ಚಿತ್ರದುರ್ಗ: ಕೊರೊನಾ ಸೋಂಕು ತಗುಲಿದ ಶಂಕೆಯ ಮೇರೆಗೆ ‘ಕ್ವಾರಂಟೈನ್’ಗೆ ಒಳಗಾಗಿರುವವರ ಮನೆಯ ಸುತ್ತ ಪೊಲೀಸ್ ಭದ್ರತೆ ನಿಯೋಜಿಸುವಂತೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಶಂಕಿತರು ಮನೆಯಿಂದ ಹೊರಗೆ ಬರದಂತೆ ತಡೆಯಲು ಆದೇಶಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಸಚಿವರು, ‘ಕ್ವಾರಂಟೈನ್ಗೆ ಒಳಗಾದವರು ಮನೆಯಿಂದ ಹೊರಬರುತ್ತಿರುವ ಸಂಬಂಧ ದೂರುಗಳು ಬರುತ್ತಿವೆ. ಇದರಿಂದ ರೋಗ ಇನ್ನಷ್ಟು ಹರಡುವ ಸಾಧ್ಯತೆ ಹೆಚ್ಚು. ಇಂತಹ ಮನೆಗಳ ಮೇಲೆ ತೀವ್ರ ನಿಗಾ ಇಡಿ’ ಎಂದು ಹೇಳಿದರು.
‘ಜಿಲ್ಲೆಗೆ 177 ಜನರು ವಿದೇಶದಿಂದ ಮರಳಿದ್ದಾರೆ. 59 ಜನರ ರಕ್ತ, ಗಂಟಲು ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಇದರಲ್ಲಿ 28 ವರದಿಗಳು ಬಂದಿದ್ದು, ಒಬ್ಬರಲ್ಲಿ ಮಾತ್ರ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇನ್ನೂ 24 ಜನರ ವೈದ್ಯಕೀಯ ವರದಿ ಬರಬೇಕಿದೆ. 75 ಜನರು 14 ದಿನಗಳ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಸೋಂಕು ಕಾಣಿಸಿಕೊಂಡ ಭೀಮಸಮುದ್ರದ ಸುತ್ತ ನಿಗಾ ಇಡಲಾಗಿದೆ’ ಎಂದು ಹೇಳಿದರು.
‘ಕೋವಿಡ್–19 ನಿಯಂತ್ರಣಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜಿಲ್ಲಾಧಿಕಾರಿ ಖಾತೆಯಲ್ಲಿ ₹ 9 ಕೋಟಿ ಲಭ್ಯವಿದೆ. ವೆಂಟಿಲೇಟರ್, ಥರ್ಮಲ್ ಸ್ಕ್ಯಾನರ್, ಸ್ಯಾನಿಟೈಸರ್ ಕಿಟ್ಗಳ ಪೂರೈಕೆ ಮಾಡಲಾಗುತ್ತಿದೆ. ಸೋಂಕು ಪೀಡಿತರ ಚಿಕಿತ್ಸೆಗೆ ಪ್ರತ್ಯೇಕ ಜಿಲ್ಲಾ ಆಸ್ಪತ್ರೆಯ ಪಕ್ಕದ ನೂತನ ಕಟ್ಟಡವನ್ನು ಬಳಸಿಕೊಳ್ಳಲಾಗುತ್ತಿದೆ. ಅಗತ್ಯ ವಸ್ತುಗಳ ಪೂರೈಕೆಗೆ ತೊಂದರೆಯಾಗದಂತೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿಕೊಳ್ಳಲಿದೆ’ ಎಂದು ಹೇಳಿದರು.
ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ಎಂ.ಚಂದ್ರಪ್ಪ, ಕೆ.ಪೂರ್ಣಿಮಾ, ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೊನ್ನಾಂಬ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕ ಇದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.