ಚಿತ್ರದುರ್ಗ: ರೈತರಿಗೆ ವಂಚನೆ ಮಾಡುತ್ತಿರುವ ಖಾಸಗಿ ರೇಷ್ಮೆ ಮಂಡಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ನಗರದಲ್ಲಿ ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ‘ಜಿಲ್ಲೆಯಲ್ಲಿ ರೇಷ್ಮೆ ಬೆಳೆಗಾರರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಆದರೆ, ಮಾರುಕಟ್ಟೆ ಸೌಲಭ್ಯವಿಲ್ಲದ ಕಾರಣ ಸಮಸ್ಯೆಗೆ ಸಿಲುಕಿದ್ದಾರೆ. ಇದರ ಲಾಭವನ್ನು ಬಿ.ಜಿ. ಕೆರೆ ಮತ್ತು ಹಿರಿಯೂರಿನಲ್ಲಿರುವ ಖಾಸಗಿ ಮಂಡಿಗಳು ಪಡೆದು ರೈತರನ್ನು ವಂಚಿಸುತ್ತಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಮಂಡಿ ನಡೆಸುವವರು ಸರ್ಕಾರದಿಂದ ಅಥವಾ ಇಲಾಖೆಯಿಂದ ಯಾವುದೇ ರೀತಿಯ ಪರವಾನಗಿ ತೆಗೆದುಕೊಂಡಿಲ್ಲ. ತೂಕ, ದರ ನಿಗಧಿ ಹಾಗೂ ಸಾಗಾಣಿಕೆ ವೆಚ್ಚವನ್ನು ರೈತರ ಮೇಲೆ ಹಾಕಿ ಕಾನೂನು ವಿರೋಧಿ ಚಟುವಟಿಕೆ ಮಾಡುತ್ತಿದ್ದಾರೆ. ಆದ್ದರಿಂದ ಮಂಡಿಗಳ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು’ ಎಂದು ಆಗ್ರಹಿಸಿದರು. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ನುಲೇನೂರು ಶಂಕರಪ್ಪ, ರಾಜ್ಯ ಉಪಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಜಿಲ್ಲಾ ಕಾರ್ಯಾಧ್ಯಕ್ಷ ಹೊರಕೇರಪ್ಪ, ಮರ್ಲಹಳ್ಳಿ ರವಿಕುಮಾರ್, ರೇಷ್ಮೆ ಬೆಳೆಗಾರರ ಸಂಘದ ತಾಲ್ಲೂಕು ಅಧ್ಯಕ್ಷ ತಿಪ್ಪೇಸ್ವಾಮಿ, ಕೃಷ್ಣಮೂರ್ತಿ, ಮಂಜುನಾಥ್ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.