ಚಿತ್ರದುರ್ಗ: ಪಿಎಸ್ಐ ನೇಮಕಾತಿ ಹಗರಣದ ವಿರುದ್ಧ ಧ್ವನಿಯತ್ತಿದ ಶಾಸಕ ಪ್ರಿಯಾಂಕ ಖರ್ಗೆ ಅವರನ್ನು ವಿಚಾರಣೆಗೆ ಒಳಪಡಿಸಲು ನೀಡಿದ ನೋಟಿಸ್ ಅನ್ನು ಸಿಐಡಿ ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮಾದಿಗ ಯುವ ಸೇನೆ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ನಗರದ ಪ್ರವಾಸಿ ಮಂದಿರದ ಎದುರು ಜಮಾಯಿಸಿದ ಪ್ರತಿಭಟನಕಾರರು ಒನಕೆ ಓಬವ್ವ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿದರು. ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ರವಾನಿಸಿದರು. ನೋಟಿಸ್ ಹಿಂಪಡೆಯದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ದುರಾಡಳಿತ, ನಿರುದ್ಯೋಗ, ಬೆಲೆ ಏರಿಕೆ ಹೆಚ್ಚಾಗುತ್ತಿದೆ. ಉದ್ಯೋಗದ ನೇಮಕಾತಿ ಪ್ರಕ್ರಿಯೆ ಅಕ್ರಮ ಮಾರ್ಗ ತುಳಿದಿದೆ. ಸರ್ಕಾರದ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಅವರಿಗೆ ನೋಟಿಸ್ ನೀಡಿದ್ದು ಖಂಡನೀಯ. ಶೋಷಿತ ಸಮುದಾಯದ ಧ್ವನಿ ಹತ್ತಿಕ್ಕುವ ಪ್ರಯತ್ನವಿದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸ್ ಇಲಾಖೆಯ ಎಸ್ಐ ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ಪ್ರಿಯಾಂಕ ಖರ್ಗೆ ಅವರು ಮೊದಲು ಧ್ವನಿಯತ್ತಿದ್ದರು. ಇದನ್ನು ಆಧರಿಸಿ ತನಿಖೆ ಮಾಡಬೇಕಾದ ಸರ್ಕಾರ, ಧ್ವನಿ ಅಡಗಿಸಲು ನೋಟಿಸ್ ನೀಡಿದೆ. ಬಿಜೆಪಿಯ ಪ್ರಭಾವಿ ನಾಯಕರು. ಅವರ ಪುತ್ರರು, ಉನ್ನತ ಅಧಿಕಾರಿಗಳ ಹೆಸರು ಹಗರಣದಲ್ಲಿ ಕೇಳಿಬರುತ್ತಿದೆ. ಅಂಥವರನ್ನು ಬಂಧಿಸುವ ಸಾಮರ್ಥ್ಯ ಸರ್ಕಾರಕ್ಕೆ ಇಲ್ಲ ಎಂದು ಕಿಡಿಕಾರಿದರು.
ರಾಜ್ಯ ಮಾದಿಗ ಯುವ ಸೇನೆ ಅಧ್ಯಕ್ಷ ಬಿ.ಓ.ಗಂಗಾಧರಯ್ಯ, ಕಾರ್ಯದರ್ಶಿ ಜೆ.ಪ್ರಸನ್ನ, ಉಪಾಧ್ಯಕ್ಷ ರಾಜಪ್ಪ ಜೆ.ಜೆ.ಹಟ್ಟಿ, ಪ್ರಧಾನ ಕಾರ್ಯದರ್ಶಿ ಮಲ್ಲಯ್ಯ, ಜಿಲ್ಲಾ ಘಟಕದ ಅಧ್ಯಕ್ಷ ಓ.ರಾಜಪ್ಪ, ಕಾಂಗ್ರೆಸ್ ಮುಖಂಡರಾದ ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ, ಓ.ಶಂಕರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.