
ಮೊಳಕಾಲ್ಮುರು (ಚಿತ್ರದುರ್ಗ): ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹುಟ್ಟು ಶ್ರೀಮಂತರಾಗಿರುವ ಕಾರಣ ಅವರಿಗೆ ಬಡವರ ಕಷ್ಟದ ಬಗ್ಗೆ ಅರಿವಿಲ್ಲ. ಹಾಗಾಗಿ ಬಡವರಿಗೆ ಸಲ್ಲಬೇಕಾದ ಆರೋಗ್ಯ ಸೇವೆಗಳು ರಾಜ್ಯದಲ್ಲಿ ಹಳ್ಳ ಹಿಡಿಯುತ್ತಿವೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆರೋಪಿಸಿದರು.
ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಚಿವರ ಕಾರ್ಯವೈಖರಿ ಬೆಂಗಳೂರಿಗೆ ಮಾತ್ರ ಸೀಮಿತವಾಗಿದೆ. ವೈದ್ಯ ಪದವಿ ಪಡೆದವರು ಮಾತ್ರ ಆರೋಗ್ಯ ಸಚಿವರಾದರೆ ಉತ್ತಮ ಎಂಬ ಭಾವನೆ ಸರಿಯಲ್ಲ. ಬಡವರ ಕಷ್ಟಗಳನ್ನು ಅರ್ಥ ಮಾಡಿಕೊಳ್ಳುವವರು ಆರೋಗ್ಯ ಸಚಿವರಾಗಬೇಕಿದೆ. ಉಪಯುಕ್ತ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಕೆಲಸಕ್ಕೆ ಸಚಿವರು ಮುಂದಾಗಿದ್ದಾರೆ ಎಂದು ದೂರಿದರು.
ಜಿಲ್ಲಾ ಆಸ್ಪತ್ರೆಗಳಲ್ಲಿ ಎಂಆರ್ಐ ಸ್ಕಾನಿಂಗ್ ಸ್ಥಗಿತವಾಗಿದ್ದು, ಬಡವರಿಗೆ ತೀವ್ರ ತೊಂದರೆಯಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಬೊಕ್ಕಸ ಖಾಲಿಯಾಗಿದ್ದು, ಅಭಿವೃದ್ಧಿ ಹುಡುಕಬೇಕಾಗಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಜಾರಿಯಲ್ಲಿದ್ದ ಅಭಿವೃದ್ಧಿ ಕಾರ್ಯಗಳನ್ನೇ ಮುಂದುವರಿಸಿಕೊಂಡು ಹೋಗಲಾಗುತ್ತಿದೆ. ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಲ್ಲಿ ರಾಜ್ಯದ ಜನ ಬೇಸತ್ತಿದ್ದಾರೆ. ಭದ್ರಾಮೇಲ್ದಂಡೆ ಯೋಜನೆಯನ್ನು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಪೂರ್ಣಗೊಲೀಸಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.