ಮೊಳಕಾಲ್ಮುರು: ತಾಲ್ಲೂಕಿನ ಹಾನಗಲ್ನಲ್ಲಿ ಕುಸಿತದ ಭೀತಿ ಉಂಟು ಮಾಡಿರುವ ಕಲ್ಲಿನ ಬೆಟ್ಟದ ಸ್ಥಳಕ್ಕೆ ಗುರುವಾರ ತಹಶೀಲ್ದಾರ್ ಟಿ.ಜಗದೀಶ್ ಭೇಟಿ ನೀಡಿ ಪರಿಶೀಲಿಸಿದರು.
ರಾಷ್ಟ್ರೀಯ ಹೆದ್ದಾರಿ-150ಎ ನಿರ್ಮಾಣ ಕಾಮಗಾರಿ ವೇಳೆ ಬೆಟ್ಟ ತುಂಡು ಮಾಡಿರುವುದು ಸಮಸ್ಯೆಗೆ ಕಾರಣವಾಗಿದೆ. ಮಣ್ಣು ಸವಕಳಿಯಿಂದ ಕಲ್ಲುಗಳು ಕೆಳಗೆ ಸರಿಯುತ್ತಿರುವ ಬಗ್ಗೆ ಸ್ಥಳೀಯರು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ದೊಡ್ಡ ಕಲ್ಲುಗಳು ಸಹ ಹೆದ್ದಾರಿಗೆ ಜಾರಿ ಬರುವ ಸಾಧ್ಯತೆ ಇದೆ. ಅನಾಹುತ ಸಂಭವಿಸುವ ಮೊದಲು ಪರಿಹಾರ ಕಂಡುಕೊಳ್ಳಲಾಗುವುದು ಎಂದು ತಹಶೀಲ್ದಾರ್ ಹೇಳಿದರು.
ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯಿತಿ ಹೆದ್ದಾರಿ ಪ್ರಾಧಿಕಾರಕ್ಕೆ ಪತ್ರ ಬರೆದಿದೆ. ಈ ದಾಖಲೆಗಳನ್ನು ತರಿಸಿಕೊಳ್ಳಲಾಗಿದೆ. ಸಮಸ್ಯೆ ಬಗ್ಗೆ ಜಿಲ್ಲಾಧಿಕಾರಿಗೆ ಪತ್ರ ಬರೆದು ವಿವರಿಸಲಾಗುವುದು. ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಪರಿಹಾರ ಸೂಚಿಸುವಂತೆ ತಿಳಿಸಲಾಗುವುದು ಎಂದು ತಹಶೀಲ್ದಾರ್ ಹೇಳಿದರು. ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.
ಬೆಟ್ಟ ಕುಸಿಯುತ್ತಿರುವ ಬಗ್ಗೆ ಮೇ 20ರಂದು ‘ಪ್ರಜಾವಾಣಿ’ಯಲ್ಲಿ ‘ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಕಲ್ಲಿನ ಬೆಟ್ಟ’ ಶೀರ್ಷಿಕೆ ಅಡಿ ವರದಿ ಪ್ರಕಟವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.