
ಚಿತ್ರದುರ್ಗ: ‘ಕೇವಲ ಅಂಕದಿಂದ ಉದ್ಯೋಗದಲ್ಲಿ ಯಶಸ್ಸು ಗಳಿಸುವುದು ಕಷ್ಟ. ಆದ್ದರಿಂದ ಪ್ರಸ್ತುತ ದಿನಮಾನದಲ್ಲಿ ಮಕ್ಕಳಿಗೆ ಜೀವನ ಕೌಶಲದ ಶಿಕ್ಷಣ ನೀಡುವುದು ಅಗತ್ಯವಾಗಿದೆ’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಟಿ. ತಿಪ್ಪೇಸ್ವಾಮಿ ತಿಳಿಸಿದರು.
ನಗರದ ದಮ್ಮ ಕೇಂದ್ರದಲ್ಲಿ ವಿಮುಕ್ತಿ ವಿದ್ಯಾಸಂಸ್ಥೆ, ಶಾಂತಿ ಸೌಹಾರ್ದ ವೇದಿಕೆಯಿಂದ ಸೋಮವಾರ ಆಯೋಜಿಸಿದ್ದ ಕಿಶೋರಿಯರ ಸಾಂಸ್ಕೃತಿಕ ಮೇಳ ಉದ್ಘಾಟಿಸಿ ಮಾತನಾಡಿದರು.
‘ಕೌಶಲ ಕಾರ್ಯಗಾರಗಳನ್ನು ಹಮ್ಮಿಕೊಳ್ಳುವ ಮೂಲಕ ಜೀವನ ಮಟ್ಟವನ್ನು ಹೆಚ್ಚಿಸುವಂತಹ ಯೋಜನೆಗಳನ್ನು ರೂಪಿಸುವ ಅಗತ್ಯವಿದೆ’ ಎಂದರು.
‘ಹದಿಹರೆಯ ಎಂಬುದು ತುಂಬಾ ಕ್ಲಿಷ್ಟಕರವಾದ ವಯೋಮಿತಿ ಆಗಿರುವುದರಿಂದ ಪೋಷಕರು ಮಕ್ಕಳ ಬಗ್ಗೆ ಅತಿಹೆಚ್ಚಿನ ಜವಾಬ್ದಾರಿ ವಹಿಸಿಕೊಳ್ಳುವುದು ಅಗತ್ಯ. ದೇಹ, ಮನಸ್ಸಿನ ಬದಲಾವಣೆಗಳು ಮತ್ತು ಜೀವನದ ತಲ್ಲಣಗಳು ಏಕ ಕಾಲದಲ್ಲಿಯೇ ಉಂಟಾಗುತ್ತವೆ. ಆದ್ದರಿಂದ ಅವರನ್ನು ಸೂಕ್ಷ್ಮವಾಗಿ ಸರಿದಾರಿಯಲ್ಲಿ ನಡೆಸುವ ಕೆಲಸ ಆಗಬೇಕಿದೆ’ ಎಂದು ತಿಳಿಸಿದರು.
ಕರ್ನಾಟಕ ಶಾಂತಿ ಮತ್ತು ಸೌಹಾರ್ದ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್ ಕುಮಾರ್, ಪ್ರಗತಿಪರ ಚಿಂತಕ ಜೆ.ಯಾದವರೆಡ್ಡಿ, ವಿಮುಕ್ತಿ ವಿದ್ಯಾಸಂಸ್ಥೆ ಅಧ್ಯಕ್ಷೆ ಅನ್ನಪೂರ್ಣ, ನಿರ್ದೇಶಕ ಆರ್. ವಿಶ್ವಸಾಗರ್, ಮಕ್ಕಳ ಹಕ್ಕುಗಳ ಆಯೋಗದ ಮಾಜಿ ಸದಸ್ಯ ಕೆ.ಬಿ. ರೂಪಾನಾಯ್ಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ. ಗುರುನಾಥ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.