ADVERTISEMENT

ಶರಣರ ಆದರ್ಶ ಸಾರಲು ಜಯಂತಿ ಆಚರಣೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಗುರುನಾಥ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2026, 4:25 IST
Last Updated 4 ಫೆಬ್ರುವರಿ 2026, 4:25 IST
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ. ಗುರುನಾಥ್‌ ಮಾತನಾಡಿದರು
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ. ಗುರುನಾಥ್‌ ಮಾತನಾಡಿದರು   

ಚಿತ್ರದುರ್ಗ: ‘ಶರಣರ ಹಾಗೂ ಸಂತರ ಆದರ್ಶಗಳನ್ನು ಸಾರುವ ನಿಟ್ಟಿನಲ್ಲಿ ಫೆ. 10 ರಂದು ಕಾಯಕ ಶರಣರ ಹಾಗೂ 15 ರಂದು ಸಂತ ಸೇವಾಲಾಲ್‌ ಜಯಂತಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ. ಗುರುನಾಥ್‌ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

‘ಶರಣರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹಾರ ಕಕ್ಕಯ್ಯ, ಉರಿಲಿಂಗ ಪೆದ್ದಿ ಹಾಗೂ ಸಮಗಾರ ಹರಳಯ್ಯನವರು ವಚನ ಸಾಹಿತ್ಯದಲ್ಲಿ ಕಾಂತ್ರಿ ಮಾಡಿದ್ದಾರೆ. ಇದೇ ಮಾದರಿಯಲ್ಲಿ ಧಾರ್ಮಿಕ ಸುಧಾರಕರಾದ ಸಂತ ಸೇವಾಲಾಲರು ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುವಂತೆ ಬೋಧಿಸಿದರು’ ಎಂದು ಹೇಳಿದರು.

ADVERTISEMENT

‘ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಫೆ. 10 ರಂದು ಕಾಯಕ ಶರಣರ ಜಯಂತಿ ಹಾಗೂ 15 ರಂದು ಸಂತ ಸೇವಾಲಾಲ್‌ ಜಯಂತಿ ಆಯೋಜಿಸಲಾಗುತ್ತದೆ. ಬಂಜಾರ ಸಮುದಾಯದಿಂದ ಬಂಜಾರ ಗುರುಪೀಠದಲ್ಲಿ ಆಚರಿಸುವ ಕಾಯಕ್ರಮಕ್ಕೆ ಸಹಯೋಗ ಒದಗಿಸಲಾಗುತ್ತದೆ’ ಎಂದು ತಿಳಿಸಿದರು.

‘ಜಯಂತಿಗಳ ಆಚರಣೆ ಮೂಲಕ ಶರಣರು ಮತ್ತು ಸಂತರ ತತ್ವಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕು. ಮೂಢನಂಬಿಕೆ ಮತ್ತು ಕಂದಾಚಾರಗಳನ್ನು ತೊಡೆದುಹಾಕುವುದು ಜಯಂತಿಯ ಮುಖ್ಯ ಉದ್ದೇಶವಾಗಬೇಕು’ ಎಂದು ಬಂಜಾರ ಗುರುಪೀಠದ ಸರ್ದಾರ್‌ ಸೇವಾಲಾಲ್‌ ಸ್ವಾಮೀಜಿ ಹೇಳಿದರು.

‘ವಿವಿಧ ಸಮುದಾಯಗಳು ಒಟ್ಟಾಗಿ ಸೇರಿ ಸಮಾಜದ ಏರುಪೇರುಗಳನ್ನು ಸರಿಪಡಿಸಲು ಶ್ರಮಿಸಬೇಕು. ಜಯಂತಿಗಳನ್ನು ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ಆಚರಿಸಲು ಜಿಲ್ಲಾಡಳಿತ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯೊಂದಿಗೆ ಎಲ್ಲರೂ ಕೈಜೋಡಿಸಬೇಕು’ ಎಂದರು.

ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾ ಘಟಕದ ಉಪಾಧ್ಯಕ್ಷ ಡಿ.ಎನ್‌. ಮೈಲಾರಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್‌ ಬಗಾಟಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದ, ಮುಖಂಡರಾದ ಹನುಮಂತಪ್ಪದುರ್ಗ, ರಾಜಪ್ಪ, ಎಂ.ತಿಪ್ಪೇಸ್ವಾಮಿ, ಮಂಜುನಾಥನಾಯ್ಕ್‌, ಪ್ರಕಾಶ್‌ ರಮಾನಾಯ್ಕ್‌, ನರೇನಹಳ್ಳಿ ಅರುಣ್‌ ಕುಮಾರ್‌ ಇದ್ದರು.

‘ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ’

‘ಜಿಲ್ಲಾ ಕೇಂದ್ರದಲ್ಲಿ ಫೆ. 19 ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಹಾಗೂ ಫೆ.20 ರಂದು ಸಂತ ಕವಿ ಸರ್ವಜ್ಞ ಜಯಂತಿ’ ನಡೆಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರುನಾಥ ಹೇಳಿದರು.

ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ‘ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸಲಾಗುತ್ತದೆ. ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಗೀತ ಗಾಯನ ಆಯೋಜಿಸಲಾಗುತ್ತದೆ’ ಎಂದು ತಿಳಿಸಿದರು. ಮರಾಠ ವಿದ್ಯಾ ವರ್ಧಕ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್‌ ಜಾದವ್‌ ಕಾರ್ಯದರ್ಶಿ ಗೋಪಾಲರಾವ್‌ ಕುಂಬಾರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ತಿಪ್ಪೇಸ್ವಾಮಿ ಮಹಿಳಾ ಘಟಕದ ಅಧ್ಯಕ್ಷೆ ಎಸ್‌.ಬೈಲಮ್ಮ ಕಾರ್ಯದರ್ಶಿ ಮೃತ್ಯುಂಜಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.