ADVERTISEMENT

ಚಿತ್ರದುರ್ಗ: ನಕಲಿ ಚೀಟಿ ರದ್ದುಪಡಿಸಲು ಆಗ್ರಹ

ಕಾರ್ಮಿಕ ಇಲಾಖೆ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2021, 15:43 IST
Last Updated 2 ಆಗಸ್ಟ್ 2021, 15:43 IST
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಕಟ್ಟಡ ಕಾರ್ಮಿಕರು ಸೋಮವಾರ ಪ್ರತಿಭಟನೆ ನಡೆಸಿದರು.
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಕಟ್ಟಡ ಕಾರ್ಮಿಕರು ಸೋಮವಾರ ಪ್ರತಿಭಟನೆ ನಡೆಸಿದರು.   

ಚಿತ್ರದುರ್ಗ: ಕಟ್ಟಡ ಕಾರ್ಮಿಕರ ಹೆಸರಿನಲ್ಲಿ ಸುಳ್ಳು ಗುರುತಿನ ಚೀಟಿ ಪಡೆದಿರುವವರನ್ನು ಪತ್ತೆ ಮಾಡಬೇಕು ಎಂದು ಆಗ್ರಹಿಸಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಕಾರ್ಮಿಕ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನೈಜ ಕಾರ್ಮಿಕರಿಗೆ ಮಾತ್ರ ಸರ್ಕಾರಿ ಸೌಲಭ್ಯಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.

ಕಟ್ಟಡ ಕಾರ್ಮಿಕರ ಹೋರಾಟದ ಫಲವಾಗಿ ಸೌಲಭ್ಯಗಳು ಸಿಗುತ್ತಿವೆ. ಕಾರ್ಮಿಕರ ಹೆಸರಿನಲ್ಲಿ ಸಾರ್ವಜನಿಕರು ಗುರುತಿನ ಚೀಟಿ ಪಡೆಯುತ್ತಿದ್ದಾರೆ. ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುವವರು, ಕೃಷಿ ಕಾರ್ಮಿಕರು, ಸರ್ಕಾರಿ ನೌಕರರ ಸಂಬಂಧಿಕರು ಚೀಟಿ ಹೊಂದಿದ್ದಾರೆ. ಲಂಚ ಪಡೆದು ಗುರುತಿನ ಚೀಟಿ ನೀಡಲಾಗುತ್ತಿದೆ. ಇದರಿಂದ ಕಾರ್ಮಿಕರ ಕಲ್ಯಾಣ ಮಂಡಳಿಯ ಸೌಲಭ್ಯಗಳು ನೈಜ ಕಾರ್ಮಿಕರನ್ನು ತಲುಪುತ್ತಿಲ್ಲ ಎಂದು ಆರೋಪಿಸಿದರು.

ADVERTISEMENT

ಕಾರ್ಮಿಕರ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿದೆ. ಕೊಳಗೇರಿ ನಿವಾಸಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ₹ 76 ಕೋಟಿ ವರ್ಗಾವಣೆ ಮಾಡಲಾಗಿದೆ. ಇದನ್ನು ಕೂಡಲೇ ಹಿಂಪಡೆಯಬೇಕು. ಕಟ್ಟಡ ಕಾರ್ಮಿಕರು ಮನೆ ನಿರ್ಮಿಸಿಕೊಳ್ಳಲು ₹ 5 ಲಕ್ಷ ನೆರವು ನೀಡಬೇಕು. ಕಾರ್ಮಿಕರು ಮೃತಪಟ್ಟರೆ ನೀಡುವ ಪರಿಹಾರ ಹೆಚ್ಚಿಸಬೇಕು, ಮಾಸಾಶನ ಪಡೆಯುತ್ತಿರುವ ಕಾರ್ಮಿಕರಿಗೆ ವೈದ್ಯಕೀಯ ಸಹಾಯಧನ ನೀಡಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.