ADVERTISEMENT

ಚಿತ್ರದುರ್ಗ: ಕೃಷಿ ಕಾಯ್ದೆ ಹಿಂಪಡೆದಿದ್ದಕ್ಕೆ ವಿಜಯೋತ್ಸವ

ವಿವಿಧ ಸಂಘಟನೆಗಳ ಕಾರ್ಯಕರ್ತರಿಂದ ಹಣ್ಣು, ಸಿಹಿ ಹಂಚಿ ಸಂಭ್ರಮಾಚರಣೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2021, 4:41 IST
Last Updated 12 ಡಿಸೆಂಬರ್ 2021, 4:41 IST
ಕೇಂದ್ರ ಸರ್ಕಾರ ಕೃಷಿ ಕಾಯ್ದೆ ಹಿಂಪಡೆದಿರುವುದಕ್ಕೆ ರಾಜ್ಯ ರೈತ ಸಂಘ ಹಾಗೂ ಇತರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಚಿತ್ರದುರ್ಗದಲ್ಲಿ ಶನಿವಾರ ಹಣ್ಣು, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು
ಕೇಂದ್ರ ಸರ್ಕಾರ ಕೃಷಿ ಕಾಯ್ದೆ ಹಿಂಪಡೆದಿರುವುದಕ್ಕೆ ರಾಜ್ಯ ರೈತ ಸಂಘ ಹಾಗೂ ಇತರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಚಿತ್ರದುರ್ಗದಲ್ಲಿ ಶನಿವಾರ ಹಣ್ಣು, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು   

ಚಿತ್ರದುರ್ಗ: ಕೇಂದ್ರ ಸರ್ಕಾರ ನೂತನವಾಗಿ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದ್ದಕ್ಕೆ ಇಲ್ಲಿ ಶನಿವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಇತರ ಸಂಘಟನೆಗಳು ಹಣ್ಣು, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಸ್ವರಾಜ್ ಇಂಡಿಯಾ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಜೆ. ಯಾದವರೆಡ್ಡಿ, ‘ಪ್ರಧಾನಿ ಮೋದಿ ಅವರು
ಮುಂಚೆಯೇ ರೈತರ ಸಮಸ್ಯೆ ಆಲಿಸಿ ಉತ್ತಮ ನಿರ್ಧಾರ ಕೈಗೊಂಡಿದಿದ್ದರೆ 700ಕ್ಕೂ ಹೆಚ್ಚು ರೈತರ ಪ್ರಾಣ ಉಳಿಯುತ್ತಿತ್ತು’ ಎಂದರು.

‘ಜನಾಭಿಪ್ರಾಯದ ವಿರುದ್ಧ ಯಾವ ಸರ್ಕಾರವಾದರೂ ಈಜಲು ಸಾಧ್ಯವಿಲ್ಲ ಎಂಬುದನ್ನು ಈಗಲಾದರೂ ಆಳುವ ಸರ್ಕಾರಗಳು ಅರ್ಥ ಮಾಡಿಕೊಳ್ಳಬೇಕು. ಜನವಿರೋಧಿ ಧೋರಣೆ ಅನುಸರಿಸಿದರೆ, ಶಾಂತಿಯುತ ಹೋರಾಟ ಅನಿವಾರ್ಯ’ ಎಂದು ಎಚ್ಚರಿಸಿದರು.

ADVERTISEMENT

ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ. ಸುರೇಶ್‌ಬಾಬು, ‘ದೆಹಲಿಯಲ್ಲಿ ರೈತರು ವರ್ಷಗಟ್ಟಲೆ ನಡೆಸಿದ ಹೋರಾಟ ಸ್ವಾತಂತ್ರ್ಯ ಹೋರಾಟವನ್ನೇ ನೆನಪಿಸುವಂತ್ತಿತ್ತು. ರಾಜ್ಯ ಸರ್ಕಾರ ವಿದ್ಯುತ್ ದರ ಹೆಚ್ಚಿಸಲು ಮುಂದಾಗಿರುವುದನ್ನು ಕೂಡಲೇ ಕೈಬಿಡಬೇಕು’ ಎಂದು ಒತ್ತಾಯಿಸಿದರು.

ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ. ನುಲೇನೂರು ಎಂ. ಶಂಕರಪ್ಪ, ‘ಸತತ ಹೋರಾಟದಿಂದ ಮಾತ್ರ ನ್ಯಾಯ ಪಡೆಯಲು ಸಾಧ್ಯ ಎಂಬುದಕ್ಕೆ ದೆಹಲಿ ಹೋರಾಟ ಸಾಕ್ಷಿಯಾಗಿದೆ. ಹೋರಾಟಗಾರರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು’ ಎಂದು ಸರ್ಕಾರಕ್ಕೆ ಆಗ್ರಹಿಸಿದರು.

ಮುಖಂಡರಾದ ಕೆ.ಪಿ. ಭೂತಯ್ಯ, ಬಸ್ತಿಹಳ್ಳಿ ಸುರೇಶ್‌ಬಾಬು, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಹಂಪಯ್ಯನಮಾಳಿಗೆ ಧನಂಜಯ, ಕೋಗುಂಡೆ ರವಿ, ಪ್ರಭು, ಮಲ್ಲಾಪುರದ ತಿಪ್ಪೇಸ್ವಾಮಿ, ಹಮಾಲರ ಸಂಘದ ಬಸವರಾಜಪ್ಪ, ಎಸ್‌ಯುಸಿಐನ ರವಿಕುಮಾರ್, ಲಿಂಗರಾಜ್, ಮೇಘನಾ, ತ್ರಿವೇಣಿ, ಟಿ. ಶಫಿವುಲ್ಲಾ, ವೈ. ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.