ADVERTISEMENT

ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯ

ಆರ್ಯ ಈಡಿಗ ಸಮಾಜದ ಪ್ರಣವಾನಂದ ಸ್ವಾಮೀಜಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 9 ಜುಲೈ 2021, 11:03 IST
Last Updated 9 ಜುಲೈ 2021, 11:03 IST
ಪ್ರಣವಾನಂದ ಸ್ವಾಮೀಜಿ
ಪ್ರಣವಾನಂದ ಸ್ವಾಮೀಜಿ   

ಚಿತ್ರದುರ್ಗ: ‘ಈಡಿಗ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಬೇಕು ಹಾಗೂ ಮಾಲೀಕಯ್ಯ ಗುತ್ತೇದಾರ್‌ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಆರ್ಯ ಈಡಿಗ ಸಮಾಜದ ಪ್ರಣವಾನಂದ ಸ್ವಾಮೀಜಿ ಒತ್ತಾಯಿಸಿದರು.

‘ಮಾಲೀಕಯ್ಯ ಗುತ್ತೇದಾರ್ ಅವರನ್ನು ಕಾಂಗ್ರೆಸ್‌ನಿಂದ ಕರೆತಂದು ಬಿಜೆಪಿಗೆ ಸೇರಿಸಿಕೊಂಡ ಬಳಿಕ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಆ ಮಾತಿಗೆ ತಪ್ಪಿ ನಡೆಯದೇ ಸಚಿವರನ್ನಾಗಿಸಬೇಕು’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

‘ರಾಜ್ಯದಲ್ಲಿನ ಈಡಿಗ ಸಮುದಾಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಕಡೆಗಣಿಸಿದೆ. ಬಿಜೆಪಿಯಲ್ಲಿ ಸಮುದಾಯದ ಏಳು ಶಾಸಕರಿದ್ದಾರೆ. ಅದರಲ್ಲಿ ಒಬ್ಬರನ್ನು ಮಾತ್ರ ಸಚಿವರನ್ನಾಗಿ ಮಾಡಲಾಗಿದೆ. ಪ್ರತಿಯೊಬ್ಬರು ಅವರವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೂ, ಸಮುದಾಯದ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಇನ್ನೊಬ್ಬರಿಗೆ ಸಚಿವ ಸ್ಥಾನ ನೀಡಿ, ಜವಾಬ್ದಾರಿಯುತ ಡಿಸಿಎಂ ಸ್ಥಾನ ನೀಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಇವು ಸಮುದಾಯದ ನ್ಯಾಯಯುತ ಬೇಡಿಕೆ. ಇವೆಲ್ಲವನ್ನು ಹದಿನೈದು ದಿನದೊಳಗೆ ಈಡೇರಿಸಲೇಬೇಕು. ಇಲ್ಲದಿದ್ದರೆ, ಕೊಪ್ಪಳ ಜಿಲ್ಲೆಯ ಗಂಗಾವತಿಯ ಹೇಮಗುಡ್ಡದಲ್ಲಿ ಜುಲೈ 25ರಂದು ಚಿಂತನ–ಮಂಥನ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕಪಾಠ ಕಲಿಸಲಾಗುವುದು’ ಎಂದು ಸ್ವಾಮೀಜಿ ಎಚ್ಚರಿಸಿದರು.

ಆರ್ಯ ಈಡಿಗ ಸಮುದಾಯದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಜೀವನ್, ಹಿರಿಯೂರು ತಾಲ್ಲೂಕು ಆರ್ಯ ಈಡಿಗರ ಸಂಘದ ಉಪಾಧ್ಯಕ್ಷ ಎ.ಉಮೇಶ್, ಮುಖಂಡರಾದ ಲಕ್ಷ್ಮೀಕಾಂತ್, ರವಿಕುಮಾರ್, ಮಹಂತೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.