
ಚಿತ್ರದುರ್ಗ: ‘ಸಂತ ಸೇವಾಲಾಲ್ ಅವರು ಮಾನವಕುಲದ ಉದ್ಧಾರಕ್ಕಾಗಿ ಶ್ರಮಿಸಿದ ಮಹಾನ್ ಚೇತನವಾಗಿದ್ದಾರೆ. ಅವರ ತತ್ವಾದರ್ಶಗಳು ಇಂದಿನ ಯುವಜನಕ್ಕೆ ಮಾದರಿಯಾಗಿವೆ’ ಎಂದು ಉಪವಿಭಾಗಾಧಿಕಾರಿ ಕಾಂತರಾಜ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತದ ವತಿಯಿಂದ ನಡೆದ ಸಂತ ಸೇವಾಲಾಲ್ ಜಯಂತಿಯಲ್ಲಿ ಮಾತನಾಡಿದರು.
‘ಸೇವಾಲಾಲ್ ಅವರು ಅಂದು ಲಂಬಾಣಿ ಸಮುದಾಯದಲ್ಲಿ ಮನೆಮಾಡಿದ್ದ ಮೂಢನಂಬಿಕೆಗಳನ್ನು ತೊಡೆದುಹಾಕಲು ಮತ್ತು ಶೈಕ್ಷಣಿಕವಾಗಿ ಜಾಗೃತಿ ಮೂಡಿಸಲು ಶ್ರಮಿಸಿದರು. ಸೇವಾಲಾಲ್ ಅವರು ಕೇವಲ ಸಮಾಜ ಸುಧಾರಕರಷ್ಟೇ ಅಲ್ಲದೆ ಆಯುರ್ವೇದ ಮತ್ತು ಪ್ರಕೃತಿ ಚಿಕಿತ್ಸೆಯಲ್ಲಿ ಪರಿಣಿತರಾಗಿದ್ದರು. ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿರಬೇಕು. ಇತರ ಜೀವಿಗಳನ್ನು ಸಂರಕ್ಷಿಸಬೇಕು ಎಂಬ ಸಂದೇಶ ನೀಡಿದ್ದರು’ ಎಂದರು.
‘ಜಾಗತೀಕರಣ ಮತ್ತು ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದ ನಡುವೆಯೂ ಲಂಬಾಣಿ ಸಮುದಾಯದವರು ತಮ್ಮ ವಿಶಿಷ್ಟ ಉಡುಗೆ–ತೊಡುಗೆ, ಹಬ್ಬಗಳು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಇಂದಿಗೂ ಉಳಿಸಿಕೊಂಡು ಬಂದಿರುವುದು ಹೆಮ್ಮೆಯ ವಿಷಯವಾಗಿದೆ. ಸೇವಾಲಾಲ್ ಅವರು ನೀಡಿರುವ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು’ ಎಂದರು.
‘ರಾಜ್ಯ ಸರ್ಕಾರವು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿ ಹಕ್ಕು ಪತ್ರ ವಿತರಿಸುವ ಮೂಲಕ ಲಂಬಾಣಿ ಸಮಾಜದ ದಶಕಗಳ ಕನಸನ್ನು ನನಸು ಮಾಡಿದೆ. ಫೆ. 14ರಂದು ಹಾವೇರಿಯಲ್ಲಿ ನಡೆದ ಸಮಾರಂಭದಲ್ಲಿ ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದೆ. ಇದರಿಂದ ನಿವಾಸಿಗಳಿಗೆ ಸ್ವಂತ ಸರ್ವೆ ನಂಬರ್ ಹಾಗೂ ಹಕ್ಕು ಪತ್ರಗಳು ದೊರೆಯಲಿವೆ’ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಶಿವಣ್ಣ ತಿಳಿಸಿದರು.
‘ಸಂತ ಸೇವಾಲಾಲ್ ಮಹಾರಾಜರು ಬಂಜಾರ ಸಮುದಾಯಕ್ಕೆ ಜ್ಞಾನ, ಅರಿವು ಮತ್ತು ಆಶ್ರಯ ನೀಡಿದ ಮಹಾನ್ ಗುರುಗಳಾಗಿದ್ದಾರೆ. ಕಾಮ, ಕ್ರೋಧ, ಲೋಭ, ಮೋಹ, ಮದ ಮತ್ತು ಮತ್ಸರಗಳೆಂಬ ಅರಿಷಡ್ವರ್ಗಗಳನ್ನು ಗೆದ್ದವರೇ ನಿಜವಾದ ಸಂತ’ ಎಂದು ಅಖಿಲ ಕರ್ನಾಟಕ ಬಂಜಾರ (ಲಂಬಾಣಿ) ಗುರುಪೀಠದ ನಂದಮಸಂದ್ ಸೇವಾಲಾಲ್ ಸ್ವಾಮೀಜಿ ಹೇಳಿದರು.
‘ಸಂತ ಸೇವಾಲಾಲ್ ಅವರು ಬುಡಕಟ್ಟು ಜನರಲ್ಲಿ ಧೈರ್ಯ ಸಾಹಸ, ಆತ್ಮಸ್ಥೈರ್ಯ ಮತ್ತು ಆತ್ಮಭಿಮಾನ ಮೂಡಿಸಿದರು. ಅವರ ಬೋಧನೆ ಮತ್ತು ಚಿಂತನೆಗಳು ಬಂಜಾರ ಜನಾಂಗದಲ್ಲಿ ಏಕತೆ ಉಂಟುಮಾಡಿವೆ ಎಂದು ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗಿರೀಶ್ ನಾಯ್ಕ್ ತಿಳಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್ಪೀರ್, ತಹಶೀಲ್ದಾರ್ ಬಿ.ಎಂ. ಗೋವಿಂದರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ. ಗುರುನಾಥ್, ಬಂಜಾರ ಸಮುದಾಯದ ಮುಖಂಡರಾದ ನಾಗೇಂದ್ರ ನಾಯ್ಕ್, ಪ್ರಕಾಶ್ ರಮಾನಾಯ್ಕ್, ರಾಜ ನಾಯ್ಕ್, ಅನಂತನಾಯ್ಕ್, ಯಂಕಸಾದು, ಮಾಧವ ನಾಯ್ಕ, ಗೀತ ಗೋವಿಂದರಾಜು, ರತ್ನಮ್ಮ, ಉಮೇಶ್, ಆನಂದ್ ಕುಮಾರ್, ಪಾಪಯ್ಯ, ಶ್ರೀನಿವಾಸ್ ನಾಯಕ ಸೇರಿದಂತೆ ಭೋವಿ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.