ಚಿತ್ರದುರ್ಗ: ‘ಸೆ. 22ರಿಂದ ಪ್ರಾರಂಭಗೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಜಿಲ್ಲೆ ಶೇ 95.23ರಷ್ಟು ಪೂರ್ಣಗೊಳಿಸಿದೆ. ರಾಜ್ಯದಲ್ಲಿಯೇ ಹೆಚ್ಚು ಕುಟುಂಬಗಳ ಸಮೀಕ್ಷೆ ಪೂರ್ಣಗೊಳಿಸಿದ ಜಿಲ್ಲೆಗಳ ಪೈಕಿ ಕೋಟೆನಾಡು 4ನೇ ಸ್ಥಾನ ಪಡೆದಿದೆ. ಸಮೀಕ್ಷೆ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಲು ಶ್ರಮಿಸಿದ ಅಧಿಕಾರಿ, ಸಿಬ್ಬಂದಿ ಅಭಿನಂದನಾರ್ಹರು’ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ.
ಸರ್ಕಾರದ ಮಟ್ಟದಲ್ಲಿ ಯೋಜನೆ, ನೀತಿ ರೂಪಿಸುವಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಬಹಳಷ್ಟು ಮಹತ್ವದ್ದಾಗಿದೆ. ಸಮೀಕ್ಷಾ ಕಾರ್ಯದ ಬಗ್ಗೆ ಸರ್ಕಾರ ತೀವ್ರ ಒತ್ತು ನೀಡಿ, ಸಮೀಕ್ಷೆ ಕೈಗೊಳ್ಳಲು ನಿರ್ದೇಶನ ನೀಡಿದೆ. ಸಮೀಕ್ಷೆಗೆ ನಿಯೋಜನೆಗೊಂಡಿದ್ದ ಶಿಕ್ಷಕರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ರಜೆ ಹಾಗೂ ಹಬ್ಬಗಳ ನಡುವೆಯೂ ಸಾಕಷ್ಟು ಶ್ರಮ ವಹಿಸಿ, ಸಮೀಕ್ಷೆ ಕಾರ್ಯ ಕೈಗೊಂಡಿದ್ದಾರೆ.
ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಬೆಸ್ಕಾಂ, ನಗರ-ಸ್ಥಳೀಯ ಸಂಸ್ಥೆಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ಹಲವಾರು ಇಲಾಖೆಯ ಅಧಿಕಾರಿ, ಸಿಬ್ಬಂದಿ ಸಮೀಕ್ಷಾ ಕಾರ್ಯದ ಯಶಸ್ವಿಗೆ ಸಾಕಷ್ಟು ಶ್ರಮಿಸಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 4,60,193 ಮನೆಗಳ ಸಮೀಕ್ಷೆ ಕಾರ್ಯ ಕೈಗೊಂಡು, 17.80 ಲಕ್ಷ ಜನರ ಸಮೀಕ್ಷೆ ಮಾಡಲಾಗಿದೆ.
ಇದೂವರೆಗೂ ಸಮೀಕ್ಷೆಯಿಂದ ಯಾವುದೇ ಕುಟುಂಬ ಬಿಟ್ಟು ಹೋಗಿದ್ದಲ್ಲಿ ತಹಸಿಲ್ದಾರ್ ಕಚೇರಿಗೆ ಮಾಹಿತಿ ನೀಡಿ, ಸಮೀಕ್ಷೆಗೆ ಮಾಹಿತಿ ನೀಡಬಹುದಾಗಿದೆ. ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.
ಮೊಳಕಾಲ್ಮುರು ತಾಲ್ಲೂಕು 9743085676, ಚಳ್ಳಕೆರೆ 080195-200130, 9972997738, ಚಿತ್ರದುರ್ಗ 08194-235034, ಹಿರಿಯೂರು 6362474421, ಹೊಸದುರ್ಗ 9972385061, ಹೊಳಲ್ಕೆರೆ 08191-200021 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು.
ನೇರವಾಗಿ https://kscbcselfdeclaration.karnataka.gov.in ವೆಬ್ಸೈಟ್ನಲ್ಲಿ ಕೂಡ ತಮ್ಮ ಮನೆಯ ಸಮೀಕ್ಷೆ ಕಾರ್ಯವನ್ನು ಮಾಡಬಹುದಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.