ಚಿತ್ರದುರ್ಗ: ‘ನಿರಾಶ್ರಿತರು, ದೌರ್ಜನ್ಯಕ್ಕೆ ಒಳಗಾದವರು, ನಿವೇಶನ ಇಲ್ಲದವರಿಗೆ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಮಾಡಲು ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿಯೂ ಜಾಗ ಮೀಸಲಿಡಲಾಗುವುದು. ಆಶ್ರಯ ನಿವೇಶನ ಹಂಚಿಕೆಗಾಗಿ ಈಗಾಗಲೇ ಕಂದಾಯ ಇಲಾಖೆ 1,000 ಎಕರೆ ಜಾಗ ಗುರುತಿಸಿದೆ’ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಭೆ, ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆ ಹಾಗೂ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಕುರಿತು ನಡೆದ ತ್ರೈಮಾಸಿಕ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡದರು.
‘ಬೇಡಿಕೆ ಅನುಸಾರ ಜಾಗವನ್ನು ಮಂಜೂರು ಮಾಡಲಾಗುವುದು. ದೌರ್ಜನ್ಯಕ್ಕೆ ಒಳಾಗದ ಕುಟುಂಬಗಳಿಗೆ ಕಾಯ್ದೆ ಅನುಸಾರ ಪರಿಹಾರ ಧನ, ನಿವೇಶನ ಹಂಚಿಕೆ, ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಂಜೂರು ಮಾಡುವ ಸಮಯದಲ್ಲಿಯೂ ಆದ್ಯತೆ ನೀಡಲಾಗುವುದು. ದೌರ್ಜನ್ಯ ಪ್ರಕರಣದಲ್ಲಿ ಹಲ್ಲೆಯಿಂದ ಬಲಿಯಾದವರ ಕುಟುಂಬದ ಸದಸ್ಯರಿಗೆ ನಿಯಮಾನುಸಾರ ಉದ್ಯೋಗ ಒದಗಿಸಲಾಗುವುದು’ ಎಂದರು.
‘ಪ್ರಸಕ್ತ ಸಾಲಿನಲ್ಲಿ ಅಕ್ಟೋಬರ್ವರೆಗೆ ಒಟ್ಟು 30 ದೌರ್ಜನ್ಯ ಪ್ರಕರಣ ದಾಖಲಾಗಿವೆ. ಈ ಪ್ರಕರಣಗಳ ಸಂತ್ರಸ್ತರಿಗೆ ಒಟ್ಟು ₹ 40.42 ಲಕ್ಷ ಪರಿಹಾರ ಧನ ನೀಡಲಾಗಿದೆ. 6 ಪ್ರಕರಣದಲ್ಲಿ ಸಂತ್ರಸ್ತರು ಮರಣ ಹೊಂದಿದ್ದಾರೆ. 3 ಅತ್ಯಾಚಾರ, 21 ಜಾತಿ ನಿಂದನೆ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ವಿವಿಧ ನ್ಯಾಯಾಲಯಗಳಲ್ಲಿ 136 ದೌರ್ಜನ್ಯ ಪ್ರಕರಣಗಳು ಬಾಕಿಯಿವೆ. ಈ ಪೈಕಿ 1 ಪ್ರಕರಣದಲ್ಲಿ ಶಿಕ್ಷೆಯಾದರೆ, 12 ಪ್ರಕರಣಗಳಲ್ಲಿ ಆರೋಪಿತರು ಬಿಡುಗಡೆಯಾಗಿದ್ದಾರೆ’ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಮಾಹಿತಿ ನೀಡಿದರು.
‘ಎಲ್ಲಾ ಇಲಾಖೆಗಳು ಎಸ್ಸಿಎಸ್ಪಿ, ಟಿಎಸ್ಪಿ ಅಡಿ ನಿಗದಿಪಡಿಸಿದ ಯೋಜನೆಗಳಿಗೆ ಫಲಾನುಭವಿಗಳ ಆಯ್ಕೆಗೆ ಶೇ 100ರಷ್ಟು ಆರ್ಥಿಕ ಪ್ರಗತಿ ಸಾಧಿಸಬೇಕು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನುದಾನ ಕೈ ತಪ್ಪಿ ಹೋದರೆ ಅಂಥವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಯಾವುದೇ ಮ್ಯಾನುಯಲ್ ಸ್ಕ್ಯಾವೆಂಜರ್ಗಳು ಇಲ್ಲ. ಆದರೆ 2013ಕ್ಕಿಂತ ಮುನ್ನ ಇದ್ದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕುಟುಂಬದ ವಿವರಗಳನ್ನು ಸಂಗ್ರಹಿಸಬೇಕು. ಅವರಿಗೆ ದೊರೆತ ಯೋಜನೆಗಳ ಮಾಹಿತಿ ಸಂಗ್ರಹಿಸಬೇಕು’ ಎಂದರು.
‘ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯೊಂದಿಗೆ ಕೈ ಜೋಡಿಸಿ, ಶಾಂತಿಯುತವಾಗಿ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ದೊರಕಿಸಲು ಸದಸ್ಯರು ಪ್ರಮುಖ ಪಾತ್ರ ವಹಿಸಿದ್ದಾರೆ’ ಎಂದು ಜಿಲ್ಲಾಧಿಕಾರಿ ಹೇಳಿದರು. ಮೂರು ವರ್ಷದ ಅವಧಿಗೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ನೇಮಕವಾಗಿದ್ದ ಸದಸ್ಯರ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಸದಸ್ಯರಾದ ಗುಜ್ಜಾರಪ್ಪ, ಎಂ.ಡಿ.ನವಕೋಟಿ, ಡಿ.ಒ.ಮೊರಾರ್ಜಿ, ಬೋರಸ್ವಾಮಿ, ಹೇಮೇಗೌಡ ಅವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಸವಿತಾ, ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಪಶು ವೈದ್ಯಕೀಯ ಇಲಾಖೆ ಉಪನಿರ್ದೇಶಕ ಡಾ.ಕುಮಾರ್ ಇದ್ದರು.
ವಿಶೇಷ ಪೊಲೀಸ್ ಠಾಣೆ ಸ್ಥಾಪನೆ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತನಾಡಿ ‘ಜಿಲ್ಲೆಯಲ್ಲಿ ದಾಖಲಾಗುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ಶೀಘ್ರವಾಗಿ ವಿಲೇ ಮಾಡಲು ಪ್ರತ್ಯೇಕವಾಗಿ ವಿಶೇಷ ಪೊಲೀಸ್ ಠಾಣೆ ಸ್ಥಾಪಿಸಲಾಗಿದೆ. ಸಂತ್ರಸ್ತರು ನೇರವಾಗಿ ಈ ವಿಶೇಷ ಪೊಲೀಸ್ ಠಾಣೆಗೆ ಬಂದು ದೂರು ಸಲ್ಲಿಸಬಹುದು’ ಎಂದು ಹೇಳಿದರು.
‘ಇತರೆ ಠಾಣೆಗಳಲ್ಲಿ ದಾಖಲಾದ ದೌರ್ಜನ್ಯ ಪ್ರಕರಣಗಳನ್ನು ವಿಶೇಷ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 15 ದೌರ್ಜನ್ಯ ಪಕ್ರಣಗಳು ದಾಖಲಾಗಿವೆ. ಇದರಲ್ಲಿ 7 ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ. 1 ಪ್ರಕರಣದಲ್ಲಿ ವಿಚಾರಣೆಗೆ ತಡೆಯಾಜ್ಞೆ ತರಲಾಗಿದೆ. 1 ಪ್ರಕರಣದ ಚಾರ್ಜ್ ಶೀಟ್ ಸಿದ್ಧವಾಗಿದೆ. 8 ಪ್ರಕರಣಗಳು ತನಿಖೆ ಹಂತದಲ್ಲಿವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.