ಮೊಳಕಾಲ್ಮುರು: ತಾಲ್ಲೂಕಿನ ಕೊಂಡ್ಲಹಳ್ಳಿಯಲ್ಲಿ ಬೀದಿ ನಾಯಿಗಳನ್ನು ಸೆರೆ ಹಿಡಿಯಲು ಗ್ರಾಮ ಪಂಚಾಯಿತಿ ಶನಿವಾರ ಕಾರ್ಯಾಚರಣೆ ನಡೆಸಿತು.
ಭದ್ರಾವತಿಯಿಂದ ಕರೆಸಿದ್ದ ನಾಯಿ ಹಿಡಿಯುವ ವ್ಯಕ್ತಿಗಳು 166 ಬೀದಿನಾಯಿಗಳನ್ನು ಸೆರೆಹಿಡಿದರು. ಪ್ರತಿ ನಾಯಿ ಸೆರೆಗೆ ₹350 ನಂತೆ ಹಣ ಪಾವತಿ ಮಾಡಲಾಗಿದೆ. ಹಿಡಿದ ನಾಯಿಗಳನ್ನು ದೂರದ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ಗ್ರಾಮಪಂಚಾಯಿತಿ ಅಧಿಕಾರಿಗಳು ಮಾಹಿತಿ ನೀಡಿದರು.
ಈಚೆಗೆ ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ತೀವ್ರವಾಗಿರುವ ಜತೆಗೆ ಕೆಲವರಿಗೆ ಅವು ಕಡಿದಿರುವ ಘಟನೆಗಳೂ ವರದಿಯಾಗಿದ್ದವು. ಕಳೆದ ವಾರ ಯುವಕನೊಬ್ಬ ನಾಯಿ ಕಡಿತದಿಂದ ಮೃತಪಟ್ಟಿದ್ದು, ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗುವ ಜತೆಗೆ ಆರೋಗ್ಯ ಇಲಾಖೆಯು ಕ್ರಮ ಕೈಗೊಳ್ಳುವಂತೆ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿತ್ತು. ಅಧಿಕಾರಿಗಳು ತಕ್ಷಣವೇ ಎಚ್ಚೆತ್ತು ಕ್ರಮ ಕೈಗೊಂಡಿರುವುದನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.
ಗ್ರಾಮದ ಚಿಕನ್ ಅಂಗಡಿಗಳ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಸೂಚನೆ ನೀಡಬೇಕು ಎಂದು ಮನವಿ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.