ಕೃಷ್ಣಯಾದವಾನಂದ ಸ್ವಾಮೀಜಿ
ಚಿತ್ರದುರ್ಗ: ‘ಬುಡಕಟ್ಟು ಸಂಸ್ಕೃತಿ ಆಚರಣೆಯ ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು. ಮಾತು ಕೊಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆದ್ದರಿಂದ ಶೀಘ್ರ ದೆಹಲಿಗೆ ನಿಯೋಗ ತೆರಳಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುತ್ತದೆ’ ಎಂದು ಯಾದವಾನಂದ ಗುರುಪೀಠದ ಕೃಷ್ಣಯಾದವಾನಂದ ಸ್ವಾಮೀಜಿ ತಿಳಿಸಿದರು.
‘ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಅರ್ಜಿ ಕೇಂದ್ರದ ಬಳಿ ಇದೆ. ಅದನ್ನು ಶೀಘ್ರ ಇತ್ಯರ್ಥಪಡಿಸಿ ನ್ಯಾಯ ದೊರಕಿಸಿಕೊಡಬೇಕು. ಈ ವಿಚಾರದಲ್ಲಿ ಕೇಂದ್ರ ಸಚಿವರಾದ ವಿ. ಸೋಮಣ್ಣ, ಪ್ರಹ್ಲಾದ್ ಜೋಶಿ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಯತ್ನಿಸುವುದಾಗಿ ಹೇಳಿದ್ದಾರೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಲೋಕಸಭೆ ಚುನಾವಣೆ ವೇಳೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಬಳಿ ಮಾತನಾಡಿ ಮೀಸಲಾತಿ ಕೊಡಿಸುವ ಜವಾಬ್ದಾರಿ ನನ್ನದೆಂದು ಹೇಳಿ ಎರಡು ವರ್ಷವಾಗಿದೆ. ಅವರನ್ನು ಭೇಟಿ ಮಾಡಿ ಅವರು ಕೊಟ್ಟ ಭರವಸೆ ಮಾತನ್ನು ನೆನಪು ಮಾಡುತ್ತೇವೆ’ ಎಂದರು.
‘ಮೀಸಲಾತಿ ಸಂಬಂಧ ನಮ್ಮ ಹೋರಾಟ ಎಂದಿಗೂ ನಿಲ್ಲುವುದಿಲ್ಲ. ನಿರಂತರವಾಗಿ ನಡೆಯಲಿದ್ದು, ಈ ಸಂಬಂಧ ಎಲ್ಲ ತ್ಯಾಗಕ್ಕೂ ಸಿದ್ಧ. ಅತ್ಯಂತ ಹಿಂದುಳಿದ ಕಾಡುಗೊಲ್ಲರನ್ನು ಎಸ್ಟಿಗೆ ಸೇರಿಸುವಂತೆ ಒತ್ತಡ ತರುವಲ್ಲಿ ನಾವು ಹೆಜ್ಜೆ ಹಿಂದಿಡುವ ಪ್ರಶ್ನೆಯೇ ಇಲ್ಲ’ ಎಂದು ತಿಳಿಸಿದರು.
‘ಕಾಡುಗೊಲ್ಲರು ಅತ್ಯಂತ ಹಿಂದುಳಿದವರಾಗಿದ್ದು, ಗುಡ್ಡಗಾಡಿನ ಅಂಚಿನಲ್ಲಿ ಬೇಲಿ ಹಾಕಿಕೊಂಡು ನಿಕೃಷ್ಟ ಬದುಕು ನಡೆಸುತ್ತಿದ್ದಾರೆ. ಶಿಕ್ಷಣ, ಸಾಮಾಜಿಕ ಸ್ಥಿತಿಗತಿ ಹಿಂದುಳಿದಿದ್ದು, ಮೌಢ್ಯಚಾರಣೆಯಲ್ಲಿ ಮುಳುಗಿದ್ದಾರೆ. ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಎಸ್ಟಿ ಮೀಸಲಾತಿ ಸೌಲಭ್ಯ ಕಲ್ಪಿಸುವುದು ಸರ್ಕಾರದ ಕರ್ತವ್ಯ’ ಎಂದು ಒತ್ತಾಯಿಸಿದರು.
‘ಸಮೀಕ್ಷೆ ವೇಳೆ ಚಿತ್ರದುರ್ಗ, ತುಮಕೂರು, ದಾವಣಗೆರೆ, ಬಳ್ಳಾರಿ ಭಾಗದಲ್ಲಿರುವವರು ಕಾಡುಗೊಲ್ಲರು ಎಂದು ಬರೆಸುವುದು ಅಗತ್ಯ. ಈ ಮೂಲಕ ನಮ್ಮ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪಡೆಯಲು ಸಾಧ್ಯವಾಗಲಿದೆ’ ಎಂದು ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ. ಕೃಷ್ಣಮೂರ್ತಿ ಮನವಿ ಮಾಡಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ, ಮುಖಂಡರಾದ ತಿಮ್ಮಣ್ಣ, ಷಣ್ಮುಖಪ್ಪ, ಸುರೇಶ್ ಇದ್ದರು.
ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ ಮಧ್ಯ ಕರ್ನಾಟಕದಲ್ಲಿರುವ ಕಾಡುಗೊಲ್ಲರು ಜಾತಿ ಕಾಲಂನಲ್ಲಿ ಕಾಡುಗೊಲ್ಲರು ಎಂದು ಬರೆಸಬೇಕು. ಜತೆಗೆ ಇತರೆಡೆಯವರು ಅಲ್ಲಿ ಗುರುತಿಸಿಕೊಂಡಿರುವ ಉಪಜಾತಿ ಬರೆಸಬೇಕು. ಈ ವಿಚಾರದಲ್ಲಿ ಯಾವುದೇ ಗೊಂದಲಕ್ಕೆ ಒಳಗಾಗಬೇಡಿ.ಕೃಷ್ಣ ಯಾದವಾನಂದ ಸ್ವಾಮೀಜಿ ಯಾದವಾನಂದ ಗುರುಪೀಠ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.