ADVERTISEMENT

ಕೂಡಲಸಂಗಮದಿಂದ ಬೆಂಗಳೂರಿನವರೆಗೆ ಜ. 2ರಿಂದ ಸತ್ಯಾಗ್ರಹ ಯಾತ್ರೆ: ಎಸ್.ಆರ್. ಹಿರೇಮಠ

ಎಸ್.ಆರ್. ಹಿರೇಮಠ್

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 6:49 IST
Last Updated 3 ಡಿಸೆಂಬರ್ 2022, 6:49 IST
ಎಸ್‌.ಆರ್‌.ಹಿರೇಮಠ್
ಎಸ್‌.ಆರ್‌.ಹಿರೇಮಠ್   

ಚಿತ್ರದುರ್ಗ: ಸಂವಿಧಾನದ ಮೌಲ್ಯ ಮತ್ತು ಆಶಯಗಳನ್ನು ರಕ್ಷಣೆ ಮಾಡುವ ಉದ್ದೇಶದಿಂದ ಕೂಡಲಸಂಗಮದಿಂದ ಬೆಂಗಳೂರಿನವರೆಗೆ ಸಮಾಜ ಪರಿವರ್ತನಾ ಸತ್ಯಾಗ್ರಹ ಯಾತ್ರೆಯನ್ನು ಜ. 2ರಿಂದ 11ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಪರಿವರ್ತನಾ ಸತ್ಯಾಗ್ರಹ ಯಾತ್ರೆಯ ಸಂಚಾಲಕ ಎಸ್.ಆರ್. ಹಿರೇಮಠ್ ತಿಳಿಸಿದರು.

‘ಪ್ರಜಾಪ್ರಭುತ್ವದಲ್ಲಿ ಸಾರ್ವಜನಿಕರೇ ಒಡೆಯರು. ಜನಪ್ರತಿನಿಧಿಗಳು ಸೇವಕರು ಎನ್ನುವುದನ್ನು ಜನರಿಗೆ ತಿಳಿಸುವುದಕ್ಕಾಗಿ ಈ ಯಾತ್ರೆ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವ ಹದಗೆಟ್ಟು ದೇಶ ಗಂಡಾಂತರ ಎದುರಿಸುತ್ತಿರುವುದರಿಂದ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕೋಮುವಾದಿ ಶಕ್ತಿಯ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲಾಗುವುದು’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

‘ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಾಗ ದೆಹಲಿಯಲ್ಲಿ ಲಕ್ಷಾಂತರ ರೈತರು ಚಳವಳಿ ನಡೆಸಿದರು. ಹೋರಾಟಕ್ಕೆ ಮಣಿದು ಕಾಯ್ದೆಗಳನ್ನು ಹಿಂಪಡೆಯಲಾಯಿತು. ಆದರೆ, ಕರ್ನಾಟಕದಲ್ಲಿ ಈ ಕರಾಳ ಕಾಯ್ದೆಗಳು ಇನ್ನೂ ಅನುಷ್ಠಾನದಲ್ಲಿವೆ. ರೈತರು, ದಲಿತರು, ಕಾರ್ಮಿಕರು, ಮಹಿಳೆಯರು ಗೌರವದಿಂದ ಬದುಕಲು ಸಾಧ್ಯವಾಗುತ್ತಿಲ್ಲ. ದೇಶದಲ್ಲಿ ಈಗ ಅಘೋಷಿತ ತುರ್ತು ಪರಿಸ್ಥಿತಿಯಿದೆ. ಎರಡನೇ ಸ್ವಾತಂತ್ರ್ಯ ಚಳವಳಿ ನಡೆಯಬೇಕಿದೆ’ ಎಂದು ಅಭಿಪ್ರಾಯಪಟ್ಟರು.

ADVERTISEMENT

ಮುಖಂಡ ಯತಿರಾಜ್, ‘ಮಂಗಳೂರಿನಿಂದ ಕೋಮು ಸೌಹಾರ್ದ ಜಾಥಾ, ದಲಿತರ ಮೇಲೆ ನಡೆಯುತ್ತಿರುವ ಹಲ್ಲೆ ಖಂಡಿಸಿ ಕೋಲಾರದಿಂದ ಯಾತ್ರೆ ಬರಲಿದೆ. ಹಲವು ಜಿಲ್ಲೆಯಿಂದ ಬರುವ ಯಾತ್ರೆಗಳು ತುಮಕೂರಿನಲ್ಲಿ ಸೇರಿ ಬೆಂಗಳೂರಿಗೆ ತೆರಳಲಿವೆ’ ಎಂದು ತಿಳಿಸಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಜಿ.ಸಿ. ಸುರೇಶ್‍ ಬಾಬು, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ. ನುಲೇನೂರು ಶಂಕರಪ್ಪ, ಉಪಾಧ್ಯಕ್ಷ ಕೆ.ಪಿ. ಭೂತಯ್ಯ, ಜಿಲ್ಲಾ ಘಟಕದ ಅಧ್ಯಕ್ಷ ಬಸ್ತಿಹಳ್ಳಿ ಜಿ. ಸುರೇಶ್‍ಬಾಬು, ಈ. ಸತ್ಯಕೀರ್ತಿ, ಎಂ.ಆರ್. ದಾಸೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.