ADVERTISEMENT

ಚಿತ್ರದುರ್ಗ: ವಿಶೇಷ ಮಧ್ಯಸ್ಥಿಕೆ ಅಭಿಯಾನ ಆರಂಭ

ಸೆ.13ರಂದು ಲೋಕ ಅದಾಲತ್; ಸದುಪಯೋಗಕ್ಕೆ ನ್ಯಾಯಾಧೀಶರಾದ ರೋಣ ವಾಸುದೇವ್‌ ಸಲಹೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2025, 5:00 IST
Last Updated 8 ಆಗಸ್ಟ್ 2025, 5:00 IST
ರೋಣ ವಾಸುದೇವ
ರೋಣ ವಾಸುದೇವ   

ಚಿತ್ರದುರ್ಗ: ‘ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಜಿಲ್ಲೆಯಲ್ಲಿ ಜುಲೈ 1ರಿಂದ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ ಆರಂಭಗೊಂಡಿದೆ. ಇದಕ್ಕಾಗಿ 1,015 ಪ್ರಕರಣ ಗುರುತಿಸಲಾಗಿದ್ದು, 51 ನುರಿತ ಮಧ್ಯಸ್ಥಿಕೆದಾರರು ಕಕ್ಷಿದಾರರಿಗೆ ಕಾನೂನಾತ್ಮಕ ಸಹಕಾರ ನೀಡಲಿದ್ದಾರೆ. ಈಗಾಗಲೇ 18 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸಿವಿಲ್‌ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರೋಣ ವಾಸುದೇವ್ ಹೇಳಿದರು.

‘ಜಿಲ್ಲಾ ಹಾಗೂ ತಾಲ್ಲೂಕು ಹಂತದ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಕೌಟುಂಬಿಕ, ವೈವಾಹಿಕ, ಅಪಘಾತ ವಿಮಾ, ಚೆಕ್ ಅಮಾನ್ಯ, ವಾಣಿಜ್ಯ ಪ್ರಕರಣ, ಗ್ರಾಹಕರ ವ್ಯಾಜ್ಯಗಳು, ಸಾಲ ವಸೂಲಾತಿ, ಆಸ್ತಿ ವಿಭಾಗ, ಭೂಸ್ವಾಧೀನ ಸೇರಿದಂತೆ ಎಲ್ಲಾ ರೀತಿಯ ಸಿವಿಲ್ ಸ್ವರೂಪದ ಪ್ರಕರಣಗಳನ್ನು ಮಧ್ಯಸ್ಥಿಕೆ ಮುಖಾಂತರ ಇತ್ಯರ್ಥಪಡಿಸಲಿಕೊಳ್ಳಲು ಪಕ್ಷಗಾರರಿಗೆ ಸೂಕ್ತ ಮಾರ್ಗದರ್ಶನ ಮತ್ತು ವೇದಿಕೆಯನ್ನು ಕಲ್ಪಿಸಿಕೊಡಲಾಗುತ್ತಿದೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಮಧ್ಯಸ್ಥಿಕೆದಾರರ ಸಮಕ್ಷಮ ಪಕ್ಷಗಾರರು ಮಾಡಿಕೊಂಡ ರಾಜಿ ಒಡಂಬಡಿಕೆ ಹಾಗೂ ಒಪ್ಪಂದಗಳು ಕಾನೂನಾತ್ಮಕವಾಗಿ ನ್ಯಾಯವಾಗಿವೆಯೇ ಎಂಬುದನ್ನು ಪರಾಮರ್ಶಿಸಿ ನ್ಯಾಯಾಲಯದಿಂದ ಅಧಿಕೃತ ಮೊಹರು ಹಾಕುವ ಮೂಲಕ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುವುದು. ಮಧ್ಯಸ್ಥಗಾರಿಕೆ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಂಡರೆ ಸಮಯ, ಹಣದ ಉಳಿತಾಯವಾಗುತ್ತದೆ’ ಎಂದು ಹೇಳಿದರು.

ADVERTISEMENT

‘ವಾಜ್ಯಪೂರ್ವ ಪ್ರಕರಣಗಳಲ್ಲಿ ಬ್ಯಾಂಕ್, ಬಿಎಸ್‌ಎನ್‌ಎಲ್‌, ಬೆಸ್ಕಾಂ, ನಗರಸಭೆಗೆ ಸಂಬಂಧಿಸಿದ ವ್ಯಾಜ್ಯಗಳು ಹೆಚ್ಚಿರುತ್ತವೆ. ಕೆಲವೊಮ್ಮೆ ನ್ಯಾಯಾಲಯ ಮಧ್ಯಸ್ಥಿಕೆ ವಹಿಸಿ ಬ್ಯಾಂಕ್ ಸಾಲ ಹಾಗೂ ಬಡ್ಡಿ ಮರುಪಾವತಿ, ಬಿಲ್‍ಗಳ ಪಾವತಿಯಲ್ಲಿ ರಿಯಾಯಿತಿ ನೀಡುವಂತೆ ಮಾಡುತ್ತದೆ. ಇದರಿಂದ ಸಾರ್ವಜನಿಕರಿಗೆ ಹಾಗೂ ಸರ್ಕಾರಿ ಸಂಸ್ಥೆಗಳಿಗೆ ಅನುಕೂಲವಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಜ್ಯ ಪ್ರಕರಣಗಳು ಸಹ ವಿಲೇವಾರಿಯಾಗುತ್ತವೆ’ ಎಂದರು.

‘ವಿಚ್ಚೇದನ ಪ್ರಕರಣಗಳೊಂದಿಗೆ ಜೀವನಾಂಶ ಕೋರಿಕೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಪ್ರಕರಣಗಳು ತಳುಕು ಹಾಕಿಕೊಂಡಿರುತ್ತವೆ. ವಿಚ್ಚೇದನ ಪ್ರಕರಣದಲ್ಲಿ ಸತಿ ಪತಿಯನ್ನು ಒಂದುಗೂಡಿಸುವುದರಿಂದ ಸಾಕಷ್ಟು ಪ್ರಕರಣಗಳನ್ನು ಆರಂಭದಲ್ಲಿಯೇ ಅಂತ್ಯಗೊಳಿಸಬಹುದು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಾರ್ವಜನಿಕರಿಗೆ ದೊರಕಬೇಕಾದ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುವಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ’ ಎಂದು ಮಾಹಿತಿ ನೀಡಿದರು.

‘ತಾಲ್ಲೂಕಿನ ಜೋಡಿಚಿಕ್ಕೇನಹಳ್ಳಿ ಗ್ರಾಮಕ್ಕೆ ಬಸ್ ಸೌಕರ್ಯವಿರಲಿಲ್ಲ. ಇದರಿಂದ ಶಾಲೆಗೆ ಹೋಗುವ ಮಕ್ಕಳಿಗೆ ತೀವ್ರ ತೊಂದರೆ ಉಂಟಾಗಿತ್ತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೆಎಸ್‌ಆರ್‌ಟಿಸಿಗೆ ನಿರ್ದೇಶನ ನೀಡಿದ ಫಲವಾಗಿ ಜೋಡಿಚಿಕ್ಕೇನಹಳ್ಳಿಗೆ ಬಸ್ ಸೌಲಭ್ಯ ದೊರಕಿದೆ’ ಎಂದು ಹೇಳಿದರು.

‘ಸೆ. 13ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜನೆ ಮಾಡಲಾಗಿದೆ. ಕಳೆದ ಲೋಕ ಅದಾಲತ್‍ನಲ್ಲಿ ಜಿಲ್ಲೆಯ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿದ್ದ 50,000ಕ್ಕೂ ಅಧಿಕ ಪ್ರಕರಣಗಳಲ್ಲಿ 4,321 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಇದರೊಂದಿಗೆ 99,272 ವ್ಯಾಜ್ಯಪೂರ್ವ ಪ್ರಕರಣಗಳು ಸೇರಿ 1,03,593 ಪ್ರಕರಣಗಳು ವಿಲೇವಾರಿಯಾಗಿವೆ. ವಿಚ್ಚೇಧನಕ್ಕಾಗಿ ಅರ್ಜಿ ಸಲ್ಲಿಸಿದ್ದ 06 ಜೋಡಿಗಳನ್ನು ಒಂದು ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

‘ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭ ಹಾಗೂ ಶೀಘ್ರವಾಗಿ ತೀರ್ಮಾನ ಮಾಡಿಕೊಳ್ಳಬಹುದು. ಕಕ್ಷಿದಾರರು ನೇರವಾಗಿ ಅಥವಾ ವಕೀಲರ ಮೂಲಕ ಲೋಕ ಅದಾಲತ್‍ನಲ್ಲಿ ಭಾಗವಹಿಸಬಹುದು. ಸಾರ್ವಜನಿಕರು ಲೋಕ ಅದಾಲತ್ ಕುರಿತು ಹೆಚ್ಚಿನ ಪ್ರಶ್ನೆ ಮತ್ತು ಮಾಹಿತಿಗಾಗಿ ಬೇಕಾದಲ್ಲಿ ಇ-ಮೇಲ್ dlsachitradurga3@gmail.com ಹಾಗೂ ಟೋಲ್ ಫ್ರೀ ಸಂಖ್ಯೆ 15100 ಸಂಪರ್ಕಿಸಬಹುದು’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಇದ್ದರು.

ಅಭಿಯಾನಕ್ಕೆ 1,015 ಪ್ರಕರಣಗಳ ಗುರುತು | ಸೆ. 13ರಂದು ರಾಷ್ಟ್ರೀಯ ಲೋಕ ಅದಾಲತ್ | ಟೋಲ್ ಫ್ರೀ ಸಂಖ್ಯೆ 15100 ಸಂಪರ್ಕಿಸಿರಿ

ಪತಿ– ಪತ್ನಿಗೆ ಹೊಂದಾಣಿಕೆ ಕೊರತೆ

‘ಹೊಸದಾಗಿ ಮದುವೆಯಾದ ಯುವಜನತೆಯಲ್ಲಿ ಹೊಂದಾಣಿಕೆ ಸಮಸ್ಯೆಯಿಂದಾಗಿ ಮನಸ್ತಾಪಗಳು ಉಂಟಾಗುತ್ತಿವೆ. ಈ ಹಂತದಲ್ಲಿ ಕುಟುಂಬದ ಹಿರಿಯರ ಮಾರ್ಗದರ್ಶನವಿಲ್ಲದೇ ವೈವಾಹಿಕ ಸಂಬಂಧಗಳಲ್ಲಿ ಬಿರುಕು ಉಂಟಾಗಿ ವಿಚ್ಚೇದನ ಹಂತಕ್ಕೆ ಹೋಗುತ್ತಿವೆ’ ಎಂದು ರೋಣ ವಾಸುದೇವ ತಿಳಿಸಿದರು. ‘ದುರದೃಷ್ಟಕರ ಸಂಗತಿ ಎಂದರೆ ನ್ಯಾಯಾಲಯಗಳಲ್ಲಿ ವಿಚ್ಚೇಧನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ನ್ಯಾಯಾಧೀಶರು ವೈವಾಹಿಕ ಸಂಬಂಧ ಗಟ್ಟಿಗೊಳಿಸುವ ಹಿನ್ನೆಲೆಯಲ್ಲಿ ಸರ್ವ ಪ್ರಯತ್ನಗಳನ್ನು ಮಾಡುತ್ತಾರೆ. ಪ್ರತಿ ಲೋಕ ಅದಾಲತ್‍ನಲ್ಲಿಯೂ ವಿಚ್ಚೇಧನಕ್ಕೆ ಅರ್ಜಿ ಸಲ್ಲಿಸಿದ 8 ರಿಂದ 10 ಜೋಡಿಗಳನ್ನು ಪುನಃ ಒಂದು ಮಾಡಲಾಗುತ್ತಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.