ಚಿತ್ರದುರ್ಗ: ವಸತಿ ರಹಿತ ಅರ್ಹರಿಗೆ ನಿವೇಶನ, ಎಲ್ಲ ಜಾತಿಯ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಬೇಕು ಎಂದು ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.
ನೀಲಕಂಠೇಶ್ವರಸ್ವಾಮಿ ದೇಗುಲದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದರು. ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಜ್ಯಪಾಲರಿಗೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಲಾಯಿತು.
ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಆರ್. ಕೋದಂಡರಾಮ್, ‘ದಲಿತರು ಇಂದಿಗೂ ಮೂಲಸೌಕರ್ಯಕ್ಕಾಗಿ ಹೋರಾಡುತ್ತಿರುವುದು ದುರಂತ. ಅಂಬೇಡ್ಕರ್ ಅವರ ಆಶಯಗಳನ್ನೇ ಗಾಳಿಗೆ ತೂರಲಾಗಿದೆ’ ಎಂದು ದೂರಿದರು.
‘ವಸತಿ, ನಿವೇಶನಕ್ಕಾಗಿ ಅರ್ಹ ಫಲಾನುಭವಿಗಳು ಹೋರಾಟ ಮಾಡಿದರು ಕೂಡ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ. ಪ್ರಭಾವಿಗಳು ಸರ್ಕಾರದ ಸೌಲಭ್ಯ ದೋಚಿ ದಲಿತ, ಹಿಂದುಳಿದವರಿಗೆ ಅನ್ಯಾಯ ಮಾಡುತ್ತಿದ್ದಾರೆ. ಹೀಗಿದ್ದರೂ, ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳ ಪ್ರತಿಭಾವಂತ ಮಕ್ಕಳು ವಿದ್ಯಾರ್ಥಿ ವೇತನ ಇಲ್ಲದೆ, ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ನ್ಯಾಯಯುತ ಬೇಡಿಕೆ ಈಡೇರಿಸಲು ಮುಂದಾಗಬೇಕು’ ಎಂದು ಕೋರಿದರು.
ಸೇನೆ ರಾಜ್ಯ ಘಟಕದ ಉಪಾಧ್ಯಕ್ಷ ಎಂ. ಆನಂದ್ಕುಮಾರ್, ಮುಖಂಡರಾದ ಜೆ.ಇ. ಮಂಜುನಾಥ್, ಕೆ. ರಾಮಚಂದ್ರ, ಚಂದ್ರಪ್ಪ, ಪಿ.ಎಂ. ತಿಪ್ಪೇಸ್ವಾಮಿ, ಕಾಂತರಾಜ್, ಜಿ.ಆರ್. ಪ್ರಭಾಕರ್, ಸಿದ್ದಪ್ಪ, ಬಸವರಾಜ್, ರೇವಣಿಸಿದ್ದಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.