ADVERTISEMENT

ವೇತನ, ಭತ್ಯೆ ಪರಿಷ್ಕರಣೆಗೆ ಆಗ್ರಹಿಸಿ ಸರ್ಕಾರಿ ಫಾರ್ಮಸಿಸ್ಟ್‌ ಸಂಘ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2020, 15:32 IST
Last Updated 2 ಜನವರಿ 2020, 15:32 IST
ವೇತನ ಮತ್ತು ಭತ್ಯೆ ಪರಿಷ್ಕರಿಸುವಂತೆ ಆಗ್ರಹಿಸಿ ಫಾರ್ಮಸಿಸ್ಟ್‌ಗಳು ಗುರುವಾರ ಪ್ರತಿಭಟನೆ ನಡೆಸಿದರು.
ವೇತನ ಮತ್ತು ಭತ್ಯೆ ಪರಿಷ್ಕರಿಸುವಂತೆ ಆಗ್ರಹಿಸಿ ಫಾರ್ಮಸಿಸ್ಟ್‌ಗಳು ಗುರುವಾರ ಪ್ರತಿಭಟನೆ ನಡೆಸಿದರು.   

ಚಿತ್ರದುರ್ಗ: ವೇತನ ಹಾಗೂ ಭತ್ಯೆಯನ್ನು ಪರಿಷ್ಕರಣೆ ಮಾಡುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಫಾರ್ಮಸಿಸ್ಟ್‌ ಸಂಘ ಗುರುವಾರ ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿ ಕಚೇರಿಯ ಸಮೀಪ ಜಮಾಯಿಸಿದ ಪ್ರತಿಭಟನಾಕಾರರು ತೋಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದರು. ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ರವಾನೆ ಮಾಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಮೂರುವರೆ ಸಾವಿರಕ್ಕೂ ಹೆಚ್ಚು ಫಾರ್ಮಸಿಸ್ಟ್‌ಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದೇವೆ. ಆದರೆ, ಕಾಲಕ್ಕೆ ಅನುಗುಣವಾಗಿ ವೇತನ ಮತ್ತು ಭತ್ಯ ಪರಿಷ್ಕರಣೆ ಹೊಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಅಖಿಲ ಭಾರತೀಯ ತಾಂತ್ರಿಕ ಮಹಾಪರಿಷತ್ತು ಔಷಧ ವಿಜ್ಞಾನವನ್ನು ಎಂಜಿನಿಯರಿಂಗ್‌ ರೀತಿಯ ತಾಂತ್ರಿಕ ಶಿಕ್ಷಣವೆಂದು ಪರಿಗಣಿಸಿದೆ. ಆದರೆ, ಅದಕ್ಕೆ ಅನುಗುಣವಾದ ವೇತನ, ಭತ್ಯೆ ನೀಡುತ್ತಿಲ್ಲ. ಕೇಂದ್ರ ಹಾಗೂ ನೆರೆಯ ರಾಜ್ಯದ ಸಹೋದ್ಯೋಗಿಗಳಿಗೆ ಸಿಗುವ ಸೌಲಭ್ಯವೂ ಕರ್ನಾಟಕದ ಫಾರ್ಮಸಿಸ್ಟ್‌ಗಳಿಗೆ ಲಭ್ಯವಾಗುತ್ತಿಲ್ಲ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದು ಆಗ್ರಹಿಸಿದರು.

ಆರೋಗ್ಯ ಇಲಾಖೆಯಲ್ಲಿ ಪುನರ್‌ ಮನನ ಕಾರ್ಯಕ್ರಮಗಳಿಲ್ಲ. ಬದಲಾಗುವ ಔಷಧಗಳಿಗೆ ಸಂಬಂಧಿಸಿದಂತೆ ಫಾರ್ಮಸಿಸ್ಟ್‌ಗಳಿಗೆ ಜ್ಞಾನ ಪಡೆಯಲು ಸಾಧ್ಯವಾಗುತ್ತಿಲ್ಲ. ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಉಗ್ರಾಣಗಳಿಲ್ಲ. ಹೀಗಾಗಿ, ಔಷಧಗಳನ್ನು ಕಾಪಾಡಿಕೊಳ್ಳಲು ಆಗುತ್ತಿಲ್ಲ. ಕೂಡಲೇ ಸರ್ಕಾರ ಈ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದರು.

ಫಾರ್ಮಸಿಸ್ಟ್‌ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎನ್‌.ಮೋಹನಕುಮಾರ್‌ ಗುಪ್ತ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.