ಹಿರಿಯೂರು: ‘ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಮತಕಳ್ಳತನದ ಮೂಲಕ ಅಧಿಕಾರ ಹಿಡಿದಿದೆ ಎಂಬ ಸತ್ಯವನ್ನು ಒಪ್ಪಿಕೊಳ್ಳುವ ಮನಸ್ಸಿಲ್ಲದ ರಾಹುಲ್ ಗಾಂಧಿಯವರು ಚುನಾವಣಾ ಆಯೋಗದ ಮೇಲೆ ಗೂಬೆ ಕೂರಿಸುವ ಕೆಲಸದಲ್ಲಿ ತೊಡಗಿರುವುದು ಅವರ ವಿಲಕ್ಷಣ ವ್ಯಕ್ತಿತ್ವಕ್ಕೆ ನಿದರ್ಶನ’ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಅಭಿನಂದನ್ ಆರೋಪಿಸಿದರು.
‘ಹಿರಿಯೂರು ಕ್ಷೇತ್ರದಲ್ಲಿಯೂ ಎರಡೆರಡು ಕಡೆ ಮತ ಹೊಂದಿರುವವರನ್ನು ಬಹಿರಂಗಪಡಿಸಲು ಸಿದ್ಧರಿದ್ದೇವೆ. ಅದು ಸಾಬೀತಾದರೆ ತಮ್ಮ ಪಕ್ಷದ ಶಾಸಕರಿಂದ ರಾಜೀನಾಮೆ ಕೊಡಿಸುತ್ತಾರೆಯೇ’ ಎಂದು ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಸವಾಲು ಹಾಕಿದರು.
‘ಚುನಾವಣೆ ಸುಧಾರಣೆ ಬಗ್ಗೆ ನೈಜ ಕಾಳಜಿ ಇದ್ದರೆ ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತಪರಿಷ್ಕರಣೆಗೆ ವಿರೋಧ ಮಾಡುತ್ತಿರುವುದು ಏಕೆ? ಇಂತಹ ನಾಟಕ ಬಹಳ ದಿನ ನಡೆಯದು’ ಎಂದು ಹೇಳಿದರು.
‘ಕೇಂದ್ರದಲ್ಲಿ ಕಳೆದ 11 ವರ್ಷಗಳ ಬಿಜೆಪಿ ಆಡಳಿತ ಸಹಿಸಲಾಗದೆ, ಮುಂಬರುವ ಗ್ರಾಪಂ, ತಾಪಂ ಹಾಗೂ ಜಿಪಂ ಚುನಾವಣೆಗೆ ಜನರನ್ನು ಸೆಳೆಯಲು ಈಗಿನಿಂದಲೇ ಜನರನ್ನು ಒಲಿಸಿಕೊಳ್ಳಲು ಕಾಂಗ್ರೆಸ್ ನವರು ಹೊಸ ಗಿಮಿಕ್ ಆರಂಭಿಸಿದ್ದಾರೆ. 2023ರಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಮತಗಳ್ಳತನಕ್ಕೆ ಸಹಕಾರ ನೀಡಿರುವ ಅಧಿಕಾರಿಗಳ ವಿರುದ್ಧ ಏಕೆ ಕ್ರಮ ಜರುಗಿಸಿಲ್ಲ’ ಎಂದು ಪ್ರಶ್ನಿಸಿದರು.
ಬಿಜೆಪಿ ಪ್ರಧಾನ ಕಾರ್ಯದರ್ಶಿ ನಿತಿನ್ ಗೌಡ, ಎಸ್.ಸಿ. ಮೋರ್ಚಾ ಅಧ್ಯಕ್ಷ ಮಂಜುನಾಥ್, ಒಬಿಸಿ ಮೋರ್ಚಾ ಅಧ್ಯಕ್ಷ ನರೇಂದ್ರ ಸಿಂಗ್ ಜೋದ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.