂದ ಉಗ್ರ ಹೋರಾಟ ನಡೆಸಲಾಗುತ್ತದೆ’ ಎಂದು ತಿಳಿಸಿದರು.
ಏಕಾಏಕಿ ಪ್ರತಿಭಟನೆ ನಡೆಸಿದ್ದರ ಪರಿಣಾಮ ವೃತ್ತಕ್ಕೆ ಸೇರ್ಪಡೆಗೊಳ್ಳುವ ನಾಲ್ಕು ರಸ್ತೆಗಳನ್ನು ಬಂದ್ ಮಾಡಲಾಯಿತು. ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1ರ ವರೆಗೆ ಪ್ರತಿಭಟನೆ ನಡೆಸಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಶಿವಕುಮಾರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಪ್ರತಿಭಟನಕಾರರ ಮನವೊಲಿಸಿದ ಪರಿಣಾಮ ಪ್ರತಿಭಟನೆ ಹಿಂಪಡೆದರು.
ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಆಟೊ ಚಾಲಕ ಮಾಳಪ್ಪನಹಟ್ಟಿಯ ತಿಪ್ಪೇಸ್ವಾಮಿಯನ್ನು ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಟೊ ಚಾಲಕ ತಿಪ್ಪೇಸ್ವಾಮಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿರುವುದು ಕಂಡು ಬಂದಿದೆ. ಎಎಸ್ಪಿ ಕಡೆಯಿಂದ ಪ್ರಕರಣ ತನಿಖೆ ಮಾಡಿಸಿ ಪೊಲೀಸರ ತಪ್ಪು ಕಂಡು ಬಂದರೆ ಕ್ರಮಕೈಗೊಳ್ಳುತ್ತೇವೆರಂಜಿತ್ ಕುಮಾರ್ ಬಂಡಾರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
‘ಪೊಲೀಸರನ್ನು ಹೆದರಿಸಲು ಹೋಗಿ ಅವಘಡ’
‘ಟ್ರಾಫಿಕ್ ನಿಯಮ ಉಲ್ಲಂಘಿಸಿದಾಗ ದಂಡ ಹಾಕುತ್ತೇವೆ. ಈ ಘಟನೆಯಲ್ಲಿ ಪೊಲೀಸರ ದೌರ್ಜನ್ಯಕ್ಕಿಂತ ಜನರ ಉದಾಸೀನತೆ ಕಂಡು ಬಂದಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು. ‘ಆಟೊ ಚಾಲಕ ತಿಪ್ಪೇಸ್ವಾಮಿ ನಮ್ಮ ಸಿಬ್ಬಂದಿ ಜತೆ ಗಾಂಧಿ ವೃತ್ತದಲ್ಲಿ ಶನಿವಾರ ರಾತ್ರಿ ವಾಗ್ವಾದ ಮಾಡಿದ್ದಾನೆ. ಅಲ್ಲಿಂದ ವಾಹನ ಬಿಟ್ಟು ಹೋಗಲು ಯತ್ನಿಸಿದಾಗ ನಮ್ಮ ಸಿಬ್ಬಂದಿ ಆಟೊದಲ್ಲಿ ಕೂರಿಸಲು ಯತ್ನಿಸಿದ್ದಾರೆ. ಆದರೆ ಆತ ಆಟೊ ಬಿಟ್ಟು ಅಲ್ಲಿಂದ ಹೋಗಿದ್ದಾನೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು. ‘ಆಟೊ ಬಿಟ್ಟು ಹೋದ ಒಂದು ಗಂಟೆ ಬಳಿಕ ಗಾಂಧಿ ವೃತ್ತಕ್ಕೆ ಬಂದು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಘಟನೆಯಲ್ಲಿ ಶೇ 50 ರಷ್ಟು ದೇಹ ಸುಟ್ಟು ಗಾಯಗಳಾಗಿವೆ. ಚಿತ್ರದುರ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದೇವೆ’ ಎಂದು ತಿಳಿಸಿದರು. ‘ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವವರೆಗೆ ಯಾರೂ ತಡೆದಿಲ್ಲ. ಪೊಲೀಸರನ್ನು ಹೆದರಿಸಲು ಹೋಗಿ ಈ ರೀತಿ ಆಗಿದೆ. ಸದ್ಯ ಆತನ ಸ್ಥಿತಿ ಗಂಭೀರವಾಗಿದೆ. ನಾವು ವೈದ್ಯರ ಸಂಪರ್ಕದಲ್ಲಿದ್ದೇವೆ. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಲು ತಯಾರಿದ್ದೇವೆ’ ಎಂದು ಹೇಳಿದರು. ‘ಈ ವಿಷಯದಲ್ಲಿ ಗೊಂದಲ ಸೃಷ್ಟಿಯಾಗಿದೆ. ಪೊಲೀಸರು ಅವರ ಕರ್ತವ್ಯ ಮಾಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ ಕುರಿತು ಪ್ರಕರಣ ದಾಖಲಿಸುತ್ತೇವೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.