ಚಿತ್ರದುರ್ಗ: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಯಾವ ಕಾರಣಕ್ಕೂ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ, ಜಿಲ್ಲಾ ಮೀಸಲಾತಿ ಹೋರಾಟ ಸಮಿತಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು. ಆಯೋಗದ ವರದಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಅಂಗೀಕರಿಸದಂತೆ ಮುಖ್ಯಮಂತ್ರಿಗೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು.
ಮುಖಂಡ ಆರ್. ನಿಂಗಾನಾಯ್ಕ್, ‘ಆಯೋಗ ಜನರ ಬಳಿಗೆ ಹೋಗದೆ ಸಂಘ–ಸಂಸ್ಥೆಗಳಿಂದ ಮಾಹಿತಿ ಪಡೆದಿದೆ. ಇದು ಅವೈಜ್ಞಾನಿಕವಾಗಿದೆ. ಒಂದು ವೇಳೆ ಸರ್ಕಾರ ಅಂಗೀಕರಿಸಿದ್ದೆ ಆದರೆ, ಶೋಷಿತ ಸಮುದಾಯಗಳು ಒಗ್ಗೂಡಿ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.
‘ಭೋವಿ, ಬಂಜಾರ, ಕೊರಚ, ಕೊರಮ, ಛಲವಾದಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಸದಾಶಿವ ಆಯೋಗದ ವರದಿ ಕಂಟಕವಾಗಿದೆ. ಪರಿಶಿಷ್ಟ ಜಾತಿಗಳ ಮಧ್ಯೆ ದ್ವೇಷ, ಅಸೂಯೆ, ಪ್ರಚೋದನೆ ಬಿತ್ತಲು ಪ್ರೇರೇಪಿಸಿದೆ. ಇಂತಹ ವರದಿ ಜಾರಿಗೆ ತರಲು ಪ್ರಯತ್ನಿಸುತ್ತಿರುವ ಸಚಿವರಾದ ಎ.ನಾರಾಯಣಸ್ವಾಮಿ, ಗೋವಿಂದ ಕಾರಜೋಳ ಅವರನ್ನು ಸಂಪುಟದಿಂದ ಕೈಬಿಡಬೇಕು’ ಎಂದು ಒತ್ತಾಯಿಸಿದರು.
ವರದಿಯ ವಿಚಾರದಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುತ್ತಿರುವುದು ನಿಲ್ಲಬೇಕು. ಹೋರಾಟದ ಹೆಸರಿನಲ್ಲಿ ಬಂಜಾರ ಸಮುದಾಯದ ಸೇವಾಲಾಲ್ ಸ್ವಾಮೀಜಿ, ಸಚಿವ ಪ್ರಭು ಚೌಹಾಣ್ ಅವರನ್ನು ಅವಹೇಳನ ಮಾಡುತ್ತಿರುವವರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಕೋರಿದರು.
ಮುಖಂಡರಾದ ಎಂ.ಎಸ್.ಶಿವನಾಯ್ಕ್, ರಮೇಶ್, ಕೆ. ಮಂಜುನಾಥ ನಾಯ್ಕ್, ಪ್ರಕಾಶ್ ರಾಮನಾಯ್ಕ್, ಮೂರ್ತಿನಾಯ್ಕ್, ಕೆ.ಜಿ.ಅನಂತಮೂರ್ತಿನಾಯ್ಕ್, ವೈ. ಕುಮಾರ್, ಸುರೇಶ್ ನಾಯ್ಕ್, ಚಿಕ್ಕಂದವಾಡಿ ತಿಪ್ಪೇಸ್ವಾಮಿ, ಮಂಜುನಾಥ್, ತುಳಸಿ ರಮೇಶ್, ಎಚ್. ಲಕ್ಷ್ಮಣ್, ಗೌನಳ್ಳಿ ಗೋವಿಂದಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.