ADVERTISEMENT

ಚಿತ್ರದುರ್ಗ: ಮುರುಘಾ ಮಠದಲ್ಲಿ ಈ ಬಾರಿ ಸರಳ ಶರಣ ಸಂಸ್ಕೃತಿ ಉತ್ಸವ

ಐದು ದಿನ ನಡೆಯಲಿದೆ ಉತ್ಸವ, ಸಮಾಲೋಚನಾ ಸಭೆಯಲ್ಲಿ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2020, 13:06 IST
Last Updated 22 ಸೆಪ್ಟೆಂಬರ್ 2020, 13:06 IST
ಚಿತ್ರದುರ್ಗದ ಮುರುಘಾ ಮಠದಲ್ಲಿ ಈಚೆಗೆ ನಡೆದ ಸಮಾಲೋಚನಾ ಸಭೆಯಲ್ಲಿ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶಿವಮೂರ್ತಿ ಮುರುಘಾ ಶರಣರು, ಗುಳೇದಗುಡ್ಡದ ಬಸವರಾಜ ಸ್ವಾಮೀಜಿ ಪಾಲ್ಗೊಂಡಿದ್ದರು.
ಚಿತ್ರದುರ್ಗದ ಮುರುಘಾ ಮಠದಲ್ಲಿ ಈಚೆಗೆ ನಡೆದ ಸಮಾಲೋಚನಾ ಸಭೆಯಲ್ಲಿ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶಿವಮೂರ್ತಿ ಮುರುಘಾ ಶರಣರು, ಗುಳೇದಗುಡ್ಡದ ಬಸವರಾಜ ಸ್ವಾಮೀಜಿ ಪಾಲ್ಗೊಂಡಿದ್ದರು.   

ಚಿತ್ರದುರ್ಗ: ಮುರುಘಾ ಮಠದಲ್ಲಿ ನಡೆಯುವ ಶರಣ ಸಂಸ್ಕೃತಿ ಉತ್ಸವವನ್ನು ಕೋವಿಡ್‌ ಕಾರಣಕ್ಕೆ ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಅ.24ರಿಂದ 28ರವರೆಗೆ ಐದು ದಿನಗಳ ಕಾಲ ಉತ್ಸವ ನಡೆಯಲಿದೆ.

ಮುರುಘಾ ಮಠದಲ್ಲಿ ಈಚೆಗೆ ನಡೆದ ಸಮಾಲೋಚನಾ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಭಕ್ತರು ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ.

‘ಭಕ್ತರ ಅಭಿಪ್ರಾಯದ ಮೇರೆಗೆ ತೀರ್ಮಾನ ಕೈಗೊಳ್ಳಲಾಗಿದೆ. ಕುಸ್ತಿ, ಕ್ರೀಡಾಕೂಟ, ಸೌಹಾರ್ದ ನಡಿಗೆ, ಜಾನಪದ ಕಲಾಮೇಳದಂತಹ ಜನಜಂಗುಳಿ ಸೇರುವ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಸಹಜ ಶಿವಯೋಗ, ಭಜನೆ, ವೀರಗಾಸೆ, ಜಾನಪದ ಹಾಡುಗಳ ಸ್ಪರ್ಧೆ, ವಿಚಾರಗೋಷ್ಠಿ, ಕೃಷಿ ಹಾಗು ಕೈಗಾರಿಕಾ ಮೇಳಗಳು ನಡೆಯಲಿವೆ’ ಎಂದು ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.

ADVERTISEMENT

‘ಮುರುಘಾಶ್ರೀ ಪ್ರಶಸ್ತಿ, ಬಿಚ್ಚುಗತ್ತಿ ಭರಮಣ್ಣನಾಯಕ ಪ್ರಶಸ್ತಿ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಿಗದಿಯಂತೆ ನಡೆಯಲಿವೆ. ವಚನಕಮ್ಮಟದಲ್ಲಿ ರ‍್ಯಾಂಕ್‌ ಪಡೆದವರಿಗೆ ಬಹುಮಾನ ವಿತರಿಸಲಾಗುತ್ತದೆ. ಮಲ್ಲಿಕಾರ್ಜುನ ಶ್ರೀಗಳ ಸ್ಮರಣೋತ್ಸವದೊಂದಿಗೆ ಉತ್ಸವ ಮುಕ್ತಾಯಗೊಳ್ಳಲಿದೆ. ಉತ್ಸವದಲ್ಲಿ ಭಾಗವಹಿಸುವ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪರಸ್ಪರ ಅಂತರ ಕಾಪಾಡಬೇಕು’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಉತ್ಸವ ಸಮಿತಿ ಗೌರವಾಧ್ಯಕ್ಷರಾದ ಭೋವಿಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿ, ಗುಳೇದಗುಡ್ಡದ ಬಸವರಾಜ ಸ್ವಾಮೀಜಿ, ಕಾರ್ಯಾಧ್ಯಕ್ಷ ಎನ್.ಜಯಣ್ಣ, ದಾಸೋಹ ಸಮಿತಿ ಅಧ್ಯಕ್ಷ ಎಂ.ಟಿ. ಮಲ್ಲಿಕಾರ್ಜುನಸ್ವಾಮಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕ್ರೈಸ್ತ ಸಮಾಜದ ಫಾದರ್ ರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.